ಶಾಸಕ ಬಾಲಕೃಷ್ಣ ಪ್ರಜ್ವಲ್ ರೇವಣ್ಣ ಪರ ಬಿರುಸಿನ ಪ್ರಚಾರ
ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಮತ ಕೇಳಲು ಕಾಂಗ್ರೆಸ್ ನಾಯಕರಿಗೆ ಯಾವುದೇ ನೈತಿಕತೆ ಇಲ್ಲ. ರಾಜ್ಯ ಕಾಂಗ್ರೆಸ್ ಸರ್ಕಾರ ಜಿಲ್ಲೆ ಹಾಗೂ ತಾಲೂಕಿನ ಅಭಿವೃದ್ಧಿಗೆ 1 ರುಪಾಯಿ ಅನುದಾನವನ್ನು ಕೂಡ ಇದುವರೆಗೂ ನೀಡಿಲ್ಲ ಎಂದು ಶಾಸಕ ಸಿ.ಎನ್.ಬಾಲಕೃಷ್ಣ ಹೇಳಿದರು.
ನುಗ್ಗೇಹಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಜಿ ಎನ್ ಕೊಪ್ಪಲು, ಹೂವಿನಹಳ್ಳಿ, ವಿರೂಪಾಕ್ಷಪುರ ಗ್ರಾಮಗಳಲ್ಲಿ ಎನ್ಡಿಎ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಪರ ಪ್ರಚಾರ ನಡೆಸಿ ಮಾತನಾಡಿದರು.ಜಿಲ್ಲೆಯಲ್ಲಿ ಭೀಕರ ಬರಗಾಲವಿದ್ದರೂ ಜಿಲ್ಲಾ ಉಸ್ತುವಾರಿ ಸಚಿವರು ಯಾವುದೇ ಕ್ರಮ ಕೈಗೊಂಡಿಲ್ಲ. ತಾಲೂಕಿನಲ್ಲಿ ಕೆರೆಕಟ್ಟೆಗಳು ನೀರಿಲ್ಲದೆ ಬಣಗುಡುತ್ತಿದ್ದು ಈ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವರಿಗೆ ಕೆರೆಕಟ್ಟೆಗಳಿಗೆ ನೀರು ಹರಿಸಿ ಎಂದು ಪ್ರತಿಭಟಿಸಿದರೂ ಅವರು ಸ್ಪಂದಿಸಲಿಲ್ಲ. ಈಗ ಈ ಚುನಾವಣೆಯಲ್ಲಿ ಯಾವ ನೈತಿಕತೆ ಇಟ್ಟುಕೊಂಡು ಜಿಲ್ಲೆಯ ಜನರಲ್ಲಿ ಮತ ಕೇಳುತ್ತಿದ್ದಾರೆ. ಎನ್ಡಿಎ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಪರ ಜಿಲ್ಲೆಯಲ್ಲಿ ಉತ್ತಮ ವಾತಾವರಣವಿದ್ದು ದೇಶದಲ್ಲಿ ಎನ್ಡಿಎ ಮೈತ್ರಿಕೂಟ ಸುಮಾರು 400ಕ್ಕೂ ಹೆಚ್ಚು ಸ್ಥಾನಗಳಲ್ಲಿ ಜಯಗಳಿಸಲಿದೆ ಎಂದು ಹೇಳಿದರು.
ನುಗ್ಗೇಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೂವಿನಹಳ್ಳಿ ಗ್ರಾಮದಲ್ಲಿ ಎನ್ಡಿಎ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಪರ ಶಾಸಕ ಸಿ.ಎನ್.ಬಾಲಕೃಷ್ಣ ಪ್ರಚಾರ ನಡೆಸಿದರು.