ಹಾವೇರಿ: ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಅವರ ಮನೆ ಮೇಲಿನ ಜಾರಿ ನಿರ್ದೇಶನಾಲಯ (ಇಡಿ) ದಾಳಿ ಖಂಡಿಸಿ ಗುರುವಾರ ನಗರದ ಮೈಲಾರ ಮಹದೇವಪ್ಪ ವೃತ್ತದಲ್ಲಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ ನಡೆಸಲಾಯಿತು.
ಈ ವೇಳೆ ಮಾಜಿ ಶಾಸಕ ನೆಹರು ಓಲೇಕಾರ ಮಾತನಾಡಿ, ಕೇಂದ್ರ ಸರ್ಕಾರ ತನಿಖಾ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಂಡು ವಿರೋಧ ಪಕ್ಷದ ನಾಯಕರನ್ನು ಗುರಿಯಾಗಿಸುತ್ತಿದೆ. ಜನಪರವಾಗಿ ಕೆಲಸ ಮಾಡುತ್ತಿರುವ ಅಹಿಂದ ನಾಯಕರನ್ನು ರಾಜಕೀಯವಾಗಿ ಹಣಿಯುವ ಉದ್ದೇಶದಿಂದ ಇಡಿ ದಾಳಿ ನಡೆಸಲಾಗುತ್ತಿದೆ. ಇದು ಪ್ರಜಾಪ್ರಭುತ್ವದ ಆಶಯಗಳಿಗೆ ವಿರುದ್ಧವಾದ ನಡೆ. ರಾಜಕೀಯ ದ್ವೇಷ ಸಾಧನೆಗಾಗಿ ತನಿಖಾ ಸಂಸ್ಥೆಗಳನ್ನು ಬಳಸಿಕೊಳ್ಳುವ ಪ್ರವೃತ್ತಿ ನಿಲ್ಲಬೇಕು ಎಂದು ಆಗ್ರಹಿಸಿದರು.
ಸತೀಶ ಜಾರಕಿಹೊಳಿ ಅವರು ಜನರೊಂದಿಗೆ ನಿಕಟವಾಗಿ ಕೆಲಸ ಮಾಡುತ್ತಿರುವ ನಾಯಕರು. ಅವರ ವಿರುದ್ಧ ಯಾವುದೇ ರೀತಿಯ ರಾಜಕೀಯ ಕುತಂತ್ರ ನಡೆಸಿದರೂ ಕಾಂಗ್ರೆಸ್ ಕಾರ್ಯಕರ್ತರು ಹೆದರುವುದಿಲ್ಲ. ಇಂತಹ ದಾಳಿಗಳ ಮೂಲಕ ನಾಯಕರನ್ನು ಬೆದರಿಸಲು ಸಾಧ್ಯವಿಲ್ಲ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ತನಿಖಾ ಸಂಸ್ಥೆಗಳು ಸ್ವತಂತ್ರವಾಗಿ ಕಾರ್ಯನಿರ್ವಹಿಸಬೇಕು. ಕೇಂದ್ರ ಸರ್ಕಾರದ ಒತ್ತಡಕ್ಕೆ ಮಣಿದು ವಿರೋಧ ಪಕ್ಷದ ನಾಯಕರನ್ನು ಗುರಿಯಾಗಿಸುವುದು ಸರಿಯಲ್ಲ ಎಂದು ಎಚ್ಚರಿಸಿದರು.ತಾಲೂಕು ಗ್ಯಾರಂಟಿ ಸಮಿತಿ ಅಧ್ಯಕ್ಷ ಎಂ.ಎಂ. ಮೈದೂರ ಮಾತನಾಡಿ, ಇಡಿ ದಾಳಿಯನ್ನು ಉಗ್ರವಾಗಿ ಖಂಡಿಸುತ್ತೇವೆ. ಬಡವರು, ದೀನದಲಿತರು ಹಾಗೂ ಶೋಷಿತರ ಪರವಾಗಿ ಸದಾ ಧ್ವನಿ ಎತ್ತುವ ಸತೀಶ ಜಾರಕಿಹೊಳಿ ಅವರನ್ನು ಗುರಿಯಾಗಿಸಿಕೊಂಡು ಸುಮಾರು 18 ಕಡೆಗಳಲ್ಲಿ ದಾಳಿ ನಡೆಸಿರುವುದು ರಾಜಕೀಯ ಪ್ರೇರಿತ ಕ್ರಮವಾಗಿದೆ. ಕೇಂದ್ರ ಸರ್ಕಾರ ತನಿಖಾ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಳ್ಳುವುದನ್ನು ನಿಲ್ಲಿಸಬೇಕೆಂದು ಒತ್ತಾಯಿಸಿದರು.
ಪಕ್ಷದ ಜಿಲ್ಲಾ ವಕ್ತಾರ ಡಾ. ಸಂಜಯ ಡಾಂಗೆ, ಪ್ರೇಮಾ ಪಾಟೀಲ ಮಾತನಾಡಿದರು. ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪ್ರಭುಗೌಡ ಬಿಷ್ಟನಗೌಡ್ರ, ಶಹರ ಕಾಂಗ್ರೆಸ್ ಅಧ್ಯಕ್ಷ ಗುಡ್ಡನಗೌಡ ಅಂದಾನಿಗೌಡ್ರ, ಶಂಕರ ಮೆಹರವಾಡೆ, ಶ್ರೀಧರ ದೊಡ್ಡಮನಿ, ಮುನ್ನಾಖಾನ್ ಪಠಾಣ, ಸಿ.ಎಸ್. ಲಕ್ಷ್ಮೇಶ್ವರಮಠ, ನಾಗರಾಜ ಬಡೆಮ್ಮನವರ, ನಾಗರಾಜ ತಳವಾರ, ಬಸವರಾಜ ತಳವಾರ, ಏಳುಕೋಟೆಪ್ಪ ಪಾಟೀಲ, ಬಾಬುಸಾಬ್ ಮೋಮಿನಗಾರ, ಶಿವರಾಜ ಮತ್ತಿಹಳ್ಳಿ, ಶೆಟ್ಟಿ ವಿಭೂತಿ, ಪ್ರಕಾಶ ಬಣಕಾರ, ಪುಟ್ಟಪ್ಪ ಮರಿಯಮ್ಮನವರ, ಬಿ.ಎಸ್. ಪಾಟೀಲ, ಜಮೀರ ಜಿಗರಿ, ಅತಾವುಲ್ಲಾ ಖಾಜಿ, ರಮೇಶ ಹರಿಜನ, ಗುಡ್ಡಪ್ಪ ಜಲದಿ, ರಾಧಾ ಸವಣೂರ, ವೈಶಾಲಿ ಹಿರೇಮಠ, ರತ್ನಾ ಶಿಡಗನಾಳ, ಗೀತಾ ಪ್ರಕಾಶ, ಸುಮಂಗಲಾ ಇಪ್ಪಿಕೊಪ್ಪ, ಲಲಿತಮ್ಮ ಹುಗ್ಗಿ ಸೇರಿದಂತೆ ಪಕ್ಷದ ಅನೇಕ ಕಾರ್ಯಕರ್ತರು ಪಾಲ್ಗೊಂಡಿದ್ದರು.