ಲೋಕಸಭೆಯಲ್ಲಿ ಜೆಡಿಎಸ್ ವಿರುದ್ಧ ಕಾಂಗ್ರೆಸ್ ಗೆಲುವಿನ ಬಗ್ಗೆ ಉತ್ತರ
ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಕುಟುಂಬದ ವಿರುದ್ಧ ಸ್ಪರ್ಧಿಸಲು ಜಿಲ್ಲೆಯ ಏಕೈಕ ಕಾಂಗ್ರೆಸ್ ಶಾಸಕ ಕೆ.ಎಂ.ಶಿವಲಿಂಗೇಗೌಡರಿಗೆ ಟಿಕೆಟ್ ನೀಡದಿದ್ದರೆ ವ್ಯತಿರಿಕ್ತ ಫಲಿತಾಂಶ ಬರುವ ಸಾಧ್ಯತೆಯಿದೆ ಎಂದು ಮಾಜಿ ಸಚಿವ ಬಿ.ಶಿವರಾಮು ಹೇಳಿದರು.
ಲೋಕಸಭಾ ಚುನಾವಣೆಯಲ್ಲಿ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಕುಟುಂಬದ ವಿರುದ್ಧ ಸ್ಪರ್ಧಿಸಲು ಜಿಲ್ಲೆಯ ಏಕೈಕ ಕಾಂಗ್ರೆಸ್ ಶಾಸಕ ಕೆ.ಎಂ.ಶಿವಲಿಂಗೇಗೌಡರಿಗೆ ಟಿಕೆಟ್ ನೀಡದಿದ್ದರೆ ವ್ಯತಿರಿಕ್ತ ಫಲಿತಾಂಶ ಬರುವ ಸಾಧ್ಯತೆಯಿದೆ ಎಂದು ಮಾಜಿ ಸಚಿವ ಬಿ.ಶಿವರಾಮು ಹೇಳಿದರು. ಅರಸೀಕೆರೆಯಲ್ಲಿ ಮಾತನಾಡಿದರು.ನಗರದ ಪ್ರವಾಸಿ ಮಂದಿರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿ, ಕೇಂದ್ರದಲ್ಲಿ ಅಧಿಕಾರ ಹಿಡಿಯಲೇಬೇಕು ಎನ್ನುವ ಸಂಕಲ್ಪದೊಂದಿಗೆ ರಾಹುಲ್ ಗಾಂಧಿ ಮಣಿಪುರದಿಂದ ಈಗಾಗಲೇ ನ್ಯಾಯ ಯಾತ್ರೆ ಆರಂಭಿಸಿದ್ದಾರೆ. ರಾಜ್ಯದ ಇಪ್ಪತ್ತೆಂಟು ಕ್ಷೇತ್ರಗಳಲ್ಲಿ ಸಮರ್ಥ ಕಾಂಗ್ರೆಸ್ ಅಭ್ಯರ್ಥಿಗಳನ್ನು ತೀರ್ಮಾನಿಸಿದೆ. ಚಾಣಾಕ್ಯ ನಡೆ, ಸಂಪನ್ಮೂಲ, ಸಂಘಟನೆ ಹಾಗೂ ಸೂಕ್ತ ತಂತ್ರಗಾರಿಕೆ ಮೂಲಕ ಸ್ವಂತಶಕ್ತಿ ಹೊಂದಿರುವ ಶಾಸಕನ ಅಗತ್ಯವಿದೆ. ಆದ್ದರಿಂದ ಕೆ.ಎಂ.ಶಿವಲಿಂಗೇಗೌಡರೇ ಸೂಕ್ತ ಅಭ್ಯರ್ಥಿಯಾಗಿದ್ದಾರೆ.ಇವರನ್ನು ಹೊರತುಪಡಿಸಿ ಯಾರೇ ಕಣಕ್ಕಿಳಿದರೂ ಜೆಡಿಎಸ್ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಅವರಿಗೆ ಅನುಕೂಲವಾಗಲಿದ್ದು ಒಂದು ಸ್ಥಾನ ಕೈತಪ್ಪಲಿದೆ.ವಾಸ್ತವ ಮನಗಂಡು ಪಕ್ಷದ ಏಕೈಕ ಹಾಗೂ ಗೆಲ್ಲುವ ಸಾಮರ್ಥ್ಯ ಹೊಂದಿರುವ ಶಾಸಕರಿಗೆ ಟಿಕೆಟ್ ನೀಡುವಂತೆ ರಾಜ್ಯ ಹಾಗೂ ದೆಹಲಿ ವರಿಷ್ಠರಿಗೆ ಮನವರಿಕೆ ಮಾಡಿಕೊಟ್ಟಿದ್ದೇವೆ. ಹೈಕಮಾಂಡ್ ಸ್ಪರ್ಧೆಗೆ ಹಸಿರು ನಿಶಾನೆ ತೋರಿದರೆ ಗೆಲುವಿಗೆ ಒಗ್ಗಟ್ಟಿನ ಹೋರಾಟ ನಡೆಸಲಾಗುವುದು ಎಂದು ಹೇಳಿದರು.
