ಕನ್ನಡಪ್ರಭ ವಾರ್ತೆ ರಾಮನಗರ
ಮುಂಬರುವ ತಾಲೂಕು ಮತ್ತು ಜಿಲ್ಲಾ ಪಂಚಾಯಿತಿ ಚುನಾವಣೆ ಹಾಗೂ 2028ರ ಸಾರ್ವತ್ರಿಕ ವಿಧಾನಸಭಾ ಕ್ಷೇತ್ರ ಚುನಾವಣೆಯಲ್ಲಿ ಕಾಂಗ್ರೆಸ್ ಅನ್ನು ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ಬೂತ್ ಹಾಗೂ ಪಂಚಾಯಿತಿ ಮಟ್ಟದಲ್ಲಿ ಸಮಿತಿಗಳನ್ನು ಪುನರ್ ರಚನೆ ಮಾಡಿ, ಪಕ್ಷ ಸಂಘಟನೆ ಕಾರ್ಯಕ್ಕೆ ಚಾಲನೆ ನೀಡಿದ್ದೇವೆ ಎಂದು ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಎಸ್.ಗಂಗಾಧರ್ ಹೇಳಿದರು.ನಗರದ ಜಿಲ್ಲಾ ಕಾಂಗ್ರೆಸ್ ಸಮಿತಿ ಕಚೇರಿಯಲ್ಲಿ ಬ್ಲಾಕ್ ಕಾಂಗ್ರೆಸ್ ಮಟ್ಟದ ಪಕ್ಷ ಸಂಘಟನೆ ಸಭೆಯಲ್ಲಿ ಮಾತನಾಡಿದ ಅವರು, ಎಐಸಿಸಿ ಎಲ್ಲ ಜಿಲ್ಲೆಗಳಲ್ಲಿ ಕಾಂಗ್ರೆಸ್ ಪಕ್ಷವನ್ನು ಬಲಿಷ್ಠವಾಗಿ ಸಂಘಟನೆ ಮಾಡುವಂತೆ ಆದೇಶಿಸಿದೆ. ಅದರಂತೆ ಪಕ್ಷದ ಎಲ್ಲ ಸಮಿತಿಗಳನ್ನು ಪುನರ್ ರಚನೆ ಮಾಡಿ ಪಕ್ಷ ಸಂಘಟನೆಗೆ ಒತ್ತು ನೀಡುತ್ತಿದ್ದೇವೆ ಎಂದರು.
ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷ ಸಂಘಟನೆ ಕಾರ್ಯ ನಿರಂತರವಾಗಿ ಸಾಗಿದೆ. ಈಗಾಗಲೇ ಕನಕಪುರ ಮತ್ತು ಚನ್ನಪಟ್ಟಣ ತಾಲೂಕುಗಳಲ್ಲಿ ಸಭೆ ಮುಗಿಸಿದ್ದೇವೆ. ಬ್ಲಾಕ್ ಕಮಿಟಿ, ಬೂತ್ ಮಟ್ಟದ ಸಮಿತಿ, ಪಂಚಾಯಿತಿ ಮಟ್ಟದ ಸಮಿತಿ, ವಾರ್ಡ್ ಸಮಿತಿ, ಜಿಲ್ಲಾ ಪಂಚಾಯಿತಿ ಸಮಿತಿ ಸೇರಿದಂತೆ ಎಲ್ಲ ಮಂಚೂಣಿ ಘಟಕಗಳನ್ನು ಪುನರ್ ರಚನೆ ಮಾಡಬೇಕಿದೆ.ಕೆಲ ಬ್ಲಾಕ್ ಸಮಿತಿಗಳಲ್ಲಿ ಅಧ್ಯಕ್ಷರಾದರವಲ್ಲಿ 2 ಮತ್ತು 5 ವರ್ಷ ಪೂರ್ಣಗೊಳಿಸಿದವರು ಇದ್ದಾರೆ. ಅವರೆಲ್ಲರನ್ನು ಬದಲಾವಣೆ ಮಾಡಿ ಬೇರೆ ಕಾರ್ಯಕರ್ತರಿಗೆ ಅವಕಾಶ ನೀಡುವ ಆಲೋಚನೆ ಇದೆ. ಅಲ್ಲದೆ, ಪಕ್ಷದಲ್ಲಿ ಯಾರೆಲ್ಲ ನಿಷ್ಠಾವಂತರವಾಗಿ ಹಗಲಿರುಳು ಶ್ರಮಿಸಿದ್ದಾರೊ ಅವರನ್ನು ಗುರುತಿಸುವ ಕೆಲಸ ಮಾಡುತ್ತಿದ್ದೇವೆ ಎಂದು ಹೇಳಿದರು.
