ಎಂಎಲ್ಸಿ ಸೀಟು ಗೆಲ್ಲಲು ‘ಕೈ’ ರೆಸಾರ್ಟ್‌ ರಣತಂತ್ರ

KannadaprabhaNewsNetwork |  
Published : Jun 13, 2026, 01:45 AM IST
ಪರಿಷತ್‌ ಚುನಾವಣೆ | Kannada Prabha

ಸಾರಾಂಶ

ವಿಧಾನಸಭೆಯಿಂದ ವಿಧಾನಪರಿಷತ್‌ಗೆ ಏಳು ಮಂದಿ ಸದಸ್ಯರನ್ನು ಚುನಾಯಿಸಲು ಜೂ.18ರಂದು ಚುನಾವಣೆ ನಡೆಯಲಿರುವ ಹಿನ್ನೆಲೆಯಲ್ಲಿ ಜೂ.16ರಂದು ಬಿಡದಿಯ ವಂಡರ್‌ ಲಾ ರೆಸಾರ್ಟ್‌ನಲ್ಲಿ ಕಾಂಗ್ರೆಸ್‌ ಶಾಸಕಾಂಗ ಪಕ್ಷದ ಸಭೆ ಕರೆಯಲಾಗಿದೆ.

ಕನ್ನಡಪ್ರಭ ವಾರ್ತೆ, ಬೆಂಗಳೂರು

ವಿಧಾನಸಭೆಯಿಂದ ವಿಧಾನಪರಿಷತ್‌ಗೆ ಏಳು ಮಂದಿ ಸದಸ್ಯರನ್ನು ಚುನಾಯಿಸಲು ಜೂ.18ರಂದು ಚುನಾವಣೆ ನಡೆಯಲಿರುವ ಹಿನ್ನೆಲೆಯಲ್ಲಿ ಜೂ.16ರಂದು ಬಿಡದಿಯ ವಂಡರ್‌ ಲಾ ರೆಸಾರ್ಟ್‌ನಲ್ಲಿ ಕಾಂಗ್ರೆಸ್‌ ಶಾಸಕಾಂಗ ಪಕ್ಷದ ಸಭೆ ಕರೆಯಲಾಗಿದೆ.

ಕಾಂಗ್ರೆಸ್‌ನ ಐದು ಅಭ್ಯರ್ಥಿಗಳನ್ನು ಗೆಲ್ಲಿಸಿಕೊಳ್ಳುವ ನಿಟ್ಟಿನಲ್ಲಿ ಚುನಾವಣಾ ರಣತಂತ್ರ ರೂಪಿಸಲಿದ್ದು, ಚುನಾವಣೆ ದಿನಾಂಕವಾದ ಜೂ.18ರವರೆಗೆ ಶಾಸಕರು ರೆಸಾರ್ಟ್‌ನಲ್ಲೇ ಉಳಿಯಲಿದ್ದಾರೆ. ಶಾಸಕರು ನೇರವಾಗಿ ರೆಸಾರ್ಟ್‌ನಿಂದ ಬಂದು ಪರಿಷತ್‌ ಚುನಾವಣೆಯಲ್ಲಿ ಮತ ಚಲಾಯಿಸಲಿದ್ದಾರೆ ಎಂದು ತಿಳಿದುಬಂದಿದೆ.

ಡಿ.ಕೆ. ಶಿವಕುಮಾರ್‌ ಅವರು ಕಾಂಗ್ರೆಸ್‌ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆ ಆದ ಬಳಿಕ ನಡೆಯುತ್ತಿರುವ ಮೊದಲ ಶಾಸಕಾಂಗ ಪಕ್ಷದ ಸಭೆಯಾಗಿದ್ದು, ರಾಜ್ಯ ಕಾಂಗ್ರೆಸ್‌ ಉಸ್ತುವಾರಿ ರಣದೀಪ್‌ಸಿಂಗ್‌ ಸುರ್ಜೇವಾಲಾ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್‌, ಶಾಸಕರು ಹಾಗೂ ಪರಿಷತ್‌ ಸದಸ್ಯರು ಭಾಗವಹಿಸಲಿದ್ದಾರೆ.

ಕಾಂಗ್ರೆಸ್‌ನ 5ನೇ ಅಭ್ಯರ್ಥಿಗೆ ಮತಗಳ ಕೊರತೆಯಿದೆ. ಆದರೂ 5ನೇ ಅಭ್ಯರ್ಥಿಯಾಗಿ ವಿನಯ್ ಕಾರ್ತಿಕ್‌ ಅವರನ್ನು ಕಣಕ್ಕಿಳಿಸಿದೆ. ಶತಾಯಗತಾಯ ಐದೂ ಅಭ್ಯರ್ಥಿಗಳನ್ನು ಗೆಲ್ಲಿಸಲು ರೆಸಾರ್ಟ್‌ನಲ್ಲಿ ರಣತಂತ್ರ ಹೆಣೆಯಲಿದ್ದಾರೆ.

ಪ್ರಸ್ತುತ ವಿಧಾನಸಭೆಯ ಸಂಖ್ಯಾಬಲ 222 ಇದೆ. ವಿಧಾನಪರಿಷತ್‌ನ 7 ಸ್ಥಾನಗಳಿಗೆ ಚುನಾವಣೆ ನಡೆಯುತ್ತಿರುವುದರಿಂದ ಪ್ರತಿ ಅಭ್ಯರ್ಥಿ ಗೆಲ್ಲಲು 28 ಶಾಸಕರ ಮತಗಳು ಅಗತ್ಯ.

