9 ವಿ.ವಿ.ಗಳ ಮುಚ್ಚುವ ಕಾಂಗ್ರೆಸ್ ಸರ್ಕಾರ ತೀರ್ಮಾನ ಖಂಡನೀಯ

KannadaprabhaNewsNetwork | Published : Feb 17, 2025 12:32 AM

ಸಾರಾಂಶ

ರಾಜ್ಯದ 9 ವಿಶ್ವವಿದ್ಯಾಲಯಗಳನ್ನು ಮುಚ್ಚಲು ಕರ್ನಾಟಕ ರಾಜ್ಯ ಕಾಂಗ್ರೆಸ್ ಸರ್ಕಾರ ತೀರ್ಮಾನಿಸಿದೆ. ಈ ಕುರಿತು ಸಚಿವ ಸಂಪುಟದ ಉಪ ಸಮಿತಿ ನಿರ್ಧಾರ ಪ್ರಕಟಿಸಿದೆ. ಇದನ್ನು ಆಲ್ ಇಂಡಿಯಾ ಡೆಮಾಕ್ರಟಿಕ್ ಸ್ಟೂಡೆಂಟ್ಸ್ ಆರ್ಗನೈಜೇಷನ್ ಖಂಡಿಸುತ್ತದೆ ಎಂದು ಸಂಘಟನೆ ಜಿಲ್ಲಾ ಸಮಿತಿ ಕಾರ್ಯದರ್ಶಿ ಟಿ.ಎಸ್.ಸುಮನ್ ತಿಳಿಸಿದ್ದಾರೆ.

- ಎಐಡಿಎಸ್‌ಒ ಜಿಲ್ಲಾ ಸಮಿತಿ ಕಾರ್ಯದರ್ಶಿ ಟಿ.ಎಸ್.ಸುಮನ್ ಹೇಳಿಕೆ- - - ದಾವಣಗೆರೆ: ರಾಜ್ಯದ 9 ವಿಶ್ವವಿದ್ಯಾಲಯಗಳನ್ನು ಮುಚ್ಚಲು ಕರ್ನಾಟಕ ರಾಜ್ಯ ಕಾಂಗ್ರೆಸ್ ಸರ್ಕಾರ ತೀರ್ಮಾನಿಸಿದೆ. ಈ ಕುರಿತು ಸಚಿವ ಸಂಪುಟದ ಉಪ ಸಮಿತಿ ನಿರ್ಧಾರ ಪ್ರಕಟಿಸಿದೆ. ಇದನ್ನು ಆಲ್ ಇಂಡಿಯಾ ಡೆಮಾಕ್ರಟಿಕ್ ಸ್ಟೂಡೆಂಟ್ಸ್ ಆರ್ಗನೈಜೇಷನ್ ಖಂಡಿಸುತ್ತದೆ ಎಂದು ಸಂಘಟನೆ ಜಿಲ್ಲಾ ಸಮಿತಿ ಕಾರ್ಯದರ್ಶಿ ಟಿ.ಎಸ್.ಸುಮನ್ ತಿಳಿಸಿದ್ದಾರೆ.