ಈಗಾಗಲೇ ಎಐಸಿಸಿರವರು ಜಿಲ್ಲಾಧ್ಯಕ್ಷರ ಸಭೆ ಕರೆದು ಪಕ್ಷ ಸಂಘಟನೆ ಕುರಿತು ತರಬೇತಿ ನೀಡಿದ್ದು, ಶಾಸಕರು ಮತ್ತು ಸಚಿವರು ಪಕ್ಷ ಸಂಘಟನೆಯಲ್ಲಿ ಸಕ್ರಿಯರಾಗಿ ತೊಡಗಬೇಕೆಂದು ಸೂಚನೆ ನೀಡಿದ್ದಾರೆ. ಅಲ್ಲದೆ, ಜಿಲ್ಲಾಧ್ಯಕ್ಷರು ಮತ್ತು ಜಿಲ್ಲಾ ಸಮಿತಿಗೆ ಹೆಚ್ಚಿನ ಅಧಿಕಾರ ನೀಡುವ ಭರವಸೆ ನೀಡಿದ್ದಾರೆ. ಯಾರೆಲ್ಲ ಸಚಿವರು ಜಿಲ್ಲಾ ಪ್ರವಾಸ ಕೈಗೊಳ್ಳುತ್ತಾರೊ ಅವರು ಮೊದಲು ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಭೇಟಿ ನೀಡಿ, ಮುಖಂಡರು ಮತ್ತು ಕಾರ್ಯಕರ್ತರ ಸಭೆ ನಡೆಸಬೇಕೆಂದು ಆದೇಶಿಸಿದ್ದಾರೆ ಎಂದು ಹೇಳಿದರು.ಪ್ರತಿಯೊಂದು ಜಿಲ್ಲೆಗಳಿಗೂ ಒಬ್ಬೊಬ್ಬ ಉಸ್ತುವಾರಿಯನ್ನು ನಿಯೋಜನೆ ಮಾಡಲಾಗಿದೆ. ಅದರಂತೆ ಕೆಪಿಸಿಸಿ ಉಪಾಧ್ಯಕ್ಷ ಪಿ.ಆರ್.ರಮೇಶ್ ರವರು ರಾಮನಗರ ಜಿಲ್ಲೆಯ ಉಸ್ತುವಾರಿಯಾಗಿ ಎರಡು ವರ್ಷಗಳಿಂದ ಕೆಲಸ ಮಾಡುತ್ತಿದ್ದಾರೆ. ಅಲ್ಲದೆ, ರಾಮನಗರ ಕ್ಷೇತ್ರಕ್ಕೆ ಬಿಡಿಸಿಸಿ ಬ್ಯಾಂಕ್ ಅಧ್ಯಕ್ಷರಾದ ವಿಜಯೇ ದೇವ್ ಹಾಗೂ ಚನ್ನಪಟ್ಟಣ ಕ್ಷೇತ್ರಕ್ಕೆ ಮಾಜಿ ಶಾಸಕ ರಾಜು ಅವರನ್ನು ಉಸ್ತುವಾರಿಯನ್ನಾಗಿ ನಿಯೋಜಿಸಲಾಗಿದೆ. ಕನಕಪುರ ಮತ್ತು ಮಾಗಡಿ ಕ್ಷೇತ್ರದ ಶಾಸಕರು ಅನೇಕ ಬಾರಿ ಗೆದ್ದಿರುವುದರಿಂದ ಆಕ್ಷೇತ್ರಗಳಲ್ಲಿ ಉಸ್ತುವಾರಿಯನ್ನು ನಿಯೋಜಿಸುವ ಅವಶ್ಯಕತೆ ಕಂಡು ಬಂದಿಲ್ಲ ಎಂದು ಗಂಗಾಧರ್ ತಿಳಿಸಿದರು.
