ಕೇಂದ್ರ ಸರ್ಕಾರದ ವಿರುದ್ಧ ಖಾಲಿ ಚೊಂಬು ಪ್ರದರ್ಶಿಸಿ ಕಾಂಗ್ರೆಸ್ ಪ್ರತಿಭಟನೆ - ಬಜೆಟ್ಗೆ ಅಸಮಾಧಾನ

KannadaprabhaNewsNetwork |  
Published : Jul 28, 2024, 02:03 AM ISTUpdated : Jul 28, 2024, 05:57 AM IST
27ಎಚ್‌ಪಿಟಿ2- ಹೊಸಪೇಟೆಯ ಅಂಬೇಡ್ಕರ್ ವೃತ್ತದಲ್ಲಿ ಶನಿವಾರ ನಡೆದ ಕೇಂದ್ರ ಸರ್ಕಾರದ ವಿರುದ್ಧದ ಪ್ರತಿಭಟನೆಯನ್ನುದ್ದೇಶಿಸಿ ಮಾಜಿ ಸಚಿವ ಪಿ.ಟಿ. ಪರಮೇಶ್ವರ ನಾಯ್ಕ ಅವರು ಮಾತನಾಡಿದರು. ವಿಜಯನಗರ ಕಾಂಗ್ರೆಸ್‌ ಜಿಲ್ಲಾಧ್ಯಕ್ಷ ಸಿರಾಜ್‌ ಶೇಕ್‌, ಹುಡಾ ಅಧ್ಯಕ್ಷ ಇಮಾಮ್‌ ಮತ್ತಿತರರಿದ್ದರು. | Kannada Prabha

ಸಾರಾಂಶ

ಮೆರವಣಿಗೆಯಲ್ಲಿ ಖಾಲಿ ಚೊಂಬು ಹಿಡಿದು, ಕಾಂಗ್ರೆಸ್‌ ಮುಖಂಡರು ಹಾಗೂ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು.

ಹೊಸಪೇಟೆ: ಕೇಂದ್ರ ಸರ್ಕಾರದ ಬಜೆಟ್‌ನಲ್ಲಿ ಕರ್ನಾಟಕ ರಾಜ್ಯಕ್ಕೆ ಆಗಿರುವ ಅನ್ಯಾಯ ಖಂಡಿಸಿ ನಗರದ ಅಂಬೇಡ್ಕರ್‌ ವೃತ್ತದಲ್ಲಿ ಶನಿವಾರ ವಿಜಯನಗರ ಜಿಲ್ಲಾ ಕಾಂಗ್ರೆಸ್‌ ಸಮಿತಿ ನೇತೃತ್ವದಲ್ಲಿ ಬೃಹತ್‌ ಪ್ರತಿಭಟನೆ ನಡೆಸಲಾಯಿತು.

ಮೆರವಣಿಗೆಯಲ್ಲಿ ಖಾಲಿ ಚೊಂಬು ಹಿಡಿದು, ಕಾಂಗ್ರೆಸ್‌ ಮುಖಂಡರು ಹಾಗೂ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು.

