-ಜಿಲ್ಲಾ ಯುವ ಬಿಜೆಪಿ ಅಧ್ಯಕ್ಷ ಪ್ರಶಾಂತ್ಕುಕ್ಕೆ ಕಿಡಿ । ಶಿವಮೊಗ್ಗದಲ್ಲಿ ಯುವ ಮೋರ್ಚಾ ಬಿಜೆಪಿಯಿಂದ ಕಾಂಗ್ರೆಸ್ ನಾಯಕರ ವಿರುದ್ಧ ಪ್ರತಿಭಟನೆ
ಕನ್ನಡಪ್ರಭ ವಾರ್ತೆ ಶಿವಮೊಗ್ಗ
ಬಿಜೆಪಿ ಸಂಸದರ ಮನೆಗೆ ಮುತ್ತಿಗೆ ಹಾಕುವ ಯಾವುದೇ ನೈತಿಕತೆ ಕಾಂಗ್ರೆಸ್ಸಿಗರಿಗಿಲ್ಲ. ಕಾಂಗ್ರೆಸ್ ಕಾರ್ಯಕರ್ತರು ತಮ್ಮ ಅಧಿನಾಯಕಿ ಮತ್ತು ರಾಹುಲ್ಗಾಂಧಿ ವಿರುದ್ಧ ಮೊದಲು ಪ್ರತಿಭಟನೆ ಮಾಡಲಿ ಎಂದು ಜಿಲ್ಲಾ ಯುವ ಬಿಜೆಪಿ ಅಧ್ಯಕ್ಷ ಪ್ರಶಾಂತ್ಕುಕ್ಕೆ ಕಿಡಿಕಾರಿದರು.ಕಾಂಗ್ರೆಸ್ ನಾಯಕರ ವಿರುದ್ಧ ಶಿವಪ್ಪನಾಯಕ ವೃತ್ತದಲ್ಲಿ ಯುವ ಮೋರ್ಚಾ ಬಿಜೆಪಿಯಿಂದ ಆಯೋಜಿಸಿದ್ದ ಪ್ರತಿಭಟನೆಯಲ್ಲಿ ಅವರು ಮಾತನಾಡಿ, ಯುವ ಕಾಂಗ್ರೆಸ್ ಕಾರ್ಯಕರ್ತರು ಕಾನೂನು ಹೋರಾಟ ಮಾಡುವುದು ಬಿಟ್ಟು ನ್ಯಾಯಾಲಯದ ಆದೇಶಕ್ಕೆ ಸೆಡ್ಡು ಹೊಡೆಯುವ ರೀತಿಯಲ್ಲಿ ಸಂಸದ ಬಿ.ವೈ.ಆರ್.ಮನೆಗೆ ಮತ್ತು ಅಂಚೆ ಕಚೇರಿಗೆ ನುಗ್ಗಲು ಯತ್ನಿಸಿರುವುದು ಸರಿಯಲ್ಲ ಎಂದು ದೂರಿದರು.
ಶಾಸಕ ಎಸ್.ಎನ್.ಚನ್ನಬಸಪ್ಪ ಮಾತನಾಡಿ, ಕಾಂಗ್ರೆಸ್ನವರು ನೆಲದಿಂದ ಆಕಾಶದವರೆಗೆ ಅನೇಕ ಭ್ರಷ್ಟಚಾರಗಳನ್ನು ಮಾಡಿ ದೇಶ ಲೂಟಿ ಮಾಡಿದವರು. ಒಂದು ವರ್ಗದ ಓಲೈಕೆಗಾಗಿ ದೇಶವನ್ನೇ ಭ್ರಷ್ಟಚಾರದ ಕೂಪವಾಗಿಸಿದವರು. ಈಗ ಬಿಜೆಪಿ ವಿರುದ್ಧ ಪ್ರತಿಭಟನೆ ಮಾಡುತ್ತಿದ್ದಾರೆ. ಸ್ವಾತಂತ್ರ್ಯ ಸಂದರ್ಭದಲ್ಲಿ ದೇಶದ ಜನತೆ ನೀಡಿದ ಹಣವನ್ನು ಭ್ರಷ್ಟಚಾರದಿಂದ ನುಂಗಿದ್ದಾರೆ. ಮೊದಲು ಅವರು ಜನತೆಯ ಕ್ಷಮೆ ಕೇಳಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದರು.
ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಮಾಡುವುದಾಗಿ ಸಾವಿರಾರು ಕೋಟಿ ಹಣವನ್ನು ದೇಶದ ನಾಗರಿಕರಿಂದ ಸಂಗ್ರಹಿಸಿ ಅದನ್ನು ಎಂಗ್ ಇಂಡಿಯಾ ಎಂಬ ಚಾರಿಟೆಬಲ್ ಟ್ರಸ್ಟ್ ಸ್ಥಾಪಿಸಿ ಅಕ್ರಮವಾಗಿ ಹಣ ವರ್ಗಾವಣೆಯನ್ನು ಆ ಟ್ರಸ್ಟಿಗೆ ಮಾಡಿಕೊಂಡಿದ್ದಾರೆ. ಅದರಲ್ಲಿ ಶೇ.37ರಷ್ಟು ಸೋನಿಯಾ ಗಾಂಧಿ ಹಾಗೂ ಶೇ.37 ರಾಜೀವ್ಗಾಂಧಿ ಪಾಲುದಾರರಾಗಿದ್ದು, ಮಲ್ಲಿಕಾರ್ಜುನ್ ಖರ್ಗೆ ಹಾಗೂ ಇತರ ನಾಯಕರು ಇದರಲ್ಲಿ ಪಾಲುದಾರರಾಗಿದ್ದಾರೆ. ಇದು ದೇಶದ ಸ್ವಾತಂತ್ರ್ಯ ಹೋರಾಟಗಾರರಿಗೆ ಕಾಂಗ್ರೆಸ್ ಮಾಡಿದ ಅವಮಾನ ಎಂದು ದೂರಿದರು.
ಪತ್ರಿಭಟನೆಯಲ್ಲಿ ಪ್ರಮುಖರಾದ ಯುವ ಮೋರ್ಚಾ ಪದಾಧಿಕಾರಿಗಳು ಮತ್ತು ಬಿಜೆಪಿ ಕಾರ್ಯಕರ್ತರು ಉಪಸ್ಥಿತರಿದ್ದರು.
ಶಿವಮೊಗ್ಗದ ಶಿವಪ್ಪನಾಯಕ ವೃತ್ತದಲ್ಲಿ ಯುವ ಮೋರ್ಚಾ ಬಿಜೆಪಿಯಿಂದ ಕಾಂಗ್ರೆಸ್ ನಾಯಕರ ವಿರುದ್ಧ ಪ್ರತಿಭಟನೆ ನಡೆಯಿತು.