ಪ್ರಸ್ತುತ ಕಾಂಗ್ರೆಸ್‌ ಬಳಿ ವಿಧಾನಸಭೆ ಸಭಾಧ್ಯಕ್ಷ ರುದ್ರಪ್ಪ ಲಮಾಣಿ ಮತ ಸೇರಿದಂತೆ 135 ಮತಗಳು ಇವೆ. ಜತೆಗೆ ಸರ್ವೋದಯ ಕರ್ನಾಟಕ ಪಕ್ಷದ ಶಾಸಕ ದರ್ಶನ್‌ ಪುಟ್ಟಣ್ಣಯ್ಯ, ಪಕ್ಷೇತರ ಶಾಸಕರಾದ ಲತಾ ಮಲ್ಲಿಕಾರ್ಜುನ್‌, ಕೆ.ಎಚ್. ಪುಟ್ಟಸ್ವಾಮಿಗೌಡ ಅವರ ಬೆಂಬಲ ಸೇರಿ 138 ಮತಗಳು ಇವೆ.

ಕಾಂಗ್ರೆಸ್‌ ಪಕ್ಷ ಕಣಕ್ಕಿಳಿಸಿರುವ 5 ಅಭ್ಯರ್ಥಿಗಳೂ ಗೆಲ್ಲಬೇಕಾದರೆ 140 ಮತ ಬೇಕು. ಕಾಂಗ್ರೆಸ್‌ ಬಳಿ ಪ್ರಸ್ತುತ ಇರುವ 138 ಸ್ಥಾನಗಳ ಜತೆಗೆ ಬಿಜೆಪಿಯಿಂದ ಉಚ್ಚಾಟನೆಗೊಂಡಿರುವ ಶಿವರಾಂ ಹೆಬ್ಬಾರ್, ಎಸ್.ಟಿ. ಸೋಮಶೇಖರ್‌ ಕಾಂಗ್ರೆಸ್‌ಗೆ ಮತ ಹಾಕುವ ಸಾಧ್ಯತೆಯಿದೆ. ಹೀಗಾದರೆ, ಕಾಂಗ್ರೆಸ್‌ನ 5ನೇ ಅಭ್ಯರ್ಥಿಯೂ ನಿರಾಯಾಸವಾಗಿ ಗೆಲುವು ಸಾಧಿಸಬಹುದು.

ಆದರೆ, ಪರಿಷತ್‌ಗೆ ಗೌಪ್ಯ ಮತದಾನ ನಡೆಯುವ ಹಿನ್ನೆಲೆಯಲ್ಲಿ ಕಾಂಗ್ರೆಸ್‌ನ ಮೊದಲ ನಾಲ್ಕು ಅಭ್ಯರ್ಥಿಗಳಿಗೆ ಪ್ರತಿ ಅಭ್ಯರ್ಥಿಗೆ 28 ಮತಗಳ ಜತೆಗೆ ಹೆಚ್ಚುವರಿಯಾಗಿ ಒಂದು ಮತ ಹಾಕಿಸಲಾಗುತ್ತದೆ. ಉಳಿದ ಮತಗಳ ಜತೆಗೆ ಎರಡನೇ ಪ್ರಾಶಸ್ತ್ಯ ಮತಗಳನ್ನು 5ನೇ ಅಭ್ಯರ್ಥಿಗೆ ಚಲಾವಣೆ ಮಾಡಿ ಐದೂ ಅಭ್ಯರ್ಥಿಗಳನ್ನು ಗೆಲ್ಲಿಸಿಕೊಳ್ಳುವ ಉದ್ದೇಶದಲ್ಲಿ ಕಾಂಗ್ರೆಸ್‌ ಇದೆ.ಯಾರ ಮತ ಯಾರಿಗೆ? ರೆಸಾರ್ಟ್‌ನಲ್ಲಿ ನಿರ್ದೇಶನ:

ಇದಕ್ಕಾಗಿ ಐದು ಅಭ್ಯರ್ಥಿಗಳ ಪರವಾಗಿಯೂ ಪ್ರತ್ಯೇಕವಾಗಿ ಏಜೆಂಟ್‌ ನೇಮಕ ಮಾಡಿ ಯಾವ ಶಾಸಕರು ಯಾವ ಅಭ್ಯರ್ಥಿಗೆ ಮತ ಹಾಕಬೇಕು ಎಂಬ ಬಗ್ಗೆ ಸ್ಪಷ್ಟ ಸೂಚನೆ ನೀಡಲಾಗುತ್ತದೆ. ಜತೆಗೆ ಯಾವ ಅಭ್ಯರ್ಥಿಗೆ ಎಷ್ಟು ಹೆಚ್ಚುವರಿ ಮತ ಹಾಕಬೇಕು? ಆ ಮತ ಯಾರದ್ದಾಗಿರಬೇಕು ಎಂಬ ಬಗ್ಗೆ ನಿರ್ದೇಶನ ನೀಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಪರಿಸರ ರಕ್ಷಣೆಗೆ ಶ್ರಮಿಸುತ್ತಿದೆ ಪುರಸಭೆ: ವಸಂತ ಕುಮಾರ್
ಜಾತಿಗಣತಿ: ವೀರಶೈವ ಲಿಂಗಾಯತರ ಸಂಖ್ಯೆ ಕಡಿತಕ್ಕೆ ಶಂಕರದೇವ ಶ್ರೀ ಬೇಸರ