ಕಾರ್ಕಳ: ಕಾರ್ಕಳ ಬ್ಲಾಕ್ ಕಾಂಗ್ರೆಸ್ ನಡೆಸಿದ ರಸ್ತೆ ಪರಿಶೀಲನಾ ಜಾಥಾ ಕುರಿತು ಬಿಜೆಪಿ ಕ್ಷೇತ್ರಾಧ್ಯಕ್ಷ ನವೀನ್ ನಾಯಕ್ ತೀವ್ರ ಟೀಕೆ ವ್ಯಕ್ತಪಡಿಸಿದ್ದಾರೆ.ರಾಜ್ಯದಲ್ಲಿ ಕಳೆದ ಮೂರು ವರ್ಷಗಳಿಂದ ಕಾಂಗ್ರೆಸ್ ಸರ್ಕಾರ ರಸ್ತೆ ಗುಂಡಿ ಮುಚ್ಚಲು ಸಮರ್ಪಕ ಅನುದಾನ ನೀಡಿಲ್ಲ. ಆದರೂ ಅದರ ಹೊಣೆಯನ್ನು ಕಾರ್ಕಳ ಶಾಸಕ ಹಾಗೂ ಬಿಜೆಪಿಯ ಮೇಲೆ ಹೊರಿಸುವುದು ಹಾಸ್ಯಾಸ್ಪದ ಎಂದು ಅವರು ಹೇಳಿದ್ದಾರೆ.
ಉದಯ ಶೆಟ್ಟಿ ನೇತೃತ್ವದ ಕಾಂಗ್ರೆಸ್ ಅಭಿವೃದ್ಧಿ ಕಾಮಗಾರಿಗಳನ್ನು ಟೀಕಿಸುವುದು, ಯೋಜನೆಗಳಿಗೆ ಅಡ್ಡಿಪಡಿಸುವುದು, ಸಾಮಾಜಿಕ ಜಾಲತಾಣಗಳಲ್ಲಿ ಬಿಜೆಪಿ ಹಾಗೂ ಶಾಸಕರ ವಿರುದ್ಧ ಅಪಪ್ರಚಾರ ನಡೆಸುವುದು ಮತ್ತು ರಾಜಕೀಯ ನಾಟಕಗಳಲ್ಲಿ ತೊಡಗಿರುವುದನ್ನು ಜನರು ಗಮನಿಸುತ್ತಿದ್ದಾರೆ ಎಂದು ನವೀನ್ ನಾಯಕ್ ಹೇಳಿದ್ದಾರೆ.
ದಿನನಿತ್ಯದ ಆರೋಪ-ಪ್ರತ್ಯಾರೋಪಗಳನ್ನು ಬಿಟ್ಟು ರಾಜ್ಯ ಸರ್ಕಾರದಿಂದ ಹೆಚ್ಚಿನ ಅನುದಾನ ತಂದು ಕಾರ್ಕಳದ ಅಭಿವೃದ್ಧಿಗೆ ಶ್ರಮಿಸಬೇಕು ಹಾಗೂ ಕ್ಷೇತ್ರದ ಸೌಹಾರ್ದ ಕಾಪಾಡಲು ಕಾಂಗ್ರೆಸ್ ಮುಂದಾಗಬೇಕು ಎಂದು ಅವರು ಸಲಹೆ ನೀಡಿದ್ದಾರೆ.