ಮಾಜಿ ಸಚಿವ ಪಿ.ಟಿ. ಪರಮೇಶ್ವರ ನಾಯ್ಕ ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿ, ಕೇಂದ್ರ ಬಜೆಟ್‌ನಲ್ಲಿ ರಾಜ್ಯದ ಏಳು ಕೋಟಿ ಜನರಿಗೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್‌ಡಿಎ ಸರ್ಕಾರ ಬರೀ ಖಾಲಿ ಚೊಂಬು ನೀಡಿದೆ. ಜಿಎಸ್‌ಟಿಯಲ್ಲಿ ಇಡೀ ದೇಶಕ್ಕೆ ಎರಡನೇ ಸ್ಥಾನದಲ್ಲಿರುವ ಕರ್ನಾಟಕಕ್ಕೆ ನಯಾಪೈಸೆ ನೀಡಿಲ್ಲ. ಈ ಬಜೆಟ್‌ ಮೋದಿ ಕುರ್ಚಿ ಉಳಿಸಿಕೊಳ್ಳಲು ಬಿಹಾರ ಮತ್ತು ಆಂಧ್ರಪ್ರದೇಶ ರಾಜ್ಯಗಳಿಗೆ ಮಾತ್ರ ಅನುದಾನ ಒದಗಿಸಲಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕೇಂದ್ರ ಸರ್ಕಾರ ರಾಜ್ಯದ ಜನರಿಗೆ ಖಾಲಿ ಚೊಂಬು ನೀಡಿದೆ. ಕಳೆದ ಬಾರಿ ರೈತರಿಗೆ ಬರಗಾಲಕ್ಕಾಗಿ ಹಣ ಮಂಜೂರು ಮಾಡಲು ರಾಜ್ಯ ಸರ್ಕಾರ ಸುಪ್ರೀಂಕೋರ್ಟ್‌ ಕದ ತಟ್ಟಬೇಕಾಯಿತು. ಸುಪ್ರೀಂ ಕೋರ್ಟ್‌ ಛೀಮಾರಿ ಹಾಕಿದ ಬಳಿಕ ಅನುದಾನ ಬಿಡುಗಡೆ ಮಾಡಿತ್ತು. ರಾಜ್ಯದ ಬಗ್ಗೆ ಪ್ರಧಾನಿ ಮೋದಿ ಸರ್ಕಾರ ಮಲತಾಯಿ ಧೋರಣೆ ಅನುಸರಿಸುತ್ತಿದೆ ಎಂದರು.

ಕಾಂಗ್ರೆಸ್‌ ಜಿಲ್ಲಾಧ್ಯಕ್ಷ ಸಿರಾಜ್‌ ಶೇಖ್ ಮಾತನಾಡಿ, ಚುನಾವಣಾ ಬಾಂಡ್‌ ಹಗರಣ ಮಾಡಿರುವ ಪ್ರಧಾನಿ ಮೋದಿ ಈಗ ಕುರ್ಚಿ ಉಳಿಸಿಕೊಳ್ಳಲು ಬಿಹಾರ, ಆಂಧ್ರಪ್ರದೇಶ ರಾಜ್ಯಗಳಿಗೆ ಯಥೇಚ್ಛವಾಗಿ ಬಜೆಟ್‌ನಲ್ಲಿ ಅನುದಾನ ಒದಗಿಸಿದ್ದಾರೆ ಎಂದರು.

ಹೊಸಪೇಟೆ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಎಚ್‌ಎನ್‌ಎಫ್‌ ಮೊಹಮ್ಮದ್ ಇಮಾಮ್‌ ನಿಯಾಜಿ ಮಾತನಾಡಿ, ಕೇಂದ್ರ ಸರ್ಕಾರ ಅನುದಾನ ಕೊಡುವುದರಲ್ಲಿ ತಾರತಮ್ಯ ಮಾಡಬಾರದು ಎಂದರು.

