ಕನ್ನಡಪ್ರಭ ವಾರ್ತೆ ಕಾರವಾರ
ನಗರದ ಪತ್ರಿಕಾಭವನದಲ್ಲಿ ಬಿಜೆಪಿ ಪ್ರಮುಖರು ಸುದ್ದಿಗೋಷ್ಠಿ ನಡೆಸಿದರು.
ಬಿಜೆಪಿ ಜಿಲ್ಲಾಧ್ಯಕ್ಷ ಎನ್.ಎಸ್.ಹೆಗಡೆ ಕರ್ಕಿ, ರಾಜ್ಯ ಸರ್ಕಾರ ಜಾರಿಗೆ ತರಲು ಹೊರಟಿರುವ ಪಿಆರ್ ಸಿ ಅಧಿಸೂಚನೆಯು ಅತ್ಯಂತ ಅಪಾಯಕಾರಿಯಾಗಿದೆ. ಬಾಂಗ್ಲಾದೇಶ ಹಾಗೂ ಪಶ್ಚಿಮ ಬಂಗಾಳದಿಂದ ಅಕ್ರಮವಾಗಿ ವಲಸೆ ಬಂದಿರುವ ಸಾವಿರಾರು ಜನರಿಗೆ ಈ ಪ್ರಮಾಣಪತ್ರ ನೀಡುವುದರಿಂದ ಅವರಿಗೆ ಶಿಕ್ಷಣ ಸೇರಿದಂತೆ ಸರ್ಕಾರದ ಎಲ್ಲಾ ಸೌಲಭ್ಯ ಲಭ್ಯವಾಗುತ್ತವೆ. ಕೇಂದ್ರ ಸರ್ಕಾರ ಅಕ್ರಮ ವಲಸಿಗರನ್ನು ಹೊರಹಾಕಲು ಶ್ರಮಿಸುತ್ತಿದ್ದರೆ, ರಾಜ್ಯ ಸರ್ಕಾರ ಅವರನ್ನು ತನ್ನ ವೋಟ್ ಬ್ಯಾಂಕ್ ಮಾಡಿಕೊಳ್ಳಲು ಯತ್ನಿಸುತ್ತಿದೆ. ಇದನ್ನು ತಡೆಯಲು ರಾಜ್ಯಪಾಲರು ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಕೂಡಲೇ ಮಧ್ಯಪ್ರವೇಶಿಸಬೇಕು ಎಂದು ಒತ್ತಾಯಿಸಿದರು.ಕುಮಟಾ ಶಾಸಕ ದಿನಕರ ಶೆಟ್ಟಿ, ಸಂವಿಧಾನದಲ್ಲಿ ಅವಕಾಶವಿಲ್ಲದಿದ್ದರೂ ಕಂದಾಯ ನಿರೀಕ್ಷಕರ ಮೂಲಕ ಇಂತಹ ಪ್ರಮಾಣಪತ್ರ ವಿತರಿಸಲು ಮುಂದಾಗಿರುವುದು ನಾಚಿಕೆಗೇಡಿನ ಸಂಗತಿ. ಮುಸ್ಲಿಂ ಮತದಾರರನ್ನು ಒಟ್ಟುಗೂಡಿಸಲು ಅಕ್ರಮ ವಲಸಿಗರನ್ನು ಮತದಾರರ ಪಟ್ಟಿಗೆ ಸೇರಿಸುವ ಸಂಚು ಇದಾಗಿದೆ. ಜನಸಂಖ್ಯೆ ಮಿತಿಮೀರಿ ಪರಿಸರದ ಮೇಲೆ ಆಗುವ ಹಾನಿಗೆ ಸರ್ಕಾರವೇ ಹೊಣೆ ಹೊರಬೇಕಾಗುತ್ತದೆ. ಈ ದೇಶವಿರೋಧಿ ನಡೆಯ ವಿರುದ್ಧ ಜಿಲ್ಲಾಧಿಕಾರಿಗಳ ಮೂಲಕ ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಗುವುದು ಎಂದರು.
ಮಾಜಿ ಶಾಸಕ ಸುನೀಲ್ ಹೆಗಡೆ, ಒಬಿಸಿ ಮೋರ್ಚಾ ಜಿಲ್ಲಾಧ್ಯಕ್ಷ ರಾಜೇಂದ್ರ ನಾಯ್ಕ, ಪ್ರಧಾನ ಕಾರ್ಯದರ್ಶಿಗಳಾದ ಪ್ರಶಾಂತ್ ನಾಯ್ಕ, ಶಿವಾಜಿ ನರಸಾನಿ, ಮುಖಂಡರಾದ ಮನೋಜ್ ಭಟ್, ಸುಭಾಷ್ ಗುನಗಿ, ಈಶ್ವರ ನಾಯ್ಕ ಸೇರಿದಂತೆ ಪಕ್ಷದ ಪದಾಧಿಕಾರಿಗಳು ಇದ್ದರು.
ಹಿಂದುಳಿದ ವರ್ಗಗಳ ಮತ ಪಡೆದು ಅಧಿಕಾರಕ್ಕೆ ಬಂದ ಸಿದ್ದರಾಮಯ್ಯ ಕಾಂತರಾಜ್ ವರದಿ ಸೇರಿದಂತೆ ವಿವಿಧ ವರದಿಗಳನ್ನು ಜಾರಿಗೆ ತರದೇ ಒಬಿಸಿ ವರ್ಗಗಳಿಗೆ ದ್ರೋಹ ಬಗೆದಿದ್ದಾರೆ ಎಂದು ಉಡುಪಿ ಶಾಸಕ ಯಶಪಾಲ್ ಸುವರ್ಣ ಆರೋಪಿಸಿದರು. ಸಂಪುಟದಲ್ಲೂ ಸೂಕ್ತ ಸ್ಥಾನಮಾನ ನೀಡಿಲ್ಲ. ತಕ್ಷಣವೇ 204 ಹಿಂದುಳಿದ ಉಪಜಾತಿಗಳಿಗೆ ನ್ಯಾಯ ಒದಗಿಸದಿದ್ದರೆ ಬೃಹತ್ ಪ್ರತಿಭಟನೆ ಎದುರಿಸಬೇಕಾಗುತ್ತದೆ ಎಂದು ಎಚ್ಚರಿಸಿದರು.