ಕೆಪಿಸಿಸಿ ಸದಸ್ಯ ಜಿ.ಬಿ.ಶಶಿಧರ್ ಮಾತನಾಡಿ, ‘ವೀರಶೈವ ಲಿಂಗಾಯಿತ ಸಮುದಾಯಕ್ಕೆ ಸಾಮಾಜಿಕ ನ್ಯಾಯ ನೀಡಬೇಕು ಎನ್ನುವ ಉದ್ದೇಶದಿಂದ ಬಿ.ಶಿವರಾಮು ಬೇಲೂರು ಕ್ಷೇತ್ರಕ್ಕೆ ಹೋಗಿದ್ದಾರೆ. ಕಳೆದ ಬಾರಿ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದ ನಾನು ತ್ಯಾಗ ಮಾಡಿದ್ದರಿಂದಲೇ ಕೆ.ಎಂ.ಶಿವಲಿಂಗೇಗೌಡ ಅವರಿಗೆ ಅವಕಾಶ ದೊರೆತಿದ್ದರಿಂದ ಗೆಲುವು ಸುಗಮವಾಗಿದೆ.ಇದೀಗ ಗೆಲುವೇ ಮಾನದಂಡವಾಗಿದ್ದು ಲೋಕಸಭಾ ಚುನಾವಣೆಯಲ್ಲಿ ಶಾಸಕರಿಗೆ ಪಕ್ಷ ಟಿಕೆಟ್ ನೀಡಬೇಕು ಎನ್ನುವ ಎಲ್ಲರ ನಿಲುವಿಗೆ ಬದ್ಧನಿದ್ದು ಹೈಕಮಾಂಡ್ ಹಾಸನ ಲೋಕಸಭಾ ಕ್ಷೇತ್ರದ ಗೆಲುವಿನ ದೃಷ್ಟಿಯಿಂದ ಸೂಕ್ತ ನಿರ್ಧಾರ ತೆಗೆದುಕೊಳ್ಳಲಿ’ ಎಂದು ಹೇಳಿದರು.
ಪಿಎಲ್ಡಿ ಬ್ಯಾಂಕ್ ಅಧ್ಯಕ್ಷ ಗಂಗಾಧರ್, ನಗರಸಭೆ ಸದಸ್ಯ ವೆಂಕಟಮುನಿ, ತಾಪಂ ಮಾಜಿ ಸದಸ್ಯ ಮಂಗಳಾಪುರ ನಾಗರಾಜ್, ಎಪಿಎಂಸಿ ಮಾಜಿ ಅಧ್ಯಕ್ಷ ದೇಶಾಣಿ ಆನಂದ್, ನಗರಸಭೆ ಮಾಜಿ ಸದಸ್ಯರಾದ ಉಮಾಶಂಕರ್ ಯೂನಿಸ್, ಶ್ರೀನಿವಾಸ್, ಯುವ ಕಾಂಗ್ರೆಸ್ ಅಧ್ಯಕ್ಷರಾದ ಹುಲ್ಲೇನಹಳ್ಳಿ ರಘು, ಮುನ್ನಾ, ಸಿರಾಜ್ ಆಹಮದ್, ಸಮೀರ್, ಚಗಚಗೆರೆ ರಾಮಚಂದ್ರು, ದಿನೇಶ್ ಇದ್ದರು.ಅರಸೀಕೆರೆ ಪ್ರವಾಸಿ ಮಂದಿರದಲ್ಲಿ ಸುದ್ದಿಗೋಷ್ಟಿ ನಡೆಸಿ ಮಾಜಿ ಸಚಿವ ಬಿ.ಶಿವರಾಮು ಮಾತನಾಡಿದರು.