ವಿಧಾನಸಭೆ ಉಪ ಚುನಾವಣೆಯಲ್ಲಿ ಮೂರು ಕ್ಷೇತ್ರ ಗೆಲ್ಲುವ ಮೂಲಕ ಬಿಜೆಪಿಗೆ ಕಾಂಗ್ರೆಸ್ ತಕ್ಕ ಉತ್ತರ ನೀಡಿದೆ ಎಂದು ಶಾಸಕ ಎನ್.ಎಚ್. ಕೋನರಡ್ಡಿ ಹೇಳಿದರು.
ಹುಬ್ಬಳ್ಳಿ: ವಿಧಾನಸಭೆ ಉಪ ಚುನಾವಣೆಯಲ್ಲಿ ಮೂರು ಕ್ಷೇತ್ರ ಗೆಲ್ಲುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ನೇತೃತ್ವದ ಸರ್ಕಾರಕ್ಕೆ ರಾಜ್ಯದ ಜನತೆ ಬೆಂಬಲ ವ್ಯಕ್ತಪಡಿಸಿದ್ದಲ್ಲದೇ ಬಿಜೆಪಿಗೆ ಕಾಂಗ್ರೆಸ್ ತಕ್ಕ ಉತ್ತರ ನೀಡಿದೆ ಎಂದು ಶಾಸಕ ಎನ್.ಎಚ್. ಕೋನರಡ್ಡಿ ಹೇಳಿದರು.
ಈ ಕುರಿತು ಪ್ರಕಟಣೆ ನೀಡಿರುವ ಅವರು, ಬಿಜೆಪಿ ವಿರೋಧ ಪಕ್ಷವಾಗಿ ಸಣ್ಣ ಸಣ್ಣ ವಿಚಾರಗಳಿಗೆ ಸರ್ಕಾರದ ವಿರುದ್ಧ ಆಪಾದನೆ ಮಾಡುತ್ತ ವಿಧಾನಸಭೆ ಕಲಾಪ ನಡೆಸದೇ ಸುಳ್ಳು ಆರೋಪಗಳಿಗೆ ಮತದಾರರು ತಕ್ಕ ಉತ್ತರ ನೀಡಿದ್ದಾರೆ. ಚುನಾವಣಾ ಪೂರ್ವ ಸಮೀಕ್ಷೆ ಕೂಡ ವಿಫಲವಾಗಿ ಕಾಂಗ್ರೆಸ್ ಪಕ್ಷದ ಪರವಾಗಿ ಮತದಾರರು ಬೆಂಬಲಿಸಿರುವುದು ಸಂತಸ ತಂದಿದೆ. ಈ ಮೂರು ಕ್ಷೇತ್ರಗಳ ಗೆಲ್ಲಲು ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ, ಎಲ್ಲ ಸಚಿವರು, ಶಾಸಕರ, ಮುಂತಾದ ನಾಯಕರು, ಮುಖಂಡರ, ಕಾರ್ಯಕರ್ತರ ಸಂಘಟನೆಯಿಂದ ಹಾಗೂ ಒಗ್ಗಟ್ಟಿನ ಪ್ರಯತ್ನದಿಂದ ಸಾಧ್ಯವಾಗಿದೆ. ಮುಂಬರುವ ಜಿಪಂ, ಸ್ಥಳೀಯ ಸಂಸ್ಥೆಗಳ ಹಾಗೂ 2028ರ ವಿಧಾನಸಭಾ ಚುನಾವಣೆಯ ದಿಕ್ಸೂಚಿಯಾಗಿದೆ ಎಂದು ತಿಳಿಸಿದ್ದಾರೆ.
ಬಿಜೆಪಿ ಅಪಪ್ರಚಾರಕ್ಕೆ ಕಾಂಗ್ರೆಸ್ ಗೆಲುವೇ ಉತ್ತರ: ಶಾಸಕ ಅಬ್ಬಯ್ಯ
ಹುಬ್ಬಳ್ಳಿ: ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಅಪಪ್ರಚಾರ ಮಾಡಿದರೂ ಉಪಚುನಾವಣೆಯ ಮೂರು ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲ್ಲಿಸುವ ಮೂಲಕ ಜನರು ಬಿಜೆಪಿಗರಿಗೆ ತಕ್ಕ ಪಾಠ ಕಲಿಸಿದ್ದಾರೆ ಎಂದು ಸ್ಲಂ ಬೋರ್ಡ್ ಅಧ್ಯಕ್ಷ, ಶಾಸಕ ಪ್ರಸಾದ ಅಬ್ಬಯ್ಯ ಹೇಳಿದರು.
ಈ ಕುರಿತು ಪ್ರಕಟಣೆ ನೀಡಿ, ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳು ಮತ್ತು ಜನಪರ ಕಾರ್ಯಕ್ರಮಗಳಿಗೆ ಜನರು ಮನ್ನಣೆ ನೀಡುವ ಮೂಲಕ ಕಾಂಗ್ರೆಸ್ ಉತ್ತಮ ಆಡಳಿತವನ್ನು ಬೆಂಬಲಿಸಿದ್ದಾರೆ. ಮುಖ್ಯಮಂತ್ರಿಗಳ ವಿರುದ್ಧ ಎಷ್ಟೇ ಷಡ್ಯಂತ್ರ ಮಾಡಿದರೂ ಬಿಜೆಪಿಗರ ಆಟ ಉಪಚುನಾವಣೆಯಲ್ಲಿ ನಡೆಯಲಿಲ್ಲ. ಇಂದಿನ ಉಪಚುನಾವಣೆಯ ಗೆಲುವು ಇನ್ನಷ್ಟು ಬಲ ನೀಡಿದಂತಾಗಿದೆ.
ಕಾಂಗ್ರೆಸ್ ಯಾವತ್ತೂ ಬಡವರ ಮತ್ತು ಜನಪರ ಆಡಳಿತ ನೀಡುತ್ತದೆ ಎಂಬುದಕ್ಕೆ ಮೂರು ಕ್ಷೇತ್ರದ ಗೆಲುವೇ ನಿದರ್ಶನವಾಗಿದೆ. ಇನ್ನು ರಾಜ್ಯದಲ್ಲಿ ಕಾಂಗ್ರೆಸ್ ಆಡಳಿತವನ್ನು ಯಾರಿಂದಲೂ ತಡೆಯಲು ಸಾಧ್ಯವಿಲ್ಲ. ಬಿಜೆಪಿಯ ಯಾವುದೇ ಷಡ್ಯಂತ್ರಗಳು ಫಲಿಸುವುದಿಲ್ಲ ಎಂದು ತಿಳಿಸಿದ್ದಾರೆ.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.