ಕೆಪಿಸಿಸಿ ಉಪಾಧ್ಯಕ್ಷ ಪಿ.ಆರ್ .ರಮೇಶ್ ಹಾಗೂ ರಾಮನಗರ ಕ್ಷೇತ್ರ ಉಸ್ತುವಾರಿ ವಿಜಯ್ ದೇವ್ ಮಾತನಾಡಿದರು. ಜಿಲ್ಲಾ ಗ್ಯಾರಂಟಿ ಯೋಜನೆಗಳ ಸಮಿತಿ ಅಧ್ಯಕ್ಷ ಕೆ.ರಾಜು, ನಗರಾಭಿವೃದ್ಧಿ ಪ್ರಾಧಿಕಾರ ಮತ್ತು ನಗರ ಬ್ಲಾಕ್ ಅಧ್ಯಕ್ಷ ಎ.ಬಿ.ಚೇತನ್ಕುಮಾರ್, ಗ್ರಾಮಾಂತರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಿ.ಎಚ್.ರಾಜು, ನಗರಾಭಿವೃದ್ಧಿ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಡಾ.ದೀಪಾ ಮುನಿರಾಜು, ಯುವ ಕಾಂಗ್ರೆಸ್ ಮಾಜಿ ಜಿಲ್ಲಾಧ್ಯಕ್ಷ ಗುರುಪ್ರಸಾದ್, ಕಾರ್ಮಿಕ ಘಟಕದ ಜಿಲ್ಲಾಧ್ಯಕ್ಷ ಪುಟ್ಟರಾಜು, ತಾಲ್ಲೂಕು ಅಧ್ಯಕ್ಷ ದೇವರಾಜು, ಕಾಂಗ್ರೆಸ್ ಸೇವಾ ದಳ ಜಿಲ್ಲಾಧ್ಯಕ್ಷ ಚಂದ್ರಮೋಹನ್ , ಯುವ ಕಾಂಗ್ರೆಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ರವಿಕಿರಣ್ ಸೇರಿದಂತೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು, ನಗರಸಭೆ ಸದಸ್ಯರುಗಳು, ವಿವಿಧ ಮುಂಚೂಣಿ ಘಟಕಗಳ ಅಧ್ಯಕ್ಷರು, ಪದಾಧಿಕಾರಿಗಳು ಇದ್ದರು.ಕೋಟ್........
ಸರ್ಕಾರದ ವಿವಿಧ ಸಮಿತಿಗಳಲ್ಲಿ ಪಕ್ಷದ ನಿಷ್ಠಾವಂತ ಕಾರ್ಯಕರ್ತರಿಗೆ ಅಧಿಕಾರ ನೀಡಿ ಆನಂತರ ಉಳಿದವರಿಗೂ ಅವಕಾಶ ನೀಡಲಾಗುವುದು. ಕಾರ್ಯಕರ್ತರಿಗೆ ಎಲ್ಲರಿಗೂ ಒಮ್ಮೆಲೆಗೆ ಅಧಿಕಾರ ನೀಡಲು ಆಗುವುದಿಲ್ಲ. ಅದಕ್ಕಾಗಿ ಒಂದು - ಎರಡು ವರ್ಷ ಅವಕಾಶ ನೀಡುವ ಕೆಲಸ ಮಾಡುತ್ತೇವೆ.ಎಸ್.ಗಂಗಾಧರ್, ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ
----------11ಕೆಆರ್ ಎಂಎನ್ 1.ಜೆಪಿಜಿ
ರಾಮನಗರದ ಜಿಲ್ಲಾ ಕಾಂಗ್ರೆಸ್ ಸಮಿತಿ ಕಚೇರಿಯಲ್ಲಿ ಬ್ಲಾಕ್ ಕಾಂಗ್ರೆಸ್ ಮಟ್ಟದ ಪಕ್ಷ ಸಂಘಟನೆ ಸಭೆಯಲ್ಲಿ ಕೆಪಿಸಿಸಿ ಉಪಾಧ್ಯಕ್ಷ ಪಿ.ಆರ್ .ರಮೇಶ್ ಮಾತನಾಡಿದರು.