ಕನ್ನಡಪ್ರಭ ವಾರ್ತೆ ಚಿಕ್ಕಬಳ್ಳಾಪುರ
ನಗರದ ಸರ್. ಎಂ. ವಿಶ್ವೇಶ್ವರಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ 75ನೇ ಗಣರಾಜ್ಯೋತ್ಸವ, ಸಂವಿಧಾನ ಜಾಗೃತಿ ಜಾಥಾದ ಸ್ತಬ್ಧಚಿತ್ರಕ್ಕೆ ಚಾಲನೆ, ಜಿಲ್ಲಾ ಮಟ್ಟದ ಫಲಪುಷ್ಪ ಪ್ರದರ್ಶನ ಕಾರ್ಯಕ್ರಮಕ್ಕೆ ಚಾಲನೆ ನೀಡಿ, ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಗದೀಶ್ ಶೆಟ್ಟರ್ ಪಕ್ಷ ಬಿಟ್ಟು ಹೊಗಿರುವುದು ತುಂಬಾ ನೋವಾಗಿದೆ. ಸಜ್ಜನ ರಾಜಕಾರಣಿಯಾಗಿದ್ದ ಶೆಟ್ಟರ್ ಸಾಹೇಬರು, ರಾಜಕೀಯ ಹಿರಿತನ, ಸನ್ನಡತೆ ಹಾಗೂ ಜವಾಬ್ದಾರಿ ಸ್ಥಾನದಲ್ಲಿದ್ದ ಅವರು ಈ ರೀತಿ ಮಾಡಬಾರದಿತ್ತು. ಬಿಜೆಪಿಯಲ್ಲಿ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ಟಿಕೆಟ್ ನೀಡಲಿಲ್ಲವೆಂದು ಕಾಂಗ್ರೆಸ್ ಪಕ್ಷಕ್ಕೆ ಅವರಾಗಿಯೇ ಬಂದರು. ಅವರಿಗೆ ಕಾಂಗ್ರೆಸ್ ಪಕ್ಷ ಟಿಕೆಟ್ ನೀಡಿತು.ಆದರೆ ಚುನಾವಣೆಯಲ್ಲಿ 30 ಸಾವಿರಕ್ಕೂ ಅಧಿಕ ಮತಗಳಿಂದ ಸೋತರು.ಆದರೂ ಅವರ ಸನ್ನಡತೆ ಮತ್ತು ಸೇವಾಹಿರಿತನ ವನ್ನು ಗೌರವಿಸಿ ವಿಧಾನ ಪರಿಷತ್ ಸದಸ್ಯರನ್ನಾಗಿ ಮಾಡಿ ಬಹಳ ಗೌರವದಿಂದ ನಡೆಸಿಕೊಂಡಿತ್ತು. ಅವರು ಯಾವ ಕಾರಣಕ್ಕೆ ಹೋಗಿದ್ದಾರೆ ಅಂತ ಅವರೇ ಉತ್ತರ ಕೊಡಬೇಕು. ಜಗದೀಶ್ ಶೆಟ್ಟರ್ ಸಾಹೇಬರಿಗೆ ಒಳ್ಳೆಯದಾಗಲಿ ಎಂದರು.