ಕಾಂಗ್ರೆಸ್‌ನ ಜಿಲ್ಲಾ ಉಪಾಧ್ಯಕ್ಷ ಕೆ.ಎಂ. ಹಾಲಪ್ಪ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ನಿಂಬಗಲ್ ರಾಮಕೃಷ್ಣ, ಜಿಲ್ಲಾ ವಕ್ಫ್ ಸಲಹಾ ಸಮಿತಿ ಜಿಲ್ಲಾಧ್ಯಕ್ಷ ಕೆ.ಎಸ್. ದಾದಾಪೀರ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅನಂತ ಪದ್ಮನಾಭ, ಜಿಲ್ಲಾ ಉಪಾಧ್ಯಕ್ಷ ರಮೇಶ, ಹಿಂದುಳಿದ ವರ್ಗಗಳ ವಿಭಾಗದ ಜಿಲ್ಲಾಧ್ಯಕ್ಷ ತಮ್ಮನ್ನಳಪ್ಪ, ಪರಿಶಿಷ್ಟ ಪಂಗಡ ವಿಭಾಗದ ಜಿಲ್ಲಾಧ್ಯಕ್ಷ ಕಾವಲ್ಲಿ ಶಿವಪ್ಪ ನಾಯಕ, ಪರಿಶಿಷ್ಟ ಜಾತಿ ವಿಭಾಗದ ಜಿಲ್ಲಾಧ್ಯಕ್ಷ ಬಣ್ಣದ ಮನೆ ಸೋಮಶೇಖರ್, ಕಾರ್ಮಿಕ ವಿಭಾಗದ ಜಿಲ್ಲಾಧ್ಯಕ್ಷ ಡಿ. ವೆಂಕಟರಮಣ, ಕಾನೂನು ವಿಭಾಗದ ಜಿಲ್ಲಾಧ್ಯಕ್ಷ ಎಚ್. ಮಹೇಶ, ಶಿಕ್ಷಕರ ವಿಭಾಗದ ಜಿಲ್ಲಾಧ್ಯಕ್ಷ ಸಣ್ಣ ಈರಪ್ಪ, ಮುಖಂಡರಾದ ಸಣ್ಣಮಾರೆಪ್ಪ, ಏಕಾಂಬರೇಶ ನಾಯ್ಕ, ವಿನಾಯಕ ಶೆಟ್ಟರ್, ಖಾಜಾ ಹುಸೇನ್, ಅಟವಾಳಗಿ ಕೋಟ್ರೇಶ, ಕ್ವಾಲ್ವಿ ಹನುಮಂತಪ್ಪ, ಗುರುಸಿದ್ದನ ಗೌಡ, ವಿ. ಅಂಜಿನಪ್ಪ, ಕುಮಾರೆಪ್ಪ, ಬಿ. ಮಂಜುನಾಥ ಯಾದವ್, ವಿ. ಸೋಮಪ್ಪ, ಸೈಯದ್ ಶುಕ್ರು , ಅಸ್ಲಂ ಮಾಳಗಿ, ಜಿ. ರಾಘವೇಂದ್ರ, ಸಂಗಪ್ಪ, ಯರಿಸ್ವಾಮಿ, ಗೋಪಾಲಕೃಷ್ಣ ಜಿ. ಶಿವಕುಮಾರ, ಭರತ್‌ ಕುಮಾರ್, ಸೋಹೇಲ್, ತಾಜುದ್ದೀನ್, ಅಲನ್ ಭಕ್ಷಿ, ಪ್ರದೀಪ್ ಕುಮಾರ್, ತಾರಾ ಬಾಷಾ, ಪರಶುರಾಮ, ಯೋಗ ಲಕ್ಷ್ಮೀ, ಕವಿತಾ ನಾಯಕ, ರಾಧಾ ನಾಯ್ಡು, ಮಂಜುಳಾ, ಲಕ್ಷ್ಮಮ್ಮ ಮತ್ತಿತರರಿದ್ದರು.

ಡಿಕೆಶಿಗೆ ದೂರು ಸಲ್ಲಿಸುವೆ:

ಪ್ರತಿಭಟನೆಯಲ್ಲಿ ಕಾಂಗ್ರೆಸ್‌ನಿಂದ ಗೆದ್ದಿರುವ ಜಿಲ್ಲೆಯ ಶಾಸಕರು ಪಾಲ್ಗೊಂಡಿಲ್ಲ. ಈ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರಗೆ ದೂರು ಸಲ್ಲಿಸುವೆ. ಪಕ್ಷದ ಕಾರ್ಯಕ್ರಮಗಳಿಂದ ಶಾಸಕರು ದೂರ ಉಳಿಯಬಾರದು ಎಂದು ವಿಜಯನಗರ ಕಾಂಗ್ರೆಸ್‌ ಜಿಲ್ಲಾಧ್ಯಕ್ಷ ಸಿರಾಜ್‌ ಶೇಕ್‌ ಹೇಳಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಅಕ್ರಮ ಡ್ರಗ್ಸ್‌ ವಾಸನೆ ತಡೆಗೆ ನಾಯಿಗಳ ಮಲಮೂತ್ರ!
ಐತಿಹಾಸಿಕ ಕರಗ ಶಕ್ತ್ಯೋತ್ಸವಕ್ಕೆ ಭರದ ಸಿದ್ಧತೆ