ವಿಶ್ವವಿದ್ಯಾಲಯಗಳು ಜ್ಞಾನವೃದ್ಧಿಯ ಪೀಠಗಳು. ಈ ಮೂಲ ಪರಿಕಲ್ಪನೆಯನ್ನೇ ಗಾಳಿಗೆ ತೂರಿ ಹಿಂದಿನ ಬಿಜೆಪಿ ಸರ್ಕಾರವು ಜಿಲ್ಲೆಗೊಂದು ವಿಶ್ವವಿದ್ಯಾಲಯಗಳನ್ನು ಪ್ರಾರಂಭಿಸಿತು. ಯಾವುದೇ ಶಿಕ್ಷಣ ತಜ್ಞರ ಅಭಿಪ್ರಾಯಗಳನ್ನು ಕೇಳದೇ, ಅಪ್ರಜಾತಾಂತ್ರಿಕವಾಗಿ ಈ ವಿಶ್ವವಿದ್ಯಾಲಯಗಳನ್ನು ಪ್ರಾರಂಭಿಸಲಾಯಿತು. ನೃಪತುಂಗ, ಮಹಾರಾಣಿ ಕ್ಲಸ್ಟರ್ ವಿಶ್ವವಿದ್ಯಾಲಯ ಎಂಬ ಪಟ್ಟ ಕಟ್ಟಿ, ಇವುಗಳನ್ನು ಸ್ವಹಣಕಾಸು ಸಂಸ್ಥೆಗಳನ್ನಾಗಿ ಮಾಡಿ, 3 ಪಟ್ಟು ಶುಲ್ಕ ಹೆಚ್ಚಿಸಲಾಗಿತ್ತು. ಈ ಕುರಿತಾಗಿಯೂ ಎಐಡಿಎಸ್‌ಒ ಅನೇಕ ಬಾರಿ ಪ್ರತಿರೋಧ ವ್ಯಕ್ತಪಡಿಸಿತ್ತು. ಒಂದು ವಿಶ್ವವಿದ್ಯಾಲಯಕ್ಕೆ ತಲಾ ₹2 ಕೋಟಿ ಅನುದಾನವನ್ನು ಮಾತ್ರ ನಿಗದಿಪಡಿಸಲಾಯಿತು ಎಂದಿದ್ದಾರೆ.

ಸರ್ಕಾರದ ಈ ಅವೈಜ್ಞಾನಿಕ ನಡೆಯನ್ನು ಎಐಡಿಎಸ್‌ಓ ಪ್ರಶ್ನಿಸಿತ್ತು. ಹಿಂದಿನ ಬಿಜೆಪಿ ಸರ್ಕಾರದ ರೀತಿಯಲ್ಲೇ ಕಾಂಗ್ರೆಸ್ ಸರ್ಕಾರವು ಎಲ್ಲ ಪ್ರಜಾತಾಂತ್ರಿಕ ಪ್ರಕ್ರಿಯೆಗಳನ್ನು ಗಾಳಿಗೆ ತೂರಿ ಕೇವಲ ತನ್ನ ಸಂಪುಟ ಸಭೆಯ ಉಪಸಮಿತಿಯ ಮೂಲಕ 9 ವಿಶ್ವವಿದ್ಯಾಲಯಗಳನ್ನು ಮುಚ್ಚುವ ನಿರ್ಧಾರವನ್ನು ಕೈಗೊಂಡಿದೆ. ಸರ್ಕಾರದ ಈ ನಡೆಯನ್ನು ಎಐಡಿಎಸ್‌ಒ ಉಗ್ರವಾಗಿ ಖಂಡಿಸುತ್ತದೆ.

ಬಾಗಿಲು ಮುಚ್ಚಲಿರುವ 9 ವಿಶ್ವವಿದ್ಯಾಲಯಗಳ ವಿದ್ಯಾರ್ಥಿಗಳು, ಬೋಧಕರು ಹಾಗೂ ಇತರೆ ಸಿಬ್ಬಂದಿ ಇದರ ಹೊಣೆ ಯಾರದ್ದೆಂಬ ಪ್ರಶ್ನೆ ಸರ್ಕಾರದ ಮುಂದಿಡುತ್ತಿದ್ದಾರೆ. ಶಿಕ್ಷಣ ಕ್ಷೇತ್ರದ ಯಾವುದೇ ನಿರ್ಧಾರ ಏಕಪಕ್ಷೀಯವಾಗಿ ಕೈಗೊಳ್ಳದೇ, ಬೋಧಕರು, ಪಾಲಕರು, ವಿದ್ಯಾರ್ಥಿಗಳು, ಶಿಕ್ಷಣ ತಜ್ಞರನ್ನೊಳಗೊಂಡ ಪ್ರಜಾತಾಂತ್ರಿಕ ಪ್ರಕ್ರಿಯೆ ಅನುಸರಿಸಬೇಕು ಎಂದು ಸರ್ಕಾರವನ್ನು ಎಐಡಿಎಸ್‌ಒ ಆಗ್ರಹಿಸಿದೆ.

Share this article