ಲಕ್ಷ್ಮೇಶ್ವರ: ಮುಂಡಾ ಹಗರದಲ್ಲಿ ತಮ್ಮ ಪಾತ್ರವಿಲ್ಲ ಎನ್ನುವ ಸಿಎಂ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿ ತನಿಖೆ ಎದುರಿಸಬೇಕು ಎಂದು ಮಾಜಿ ಸಚಿವ ಶ್ರೀರಾಮುಲು ಹೇಳಿದರು.
ಲಕ್ಷ್ಮೇಶ್ವರದ ಸಮೀಪದ ಅಡರಕಟ್ಟಿ ಗ್ರಾಮದಲ್ಲಿ ಬೂದವಂತ ಬಸವಣ್ಣ ದೇವಸ್ಥಾನದಲ್ಲಿ ನಡೆದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದರು.ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿದ್ದು, ಮುಡಾ ಹಗರರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಪಾತ್ರವಿಲ್ಲ ಎಂದು ಹೇಳುತ್ತಿರುವುದು ಸತ್ಯವಾಗಿದ್ದರೆ ಮುಖ್ಯಮಂತ್ರಿ ಸ್ಥಾನಕ್ಕೆ ರಾಜಿನಾಮೆ ನೀಡಿ ತನಿಖೆ ಎದುರಿಸಬೇಕು. ಮುಖ್ಯಮಂತ್ರಿ ಸಿದ್ದರಾಮಯ್ಯ ತಾವು ಶುದ್ಧ ಹಸ್ತರು ಎಂಬುದನ್ನು ರಾಜ್ಯದ ಜನರ ಮುಂದೆ ತೋರಿಸಲು ರಾಜಿನಾಮೆ ನೀಡಿ ತನಿಖೆಗೆ ಸಹಕಾರ ನೀಡಲಿ, ಯಡಿಯೂರಪ್ಪನವರ ಕಾಲದಲ್ಲಿ ಗವರ್ನರ್ ಹಂಸರಾಜ ಭಾರದ್ವಾಜ ಪ್ರಾಸಿಕ್ಯೂಶನ್ ಅವಕಾಶ ಮಾಡಿಕೊಟ್ಟಿದ್ದು, ಈಗಲೂ ಹಾಗೇ ಆಗಿದೆ ಅದರಲ್ಲಿ ತಪ್ಪೇನು ಎಂದು ಪ್ರಶ್ನಿಸಿದರು.
ಬಿಜೆಪಿ ಹಾಗೂ ಜೆಡಿಎಸ್ ಪಕ್ಷದ ಮೈತ್ರಿಯೊಂದಿಗೆ ಮೈಸೂರನಿಂದ ಬೆಂಗಳೂರವರೆಗೂ ೮ ದಿನಗಳ ಕಾಲ ಎಲ್ಲರೂ ಸೇರಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಪಾದಯಾತ್ರೆ ಕೈಗೊಳ್ಳುತ್ತೇವೆ. ಇದರಲ್ಲಿ ಮುಡಾ ಹಗರಣ, ವಾಲ್ಮೀಕಿ ಹಗರಣ ಎಲ್ಲವನ್ನು ಪ್ರಸ್ತಾಪಿಸುತ್ತೇವೆ. ಪಾದಯಾತ್ರೆಯಲ್ಲಿ ಯಾವುದೇ ಭಿನ್ನಾಭಿಪ್ರಾಯವಿಲ್ಲ, ಮಾಜಿ ಸಿಎಂ ಬಿ.ಎಸ್ವೈ, ಕೇಂದ್ರ ಸಚಿವ ಕುಮಾರಸ್ವಾಮಿ, ಬಿ.ವೈ. ವಿಜಯೇಂದ್ರ, ಆರ್.ಅಶೋಕ, ಕೇಂದ್ರ ಮಂತ್ರಿಗಳು ಸೇರಿದಂತೆ ಜೆಡಿಎಸ್, ಬಿಜೆಪಿ ಜಂಟಿಯಾಗಿ ಈ ಹೋರಾಟದಲ್ಲಿ ಭಾಗವಹಿಸುತ್ತಿದ್ದೇವೆ ಎಂದರು.ಪಕ್ಷದಲ್ಲಿನ ಸಣ್ಣ ಪುಟ್ಟ ಸಮಸ್ಯೆಗಳು ಬಗೆ ಹರಿದಿವೆ. ಕಾಂಗ್ರೆಸ್ ಸರ್ಕಾರ ಬಂದಾಗಿನಿಂದ ಯಾವುದೇ ಅಭಿವೃದ್ಧಿ ಕಾರ್ಯಗಳು ಆಗುತ್ತಿಲ್ಲ, ದರೋಡೆ, ಕೊಲೆ ಸುಲಿಗೆಗಳು ಹೆಚ್ಚಾಗಿವೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟು ಹೋಗಿದೆ. ಭ್ರಷ್ಟಾಚಾರ ತಾಂಡವವಾಡುತ್ತಿದೆ,ಈ ಎಲ್ಲ ವಿಚಾರಗಳನ್ನು ಜನರ ಮುಂದಿಡುತ್ತೇವೆ.ಬಸನಗೌಡ ಪಾಟೀಲ ಯತ್ನಾಳ, ರಮೇಶ ಜಾರಕಿಹೊಳಿ ಪಾದಯಾತ್ರೆಗೆ ಹೈಕಮಾಂಡ್ ಸಹಮತ ನೀಡುತ್ತಾರೆ, ಪಕ್ಷದಲ್ಲಿರುವ ಸಣ್ಣ ಪುಟ್ಟ ಭಿನ್ನಾಭಿಪ್ರಾಯ ಸರಿದೂಗಿಸಿಕೊಂಡು ಹೋಗುತ್ತೇವೆ ಎಂದು ಹೇಳಿದರು.
ಈ ವೇಳೆ ಬಿಜೆಪಿ ಮಂಡಳ ಅಧ್ಯಕ್ಷ ಸುನೀಲ ಮಹಾಂತಶೆಟ್ಟರ ಇದ್ದರು.