ಬಸವಣ್ಣನ ತತ್ವದಂತೆ ಕಾಂಗ್ರೆಸ್‌ ಪಂಚ ಗ್ಯಾರಂಟಿ ಜಾರಿ: ಡಿಕೆಶಿ

KannadaprabhaNewsNetwork |  
Published : May 11, 2024, 01:35 AM ISTUpdated : May 11, 2024, 09:59 AM IST
ಬೆಂಗಳೂರಿನ ಬಸವ ಸಮಿತಿಯು ಬಸವ ಭವನದಲ್ಲಿ ಆಯೋಜಿಸಿದ್ದ ಬಸವ ಜಯಂತಿಯ ಸಮಾರಂಭದಲ್ಲಿ ಡಾ.ಪ್ರಭಾಕರ ಕೋರೆಯವರಿಗೆ ‘ಕಾಯಕರತ್ನ’ ಪ್ರಶಸ್ತಿ ನೀಡಿ  ಗೌರವಿಸಲಾಯಿತು. ಬೇಲಿಮಠದ ಶಿವರುದ್ರ ಸ್ವಾಮೀಜಿ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌, ಸಚಿವ ಈಶ್ವರ್‌ ಖಂಡ್ರೆ, ಸಮಿತಿಯ ಅಧ್ಯಕ್ಷ ಡಾ.ಅರವಿಂದ ಜತ್ತಿ ಮತ್ತಿತರರಿದ್ದರು. | Kannada Prabha

ಸಾರಾಂಶ

ಬಸವ ಸಮಿತಿಯು ನಗರದ ಬಸವ ಭವನದಲ್ಲಿ ಶುಕ್ರವಾರ ಆಯೋಜಿಸಿದ್ದ ಬಸವ ಜಯಂತಿಯ ಸಮಾರಂಭ ಹಾಗೂ ಡಾ। ಪ್ರಭಾಕರ ಕೋರೆಯವರಿಗೆ ‘ಕಾಯಕ ರತ್ನ’ ಪ್ರಶಸ್ತಿ ಪ್ರದಾನ ಮಾಡಲಾಯಿತು.

 ಬೆಂಗಳೂರು :  ನಮ್ಮದು ಬಸವ ತತ್ವದ ಮೇಲೆ ನಡೆಯುತ್ತಿರುವ ಸರ್ಕಾರ. ಸರ್ವರಿಗೂ ಸಮ ಬಾಳು, ಸರ್ವರಿಗೂ ಸಮ ಪಾಲು, ಸಮ ಸಮಾಜ ನಿರ್ಮಾಣದಂತಹ ತತ್ವಗಳ ಮೇಲೆಯೇ ಪಂಚ ಗ್ಯಾರಂಟಿಗಳನ್ನು ಜಾರಿಗೊಳಿಸಿದ್ದೇವೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಹೇಳಿದರು.

ಬೆಂಗಳೂರಿನ ಬಸವ ಸಮಿತಿಯು ನಗರದ ಬಸವ ಭವನದಲ್ಲಿ ಶುಕ್ರವಾರ ಆಯೋಜಿಸಿದ್ದ ಬಸವ ಜಯಂತಿಯ ಸಮಾರಂಭ ಹಾಗೂ ಡಾ। ಪ್ರಭಾಕರ ಕೋರೆಯವರಿಗೆ ‘ಕಾಯಕ ರತ್ನ’ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಭಾಗವಹಿಸಿ ಅವರು ಮಾತನಾಡಿದರು.

ನಮ್ಮ ಸರ್ಕಾರ ಬಸವಣ್ಣನವರ ಹಾದಿಯಲ್ಲೇ ನಡೆದುಕೊಂಡು ಬರುತ್ತಿದೆ. ನಮ್ಮ ಸರ್ಕಾರದ ಪ್ರತಿಯೊಂದು ಕಾರ್ಯಕ್ರಮಗಳಿಗೂ ಬಸವ ತತ್ವೇ ಸ್ಫೂರ್ತಿ. ಸರ್ವರಿಗೂ ಸಮಬಾಳು, ಸಮಪಾಲು ತತ್ವದಲ್ಲಿ ನಡೆಯುತ್ತಿದ್ದೇವೆ. ಅನ್ನಭಾಗ್ಯ, ಗೃಹಲಕ್ಷ್ಮಿ, ಶಕ್ತಿ ಸೇರಿದಂತೆ ಐದೂ ಗ್ಯಾರಂಟಿ ಯೋಜನೆಗಳನ್ನು ಇದೇ ಆಧಾರದಲ್ಲಿ ಜಾರಿಗೆ ತಂದಿದ್ದೇವೆ. ಮೊದಲ ಬಾರಿಗೆ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಗಳಾಗಿ ಪ್ರಮಾಣ ವಚನ ಸ್ವೀಕಾರ ವನ್ನು ಬಸವ ಜಯಂತಿಯದ್ದೇ ತೆಗೆದುಕೊಳ್ಳಬೇಕು ಎಂದು ಆ ದಿನವನ್ನು ಆಯ್ಕೆ ಮಾಡಿದ್ದರು ಎಂದು ಹೇಳಿದರು.

