ಕನ್ನಡಪ್ರಭ ವಾರ್ತೆ ಹೊಸಪೇಟೆ
ಪಟೇಲ್ ನಗರದ ಬಿಜೆಪಿ ಕಚೇರಿಯಿಂದ ಮೆರವಣಿಗೆ ಮೂಲಕ ಆಗಮಿಸಿದ ಪ್ರತಿಭಟನಾಕಾರರು ಪುನೀತ್ ರಾಜ್ಕುಮಾರ್ ವೃತ್ತದಲ್ಲಿ ಪ್ರತಿಭಟನೆ ನಡೆಸಿ, ಕಾಂಗ್ರೆಸ್ ವಿರುದ್ಧ ಧಿಕ್ಕಾರ ಕೂಗಿದರು.
ಹುಡಾ ಮಾಜಿ ಅಧ್ಯಕ್ಷ ಅಶೋಕ್ ಜೀರೆ ಮಾತನಾಡಿ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ಬಹಳ ಆಪ್ತರಾಗಿರುವ ಜಾರ್ಖಂಡ್ನ ಸಂಸದ ಸಾಹು ಅವರ ಮನೆಯಲ್ಲಿ ಸಿಗುತ್ತಿರುವ ಅಕ್ರಮ ಹಣಕ್ಕೆ ಸ್ವತಃ ರಾಹುಲ್ ಅವರೇ ಉತ್ತರ ನೀಡಬೇಕಾಗುತ್ತದೆ. ಕಡುಭ್ರಷ್ಟ ಪಕ್ಷ ಕಾಂಗ್ರೆಸ್ ಎಂಬುದು ಇದೀಗ ಸಾಬೀತಾಗಿದೆ. ರಾಜ್ಯದ ಬಿಜೆಪಿ ಸರ್ಕಾರ ಶೇ. ೪೦ ಕಮಿಷನ್ ಸರ್ಕಾರ ಎಂಬ ಆರೋಪ ಮಾಡಿದ ಕಾಂಗ್ರೆಸ್ ಇದೀಗ ತಾನು ಮಹಾಭ್ರಷ್ಟ ಎಂಬುದನ್ನು ಸಾಬೀತುಪಡಿಸಿದೆ ಎಂದು ದೂರಿದರು.ಪಕ್ಷದ ಹಿರಿಯ ನಾಯಕ ಸಾಲಿ ಸಿದ್ದಯ್ಯಸ್ವಾಮಿ ಮಾತನಾಡಿ, ರಾಹುಲ್ ಗಾಂಧಿ ಅವರು ಭಾರತ ಜೋಡೋ ಪಾದಯಾತ್ರೆಯ ವೇಳೆ ಭ್ರಷ್ಟಾಚಾರದ ವಿರುದ್ಧ ಗುಡುಗಿದ್ದರು. ಆದರೆ ಅವರ ಆಪ್ತರೇ ದೊಡ್ಡ ಭ್ರಷ್ಟ ವ್ಯವಹಾರ ನಡೆಸಿರುವುದು ಈಗ ಅವರ ಮನೆಯಲ್ಲಿ ದೊರೆತಿರುವ ನೋಟುಗಳಿಂದ ಗೊತ್ತಾಗುತ್ತಿದೆ. ಇದಕ್ಕಾಗಿ ರಾಹುಲ್ ಗಾಂಧಿ ಅವರು ತಮ್ಮ ಸಂಸತ್ ಸ್ಥಾನಕ್ಕೆ ಈ ಕೂಡಲೇ ರಾಜೀನಾಮೆ ಸಲ್ಲಿಸಬೇಕು ಎಂದು ಒತ್ತಾಯಿಸಿದರು. ಕೂಡಲೇ ಧೀರಜ್ ಸಾಹು ಅವರ ರಾಜ್ಯಸಭೆ ಸದಸ್ಯತ್ವ ರದ್ದುಗೊಳಿಸಬೇಕು. ಅವರ ವಿರುದ್ಧ ಮೊಕದ್ದಮೆ ದಾಖಲಿಸಿ ತನಿಖೆ ಕೈಗೊಂಡು, ಬಂಧನಕ್ಕೊಳಪಡಿಸಬೇಕು. ರಾಹುಲ್ ಗಾಂಧಿ ಅವರು ಕೂಡ ತಮ್ಮ ಸಂಸತ್ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸಬೇಕು. ರಾಜ್ಯದಲ್ಲಿರುವ ಕಾಂಗ್ರೆಸ್ ನೇತೃತ್ವದ ಸರ್ಕಾರ ತೊಲಗಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.