ಜೀವನೋಪಾಯಕ್ಕಾಗಿ ಮಾಡಿದ ಕೃಷಿ ಭೂಮಿಯಿಂದ ಅರಣ್ಯ ಇಲಾಖೆ ಅಧಿಕಾರಿಗಳು ಒಕ್ಕಲೆಬ್ಬಿಸ ಬಾರದು ।
ಜೀವನಕ್ಕಾಗಿ ಈಗಾಗಲೇ ಸಾಗುವಳಿ ಮಾಡಿರುವ ಸಣ್ಣ ಮತ್ತು ಅತಿಸಣ್ಣ ರೈತರಿಗೆ ಭೂಮಿ ಹಕ್ಕು ಕೊಡಿಸಲು ಕಾಂಗ್ರೆಸ್ ಪಕ್ಷ ಬದ್ಧವಾಗಿದೆ. ಆದರೆ, ವಿಪಕ್ಷದವರ ಹೇಳಿಕೆಯಿಂದ ಜಿಲ್ಲೆಯ ಜನರಲ್ಲಿ ಆತಂಕ ಸೃಷ್ಟಿಯಾಗುತ್ತಿದೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹಾಗೂ ಭದ್ರಾ ಕಾಡಾ ಅಧ್ಯಕ್ಷ ಡಾ. ಕೆ.ಪಿ. ಅಂಶುಮಂತ್ ಹೇಳಿದ್ದಾರೆ.
ಜಿಲ್ಲೆಯಲ್ಲಿ ಜೀವನೋಪಾಯಕ್ಕಾಗಿ ಮಾಡಿರುವ ಕೃಷಿ ಭೂಮಿಯಿಂದ ಜನರನ್ನು ಒಕ್ಕಲೆಬ್ಬಿಸಲು ಅರಣ್ಯ ಇಲಾಖೆ ಅಧಿಕಾರಿ ಗಳು ಮುಂದಾಗಬಾರದು. ಸಾಗುವಳಿದಾರರಿಗೆ ಅಡ್ಡಿಪಡಿಸಬಾರದು ಎಂದು ಶನಿವಾರ ಸುದ್ದಿಗೋಷ್ಠಿಯಲ್ಲಿ ಆಗ್ರಹಿಸಿದರು.ರಾಜ್ಯದಲ್ಲಿ ಉತ್ತಮ ಆಡಳಿತ ನಡೆಸಿರುವ ಕಾಂಗ್ರೆಸ್ ಪಕ್ಷ ಜನರಿಗೆ ಭೂಮಿ ಹಕ್ಕು ನೀಡಿದ್ದು, ಅಧಿಕಾರ ಅನುಭವಿಸಿರುವ ಬಿಜೆಪಿ ಜನರಿಗೆ ಭೂಮಿ ಹಕ್ಕು ಕೊಡಿಸುವ ಬಗ್ಗೆ ಚಿಂತನೆ ಮಾಡಲಿಲ್ಲ, ಅದರ ಬದಲಿಗೆ ಭೂ ಕಬಳಿಕೆ ನಿಷೇಧ ಕಾಯ್ದೆ ಜಾರಿ ಗೊಳಿಸುವ ಮೂಲಕ ಒತ್ತುವರಿದಾರರನ್ನು ಭೂಗಳ್ಳರು ಎಂದೇ ಬಿಂಬಿಸಲಾಗುತ್ತಿತ್ತು ಎಂದು ಆರೋಪಿಸಿದರು.
ಈಗಾಗಲೇ ಬಾಕಿ ಇರುವ ನಮೂನೆ 50, 53, 57, 94ಸಿ ಅಡಿಯಲ್ಲಿ ಅರ್ಜಿಗಳನ್ನು ವಿಲೇವಾರಿ ಮಾಡಲಾಗುವುದು ಎಂದು ಹೇಳಿದ ಅವರು, ಪರಿಸರ ಮತ್ತು ರೈತರ ಬದುಕು ಉಳಿಯಬೇಕೆಂಬ ಬಗ್ಗೆ ವಾಸ್ತಾವಾಂಶಗಳು ವೈಜ್ಞಾನಿಕವಾಗಿರಬೇಕೆಂಬ ದೃಷ್ಟಿಯಿಂದ ರಾಜ್ಯ ಸರ್ಕಾರ ರೈತರ ನೆರವಿಗೆ ಬರಲಿದೆ ಎಂದರು.
ಕಂದಾಯ ಮತ್ತು ಅರಣ್ಯ ಪ್ರದೇಶದ ಗಡಿ ಗುರುತಿಸಲು ಈಗಾಗಲೇ ಜಂಟಿ ಸರ್ವೆಗೆ ಚಾಲನೆ ನೀಡಲಾಗಿದೆ. ಅರಣ್ಯಕ್ಕೆ ಸಂಬಂಧಿಸಿದಂತೆ ಪಂಚಾಯಿತಿ ಮಟ್ಟದಿಂದ ಜನವಸತಿ ಪ್ರದೇಶದ ವಸ್ತುಸ್ಥಿತಿ ಪರಿಗಣಿಸಿ ಗಂಭೀರ ಹೆಜ್ಜೆ ಇಡಲಾಗಿದೆ. ಸಾರ್ವಜನಿಕರ ಗಮನಕ್ಕೆ ಇಲ್ಲದೆ ಅರ್ಜಿ ವಿಲೇವಾರಿ ಮಾಡದಂತೆ ಫಾರೆಸ್ಟ್ ಸೆಟ್ಲ್ಮೆಂಟ್ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದರು.
ಮಾಜಿ ಸಚಿವ ಡಿ.ಎನ್.ಜೀವರಾಜ್ ಒತ್ತುವರಿಗೆ ಸಂಬಂಧಿಸಿದಂತೆ ವಿವಿಧ ಹೇಳಿಕೆ ನೀಡುವ ಮೂಲಕ ಜನರ ದಿಕ್ಕು ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ. ಇಂತಹ ಹೇಳಿಕೆಗಳಿಗೆ ಜಿಲ್ಲೆ ಜನರು ಕಿವಿಗೊಡಬಾರದು ಎಂದು ಮನವಿ ಮಾಡಿದರು.
ಪೋಟೋ ಫೈಲ್ ನೇಮ್ 24 ಕೆಸಿಕೆಎಂ 4