ಮನುಷ್ಯರಾದ ನಾವು ಹುಟ್ಟು ಸಾವಿನ ನಡುವೆ ಏನು ಸಾಧನೆ ಮಾಡುತ್ತೇವೆ ಎನ್ನುವುದು ಮುಖ್ಯ. ಅದೇ ರೀತಿ ಸ್ನೇಹಿತ ಪ್ರಭಾಕರ್ ಕೋರೆಯವರು ಸಮಾಜಕ್ಕೆ ಏನಾದರೂ ಕೊಡುಗೆ ನೀಡಬೇಕೆಂದು ನಿರಂತರವಾಗಿ ಕೆಲಸ ಮಾಡುತ್ತಿದ್ದಾರೆ ಎಂದು ಶ್ಲಾಘಿಸಿದರು.

ಹಿಂದೆ ನಮ್ಮ ಸರ್ಕಾರ ಇದ್ದಾಗ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಬಸವಣ್ಣನವರ ಭಾವಚಿತ್ರ ಕಡ್ಡಾಯ ಮಾಡಿತ್ತು. ಈಗ ಬಸವಣ್ಣನವರು ಸಾಂಸ್ಕೃತಿಕ ನಾಯಕ ಎಂದು ಘೋಷಣೆ ಮಾಡಿದೆ. ಬಸವ ಕಲ್ಯಾಣ, ಬಸವನ ಬಾಗೇವಾಡಿ ಅಭಿವೃದ್ಧಿಗೆ ಪ್ರಾಧಿಕಾರ ಪ್ರಾರಂಭ ಮಾಡಿದ್ದೇವೆ. ಬಸವಣ್ಣನವರ ಆಚಾರ, ವಿಚಾರಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಕೇವಲ ಮಾತಿನಲ್ಲಿ ಹೇಳದೆ ಕೃತಿ ರೂಪದಲ್ಲಿ ತರಬೇಕು ಎಂಬುದೇ ನಮ್ಮ ಆಶಯ ಎಂದು ಹೇಳಿದರು.

ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ಡಾ.ಕೋರೆಯವರು ‘ಇಂದು ವಿಶ್ವದಲ್ಲೆಡೆ ಸಂಭ್ರಮದಿಂದ ಬಸವಣ್ಣವರ ಜಯಂತಿಯನ್ನು ಆಚರಿಸಲಾಗುತ್ತಿದೆ. ಬಸವಣ್ಣನವರು ಈ ಜಗತ್ತು ಕಂಡಂತಹ ಅಪ್ರತಿಮ ದಾರ್ಶನಿಕರು ಎಂದರು.

ಕಾರ್ಯಕ್ರಮದಲ್ಲಿ ಬೇಲಿಮಠದ ಶಿವರುದ್ರ ಸ್ವಾಮೀಜಿ, ಸಚಿವ ಈಶ್ವರ ಖಂಡ್ರೆ, ಬಸವ ಸಮಿತಿ ಅಧ್ಯಕ್ಷ ಡಾ.ಅರವಿಂದ ಜತ್ತಿ ಮತ್ತಿತರರು ಉಪಸ್ಥಿತರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಗುರುಕುಲ ಮಾದರಿ ಶಿಕ್ಷಣದ ಅಗತ್ಯ: ನಿವೃತ್ತ ಶಿಕ್ಷಕ ಮಾಸಣಗಿ
ಅಸಮಾನತೆಯ ಬದುಕಿಗೆ ವಿದಾಯ ಹೇಳಿ: ಮಹಾಂತೇಶ ಆರಾಧ್ಯಮಠ