ಲಕ್ಷ್ಮಣ ಸವದಿ ಬಿಜೆಪಿಗೆ ಸೇರ್ಪಡೆಯಾಗುವ ವಿಚಾರದ ಪ್ರಶ್ನೆಗೆ ಉತ್ತರಿಸಿದ ಅವರು, ಸವದಿ ಅವರು ನನಗೆ ಆತ್ಮೀಯ ಗೆಳೆಯರು. ಅವರು 70 ಸಾವಿರಕ್ಕೂ ಅಧಿಕ ಮತಗಳ ಅಂತರದಿಂದ ಶಾಸಕರಾಗಿ ಗೆಲುವು ಸಾಧಿಸಿದ್ದಾರೆ. ಕಾಂಗ್ರೆಸ್ ಪಕ್ಷ ಅವರನ್ನು ಗೌರವದಿಂದ ನಡೆಸಿಕೊಂಡಿದೆ ಎಂದರು.ಸತೀಶ್ ಜಾರಕಿಹೊಳಿ ಡಿಸಿಎಂ ಬೇಡಿಕೆ ವಿಚಾರವಾಗಿ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಎಲ್ಲರಿಗೂ ಅಧಿಕಾರದ ಆಸೆ ಇರುತ್ತದೆ. ಅಂತಿಮವಾಗಿ ಪಕ್ಷದ ಹೈಕಮಾಂಡ್ ತೀರ್ಮಾನ ಮಾಡಲಿದೆ. ಪಕ್ಷದ ಚೌಕಟ್ಟಿನಲ್ಲಿ ವರಿಷ್ಠರ ತೀರ್ಮಾನಕ್ಕೆ ಎಲ್ಲರೂ ಗೌರವ ಕೊಡಲಿದ್ದಾರೆ ಎಂದರು.
ಸರ್.ಎಂ.ವಿ. ಕ್ರೀಡಾಂಗಣವನ್ನು ಅಂತಾರಾಷ್ಟ್ರೀಯ ಮಟ್ಟದಲ್ಲಿ ಅಭಿವೃದ್ಧಿಗೊಳಿಸಲು 70 ಕೋಟಿಯ ಅನುದಾನಕ್ಕಾಗಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಇತರೆ ಮೂಲಗಳಿಂದಲೂ ಅನುದಾನ ಕ್ರೋಢಿಕರಣಕ್ಕೆ ಕ್ರಮವಹಿಸಲಾಗಿದೆ. ನಂದಿಬೆಟ್ಟದಲ್ಲಿ ರೋಪ್ ವೇ ನಿರ್ಮಾಣಕ್ಕಾಗಿ 5-12 ಎಕರೆ ಜಮೀನು, ಶಿಡ್ಲಘಟ್ಟದಲ್ಲಿ ಸರ್ಕಾರಿ ಹೈಟೆಕ್ ರೇಷ್ಮೆ ಮಾರುಕಟ್ಟೆ ನಿರ್ಮಾಣಕ್ಕಾಗಿ 9-38 ಎಕರೆ ಜಮೀನು, ಸರ್ಕಾರಿ ತಾಂತ್ರಿಕ ಮಹಾ ವಿದ್ಯಾಲಯ ಕಟ್ಟಡ ನಿರ್ಮಾಣಕ್ಕಾಗಿ 9-38 ಎಕರೆ ಜಮೀನು ಮತ್ತು ಚಿಂತಾಮಣಿ ಐ.ಟಿ.ಐ ಕಾಲೇಜು ಕಟ್ಟಡ ನಿರ್ಮಾಣಕ್ಕಾಗಿ 2-20 ಎಕರೆ ಜಮೀನು ನೀಡಲಾಗಿದೆ ಎಂದರು.
ನರೇಗಾ ಉದ್ಯೋಗ ಖಾತರಿ ಯೋಜನೆಯಡಿ 2023-24 ನೇ ಸಾಲಿಗೆ 33 ಲಕ್ಷ ಮಾನವ ದಿನಗಳ ಸೃಜನೆಗೆ ಗುರಿ ನಿಗಧಿಪಡಿಸಲಾಗಿದ್ದು, ಇಲ್ಲಿಯವರೆಗೂ 28.61 ಲಕ್ಷ ಮಾನವ ದಿನಗಳನ್ನು (ಶೇಕಡ 86.69%) ಸೃಜನೆ ಮಾಡಲಾಗಿದೆ. ಒಟ್ಟು ರು. 130.58 ಕೋಟಿಗಳನ್ನು ಆರ್ಥಿಕವಾಗಿ ವೆಚ್ಚ ಮಾಡಲಾಗಿದೆ ಎಂದು ತಿಳಿಸಿದರು.