ಯಲ್ಲಾಪುರ: ಬಡವರ ಪಾಲಿನ ಆಶಾಕಿರಣವೆಂದರೆ ಅದು ಕಾಂಗ್ರೆಸ್ ಪಕ್ಷ ಮಾತ್ರವಾಗಿದ್ದು, ದೇಶದ ಕಟ್ಟಕಡೆಯ ವ್ಯಕ್ತಿಯವರೆಗೂ ಕಷ್ಟ- ಸುಖ ಮತ್ತು ಮೂಲ ಸೌಕರ್ಯಗಳಿಗೆ ಸ್ಪಂದಿಸುವ ಪಕ್ಷವಾಗಿದೆ ಎಂದು ಹಳಿಯಾಳ ಶಾಸಕ ಆರ್.ವಿ. ದೇಶಪಾಂಡೆ ತಿಳಿಸಿದರು.
ನುಡಿದಂತೆ ನಡೆದಿದ್ದೇವೆ ಎಂಬುದಕ್ಕೆ ೫ ಗ್ಯಾರಂಟಿಗಳೇ ಸಾಕ್ಷಿಯಾಗಿವೆ. ರಾಷ್ಟ್ರದ ಅಭಿವೃದ್ಧಿಗೆ ಮತ್ತು ಬಡಜನರ ಉದ್ಧಾರಕ್ಕಾಗಿ ಇವೆಲ್ಲವನ್ನೂ ಮೀರಿ ಉತ್ತರಕನ್ನಡದ ಸಮಸ್ಯೆಗಳನ್ನು ಬಗೆಹರಿಸುವ ನಿಟ್ಟಿನಲ್ಲಿ ಲೋಕಸಭೆಯಲ್ಲಿ ಧ್ವನಿ ಎತ್ತಲು ಕಾಂಗ್ರೆಸ್ ಅಭ್ಯರ್ಥಿ ಡಾ. ಅಂಜಲಿ ನಿಂಬಾಳ್ಕರ್ ಅವರನ್ನು ಪ್ರಚಂಡ ಬಹುಮತದಿಂದ ಚುನಾಯಿಸಬೇಕೆಂದು ವಿನಂತಿಸಿದರು.
ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ ಮಾತನಾಡಿ, ಸುಳ್ಳುಗಳ ಸರಮಾಲೆಯಿಂದಲೇ ಜನರಿಗೆ ಮಂಕುಬೂದಿ ಎರಚುತ್ತಿರುವ ಬಿಜೆಪಿಗೆ ಮತ ಕೇಳುವ ನೈತಿಕತೆ ಉಳಿದಿಲ್ಲ. ಕಾಂಗ್ರೆಸ್ ನಂಬಿ ರಾಜ್ಯದಲ್ಲಿ ಜನರೆಲ್ಲರ ಆಶೀರ್ವಾದದಿಂದ ಪಕ್ಷ ಅಧಿಕಾರಕ್ಕೆ ಬರುತ್ತಲೇ ಆಶೀರ್ವದಿಸಿದ ಜನರ ಕಷ್ಟ- ಸುಖಗಳಿಗೆ ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಗೊಳಿಸುವುದರ ಮೂಲಕ ಕೊಟ್ಟ ಮಾತನ್ನು ಉಳಿಸಿಕೊಂಡಿದ್ದೇವೆ.ಯುವ ನಾಯಕ ವಿವೇಕ ಹೆಬ್ಬಾರ ಮಾತನಾಡಿ, ಜನರ ಆಶೋತ್ತರಗಳಿಗೆ ಸ್ಪಂದಿಸಿ, ಕೊಟ್ಟ ಭರವಸೆಯನ್ನು ಈಡೇರಿಸಿ, ವಿಶ್ವಾಸಕ್ಕೆ ಪಾತ್ರವಾಗಿರುವ ಕಾಂಗ್ರೆಸ್ ಪಕ್ಷ ದೇಶದ ಚುಕ್ಕಾಣಿ ಹಿಡಿಯಲು ಪ್ರತಿಯೊಬ್ಬರೂ ಹಸ್ತದ ಗುರುತಿಗೆ ತಮ್ಮ ಮತ ನೀಡಬೇಕಿದೆ ಎಂದರು.
ಪ್ರಚಾರ ಸಭೆಯ ನಡುವೆ ಅರಬೈಲ್ನಲ್ಲಿ ಗುಳ್ಳಾಪುರದ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ನವಚೇತನ ಟ್ರಸ್ಟ್ ಸಂಘಟಿಸಿದ್ದ ಹನುಮ ಜಯಂತಿ ಉತ್ಸವಕ್ಕೆ ಭೇಟಿ ನೀಡಿದ ಕಾಂಗ್ರೆಸ್ನ ಹಿರಿಯ- ಕಿರಿಯ ಮುಖಂಡರು ಪೂಜೆ ಸಲ್ಲಿಸಿ, ಪ್ರಸಾದ ಸ್ವೀಕರಿಸಿದರು.