ಹೊ.ನ.ಪುರದಲ್ಲಿ ಬೂದಿ ಮುಚ್ಚಿದ ಕೆಂಡದ ವಾತಾವರಣ
ಪಟ್ಟಣದಲ್ಲಿ ಹಾಸನ ಲೋಕಸಭಾ ಕ್ಷೇತ್ರದ ಚುನಾವಣೆಯಲ್ಲಿ ೨೫ ವರ್ಷಗಳ ನಂತರ ಕಾಂಗ್ರೆಸ್ ಪಕ್ಷ ಅಭ್ಯರ್ಥಿ ಶ್ರೇಯಸ್ ಎಂ.ಪಟೇಲ್ ಜಯಗಳಿಸಿದ್ದು, ಕಾಂಗ್ರೆಸ್ ಕಾರ್ಯಕರ್ತರಲ್ಲಿ ಹೆಚ್ಚಿನ ಉತ್ಸಾಹ ಮೂಡಿಸಿದ್ದು, ಸಂಭ್ರಮಾಚರಣೆ ಎಲ್ಲೆ ಮೀರಿದೆ. ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಎಚ್.ಡಿ.ಕುಮಾರಸ್ವಾಮಿ ಅವರು ಜಯಗಳಿಸಿದ್ದು ಬೆಂಗಳೂರು ಗ್ರಾಮಾಂತರದಲ್ಲಿ ಡಿ.ಕೆ.ಸುರೇಶ್ ಪರಾಭವಗೊಂಡು, ಎಚ್.ಡಿ.ದೇವೇಗೌಡರ ಅಳಿಯ ಡಾ. ಮಂಜುನಾಥ್ ಹಾಗೂ ಕೋಲಾರದಲ್ಲಿ ಜೆಡಿಎಸ್ ಜಯಗಳಿಸಿದ್ದು ಜೆಡಿಎಸ್ ಕಾರ್ಯಕರ್ತರು ಸಂಭ್ರಮಾಚರಣೆಗೆ ಸಾಕ್ಷಿಯಾಗಿದೆ.
ಆದರೆ ಎರಡು ಪಕ್ಷದ ಕಾರ್ಯಕರ್ತರು ಮಹಾತ್ಮಗಾಂಧಿ ವೃತ್ತದಲ್ಲಿ ಪಂದ್ಯಕ್ಕೆ ನಿಂತವರಂತೆ ಒಬ್ಬರ ನಂತರ ಒಬ್ಬರು ಹೆಚ್ಚು ಶಬ್ದ ಮಾಡುವ ಪಟಾಕಿ ಸಿಡಿಸಿ, ಜೋರಾಗಿ ಜೈಕಾರ ಕೂಗುತ್ತ ಒಬ್ಬರನ್ನೊಬ್ಬರು ಗೇಲಿ ಮಾಡುತ್ತಿರುವ ರೀತಿ ಪ್ರಚೋದಿಸುತ್ತಿದ್ದು, ಕೆಲವೊಮ್ಮೆ ಕೈ ಕೈ ಮಿಸಲಾಯಿಸುವ ಹಂತಕ್ಕೆ ಬಂದಿದೆ. ಆದರೆ ಡಿವೈಎಸ್ಪಿ ಅಶೋಕ್ ಹಾಗೂ ವೃತ್ತ ನಿರೀಕ್ಷಕ ಸುರೇಶ್ ಕುಮಾರ್ ಅವರು ಕಾರ್ಯಕರ್ತರನ್ನು ನಿಯಂತ್ರಿಸುತ್ತ ಪಿಎಸ್ಸೈ, ಪೊಲೀಸ್ ಸಿಬ್ಬಂದಿ ಮತ್ತು ಮೀಸಲು ತುಕಡಿ ಪೊಲೀಸರಿಗೆ ನಿರ್ದೇಶನ ನೀಡುವ ಮೂಲಕ ಪರಿಸ್ಥಿತಿ ನಿಯಂತ್ರಿಸುವಲ್ಲಿ ಯಶಸ್ವಿಯಾಗಿದೆ.