ಕಾಂಗ್ರೆಸ್ ಗ್ಯಾರಂಟಿಗಳಿಂದ ಬಿಜೆಪಿಗೆ ಬಲ ಕುಗ್ಗಿದೆ; ಡಾ.ಎಂ.ಸಿ.ಸುಧಾಕರ್‌

KannadaprabhaNewsNetwork |  
Published : Jan 27, 2024, 01:18 AM IST
ಸಿಕೆಬಿ-16  ಸುದ್ದಿಗಾರರೊಂದಿಗೆ ಸಚಿವ ಡಾ.ಎಂ.ಸಿ.ಸುಧಾಕರ್‌ ಮಾತನಾಡಿದರು | Kannada Prabha

ಸಾರಾಂಶ

ಜಗದೀಶ್ ಶೆಟ್ಟರ್ ಪಕ್ಷ ಬಿಟ್ಟು ಹೊಗಿರುವುದು ತುಂಬಾ ನೋವಾಗಿದೆ. ಸಜ್ಜನ ರಾಜಕಾರಣಿಯಾಗಿದ್ದ ಶೆಟ್ಟರ್ ಸಾಹೇಬರು, ರಾಜಕೀಯ ಹಿರಿತನ, ಸನ್ನಡತೆ ಹಾಗೂ ಜವಾಬ್ದಾರಿ ಸ್ಥಾನದಲ್ಲಿದ್ದ ಅವರು ಈ ರೀತಿ ಮಾಡಬಾರದಿತ್ತು.

ಕನ್ನಡಪ್ರಭ ವಾರ್ತೆ ಚಿಕ್ಕಬಳ್ಳಾಪುರ

ಕಾಂಗ್ರೆಸ್ ಗ್ಯಾರಂಟಿಗಳಿಂದ ಬಿಜೆಪಿಗೆ ಬಲ ಕುಗ್ಗಿದೆ. ಅದರಿಂದಲೇ ಮಾಜಿ ಮುಖ್ಯಮಂತ್ರಿ ಜಗದೀಶ್‌ ಶೆಟ್ಟರ್ ಅವರನ್ನು ಪಕ್ಷಕ್ಕೆ ವಾಪಸ್‌ ಕರೆದುಕೊಂಡಿದೆ ಎಂದು ಉನ್ನತ ಶಿಕ್ಷಣ ಸಚಿವ ಜಿಲ್ಲಾ ಉಸ್ತುವಾರಿ ಡಾ.ಎಂ.ಸಿ.ಸುಧಾಕರ್‌ ಹೇಳಿದರು.

ನಗರದ ಸರ್. ಎಂ. ವಿಶ್ವೇಶ್ವರಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ 75ನೇ ಗಣರಾಜ್ಯೋತ್ಸವ, ಸಂವಿಧಾನ ಜಾಗೃತಿ ಜಾಥಾದ ಸ್ತಬ್ಧಚಿತ್ರಕ್ಕೆ ಚಾಲನೆ, ಜಿಲ್ಲಾ ಮಟ್ಟದ ಫಲಪುಷ್ಪ ಪ್ರದರ್ಶನ ಕಾರ್ಯಕ್ರಮಕ್ಕೆ ಚಾಲನೆ ನೀಡಿ, ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಗದೀಶ್ ಶೆಟ್ಟರ್ ಪಕ್ಷ ಬಿಟ್ಟು ಹೊಗಿರುವುದು ತುಂಬಾ ನೋವಾಗಿದೆ. ಸಜ್ಜನ ರಾಜಕಾರಣಿಯಾಗಿದ್ದ ಶೆಟ್ಟರ್ ಸಾಹೇಬರು, ರಾಜಕೀಯ ಹಿರಿತನ, ಸನ್ನಡತೆ ಹಾಗೂ ಜವಾಬ್ದಾರಿ ಸ್ಥಾನದಲ್ಲಿದ್ದ ಅವರು ಈ ರೀತಿ ಮಾಡಬಾರದಿತ್ತು. ಬಿಜೆಪಿಯಲ್ಲಿ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ಟಿಕೆಟ್‌ ನೀಡಲಿಲ್ಲವೆಂದು ಕಾಂಗ್ರೆಸ್ ಪಕ್ಷಕ್ಕೆ ಅವರಾಗಿಯೇ ಬಂದರು. ಅವರಿಗೆ ಕಾಂಗ್ರೆಸ್ ಪಕ್ಷ ಟಿಕೆಟ್‌ ನೀಡಿತು.ಆದರೆ ಚುನಾವಣೆಯಲ್ಲಿ 30 ಸಾವಿರಕ್ಕೂ ಅಧಿಕ ಮತಗಳಿಂದ ಸೋತರು.ಆದರೂ ಅವರ ಸನ್ನಡತೆ ಮತ್ತು ಸೇವಾಹಿರಿತನ ವನ್ನು ಗೌರವಿಸಿ ವಿಧಾನ ಪರಿಷತ್‌ ಸದಸ್ಯರನ್ನಾಗಿ ಮಾಡಿ ಬಹಳ ಗೌರವದಿಂದ ನಡೆಸಿಕೊಂಡಿತ್ತು. ಅವರು ಯಾವ ಕಾರಣಕ್ಕೆ ಹೋಗಿದ್ದಾರೆ ಅಂತ ಅವರೇ ಉತ್ತರ ಕೊಡಬೇಕು. ಜಗದೀಶ್‌ ಶೆಟ್ಟರ್ ಸಾಹೇಬರಿಗೆ ಒಳ್ಳೆಯದಾಗಲಿ ಎಂದರು.

