ಕನ್ನಡಪ್ರಭ ವಾರ್ತೆ ದೊಡ್ಡಬಳ್ಳಾಪುರಬಯಲುಸೀಮೆ ಜಿಲ್ಲೆಗಳಲ್ಲಿ ಎತ್ತಿನಹೊಳೆ ಯೋಜನೆಯನ್ನು ಮುಂದಿಟ್ಟುಕೊಂಡು ಕಾಂಗ್ರೆಸ್ ವೋಟು ಪಡೆಯುತ್ತಿದೆಯೇ ಹೊರತು ಯೋಜನೆಯನ್ನು ಜಾರಿಗೊಳಿಸುವ ಪ್ರಯತ್ನ ಕಳೆದ 10 ವರ್ಷಗಳಲ್ಲಿ ಮಾಡಿಲ್ಲ. ಇನ್ನು10 ವರ್ಷವಾದರೂ ಅವರು ಯೋಜನೆಯನ್ನು ಕಾರ್ಯಗತ ಮಾಡಲ್ಲ ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಆರೋಪಿಸಿದರು.
ನೇಕಾರರ ಸಮಸ್ಯೆಗಳ ಬಗ್ಗೆ ತಮಗೆ ಸ್ಪಷ್ಟವಾದ ಅರಿವಿದೆ. ಇಂದು ಸ್ಥಳೀಯ ಉತ್ಪನ್ನಗಳಿಗೆ ಮಾರುಕಟ್ಟೆ ಸಮಸ್ಯೆ ಕಾಡುತ್ತಿದೆ. ನೇಕಾರರು ಅತ್ಯಂತ ಸಂಕಷ್ಟದಲ್ಲಿದ್ದು, ಕೇಂದ್ರದಲ್ಲಿ ಹಲವು ಉತ್ತಮ ಯೋಜನೆಗಳಿವೆ. ಅವುಗಳಡಿಯಲ್ಲಿ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಒದಗಿಸುವುದು ನಮ್ಮ ಜವಾಬ್ದಾರಿ. ಸ್ಥಳೀಯ ಮಾರುಕಟ್ಟೆ ಅಭಿವೃದ್ಧಿಪಡಿಸುವ ಜೊತೆಗೆ ಮನೆಬಾಗಿಲಿಗೆ ಮಾರುಕಟ್ಟೆ ವ್ಯವಸ್ಥೆ ಜಾರಿಗೊಳಿಸುವುದು ಬದ್ದತೆ ಎಂದರು.
ಮೇಕೆದಾಟು ಮರೀಚಿಕೆ:ನಮ್ಮ ನೀರು ನಮ್ಮ ಹಕ್ಕು ಎಂದು ಪಾದಯಾತ್ರೆ ಮಾಡಿದ ಕಾಂಗ್ರೆಸ್ಸಿಗರು ಮೇಕೆದಾಟು ಜಲಾಶಯ ಕಟ್ಟುವ ಪ್ರಯತ್ನವನ್ನೂ ಮಾಡಿಲ್ಲ. ಅದಕ್ಕೆ ವಿರೋಧ ವ್ಯಕ್ತಪಡಿಸುವ ತಮಿಳುನಾಡು ಸರ್ಕಾರದ ಜೊತೆ ಸೇರಿದ್ದಾರೆ. ನಮ್ಮ ನೀರಿನ ಹಕ್ಕನ್ನು ತಮಿಳುನಾಡಿಗೆ ಬರೆದುಕೊಟ್ಟಂತೆ ವರ್ತಿಸುತ್ತಾರೆ ಎಂದು ಟೀಕಿಸಿದರು.
ತಮಿಳುನಾಡಿನಲ್ಲಿ ಭಾಷಣ ಮಾಡಿದ ರಾಹುಲ್ ಗಾಂಧಿ, ಅವರ ಸರ್ಕಾರ ಅಧಿಕಾರಕ್ಕೆ ಬಂದರೆ 30 ಲಕ್ಷ ಉದ್ಯೋಗ ನೀಡುವುದಾಗಿ ಹೇಳಿದ್ದಾರೆ. ಕಾಂಗ್ರೆಸ್ ಕರ್ನಾಟಕದಲ್ಲಿ ಪೂರ್ಣ ಬಹುಮತದ ಸರ್ಕಾರ ರಚನೆ ಮಾಡಿ 11 ತಿಂಗಳಾದರೂ ಒಂದೇ ಒಂದು ಉದ್ಯೋಗ ನೀಡಿಲ್ಲ. ಸರಿ ಸುಮಾರು 2.75 ಲಕ್ಷ ಉದ್ಯೋಗಗಳು ಖಾಲಿ ಇವೆ. ಇತ್ತ ಮೊದಲು ಗಮನ ಹರಿಸಿ ಎಂದು ಲೇವಡಿ ಮಾಡಿದರು.
ಬೋಗಸ್ ಗ್ಯಾರಂಟಿ ದಿಕ್ಕುತಪ್ಪಿಸುವ ಯತ್ನ:
ದೊಡ್ಡಬಳ್ಳಾಪುರದಲ್ಲಿ ನಡೆದ ಲೋಕಸಭಾ ಚುನಾವಣಾ ಪ್ರಚಾರ ಸಭೆಗೆ ಮಾಜಿ ಸಿಎಂ ಕುಮಾರಸ್ವಾಮಿ ಚಾಲನೆ ನೀಡಿದರು.