ಲಕ್ಷ್ಮಣ ಸವದಿ ಬಿಜೆಪಿಗೆ ಸೇರ್ಪಡೆಯಾಗುವ ವಿಚಾರದ ಪ್ರಶ್ನೆಗೆ ಉತ್ತರಿಸಿದ ಅವರು, ಸವದಿ ಅವರು ನನಗೆ ಆತ್ಮೀಯ ಗೆಳೆಯರು. ಅವರು 70 ಸಾವಿರಕ್ಕೂ ಅಧಿಕ ಮತಗಳ ಅಂತರದಿಂದ ಶಾಸಕರಾಗಿ ಗೆಲುವು ಸಾಧಿಸಿದ್ದಾರೆ. ಕಾಂಗ್ರೆಸ್ ಪಕ್ಷ ಅವರನ್ನು ಗೌರವದಿಂದ ನಡೆಸಿಕೊಂಡಿದೆ ಎಂದರು.

ಸತೀಶ್ ಜಾರಕಿಹೊಳಿ ಡಿಸಿಎಂ ಬೇಡಿಕೆ ವಿಚಾರವಾಗಿ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಎಲ್ಲರಿಗೂ ಅಧಿಕಾರದ ಆಸೆ ಇರುತ್ತದೆ. ಅಂತಿಮವಾಗಿ ಪಕ್ಷದ ಹೈಕಮಾಂಡ್ ತೀರ್ಮಾನ ಮಾಡಲಿದೆ. ಪಕ್ಷದ ಚೌಕಟ್ಟಿನಲ್ಲಿ ವರಿಷ್ಠರ ತೀರ್ಮಾನಕ್ಕೆ ಎಲ್ಲರೂ ಗೌರವ ಕೊಡಲಿದ್ದಾರೆ ಎಂದರು.

ಅಂತಾರಾಷ್ಟ್ರೀಯ ಕ್ರೀಡಾಂಗಣಕ್ಕೆ ಅನುದಾನ ಕ್ರೋಢಿಕರಣ:

ಸರ್.ಎಂ.ವಿ. ಕ್ರೀಡಾಂಗಣವನ್ನು ಅಂತಾರಾಷ್ಟ್ರೀಯ ಮಟ್ಟದಲ್ಲಿ ಅಭಿವೃದ್ಧಿಗೊಳಿಸಲು 70 ಕೋಟಿಯ ಅನುದಾನಕ್ಕಾಗಿ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಇತರೆ ಮೂಲಗಳಿಂದಲೂ ಅನುದಾನ ಕ್ರೋಢಿಕರಣಕ್ಕೆ ಕ್ರಮವಹಿಸಲಾಗಿದೆ. ನಂದಿಬೆಟ್ಟದಲ್ಲಿ ರೋಪ್ ವೇ ನಿರ್ಮಾಣಕ್ಕಾಗಿ 5-12 ಎಕರೆ ಜಮೀನು, ಶಿಡ್ಲಘಟ್ಟದಲ್ಲಿ ಸರ್ಕಾರಿ ಹೈಟೆಕ್ ರೇಷ್ಮೆ ಮಾರುಕಟ್ಟೆ ನಿರ್ಮಾಣಕ್ಕಾಗಿ 9-38 ಎಕರೆ ಜಮೀನು, ಸರ್ಕಾರಿ ತಾಂತ್ರಿಕ ಮಹಾ ವಿದ್ಯಾಲಯ ಕಟ್ಟಡ ನಿರ್ಮಾಣಕ್ಕಾಗಿ 9-38 ಎಕರೆ ಜಮೀನು ಮತ್ತು ಚಿಂತಾಮಣಿ ಐ.ಟಿ.ಐ ಕಾಲೇಜು ಕಟ್ಟಡ ನಿರ್ಮಾಣಕ್ಕಾಗಿ 2-20 ಎಕರೆ ಜಮೀನು ನೀಡಲಾಗಿದೆ ಎಂದರು.

ನರೇಗಾ ಉದ್ಯೋಗ ಖಾತರಿ ಯೋಜನೆ:

ನರೇಗಾ ಉದ್ಯೋಗ ಖಾತರಿ ಯೋಜನೆಯಡಿ 2023-24 ನೇ ಸಾಲಿಗೆ 33 ಲಕ್ಷ ಮಾನವ ದಿನಗಳ ಸೃಜನೆಗೆ ಗುರಿ ನಿಗಧಿಪಡಿಸಲಾಗಿದ್ದು, ಇಲ್ಲಿಯವರೆಗೂ 28.61 ಲಕ್ಷ ಮಾನವ ದಿನಗಳನ್ನು (ಶೇಕಡ 86.69%) ಸೃಜನೆ ಮಾಡಲಾಗಿದೆ. ಒಟ್ಟು ರು. 130.58 ಕೋಟಿಗಳನ್ನು ಆರ್ಥಿಕವಾಗಿ ವೆಚ್ಚ ಮಾಡಲಾಗಿದೆ ಎಂದು ತಿಳಿಸಿದರು.

ಜಿಲ್ಲಾಧಿಕಾರಿ ಪಿ.ಎನ್. ರವೀಂದ್ರ,ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಕಾಶ್.ಜಿ.ಟಿ.ನಿಟ್ಟಾಲಿ, ಜಿಲ್ಲಾ ಪೋಲೀಸ್ ವರಿಷ್ಠಾಧಿಕಾರಿ ಡಿ.ಎಲ್.ನಾಗೇಶ್, ಹೆಚ್ಚುವರಿ ಪೋಲೀಸ್ ವರಿಷ್ಠಾಧಿಕಾರಿ ರಾಜಾ ಇಮಾಮ್ ಕಾಸಿಂ, ಅಪರ ಜಿಲ್ಲಾಧಿಕಾರಿ ಡಾ.ಎನ್.ತಿಪ್ಪೇಸ್ವಾಮಿ, ಉಪ ಕಾರ್ಯದರ್ಶಿ ಎನ್.ಭಾಸ್ಕರ್, ಉಪ ವಿಭಾಗಾಧಿಕಾರಿ ಅಶ್ವಿನ್ ,ತೋಟಗಾರಿಕೆ ಇಲಾಖೆಯ ಉಪನಿರ್ದೇಶಕಿ ಎಂ.ಗಾಯಿತ್ರಿ, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ತೇಜಾನಂದರೆಡ್ಡಿ ಮತ್ತಿತರರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಇಂದಿನಿಂದ ನೀರು ದರ ಶೇ.3 ಹೆಚ್ಚಳ
ಇಂದು ವರ್ಣರಂಜಿತ ಬೆಂಗಳೂರು ಕರಗ