ಬಳ್ಳಾರಿ: ಜಿಲ್ಲಾ ಉಸ್ತುವಾರಿ ಸಚಿವ ಬಿ. ನಾಗೇಂದ್ರ ಅವರನ್ನು ಬೆಂಬಲಿಸಿ ನೂರಾರು ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಸಚಿವ ನಾಗೇಂದ್ರ ಬೆಂಬಲಿಗರು ನಗರದಲ್ಲಿ ಪ್ರತಿಭಟನೆ ನಡೆಸಿದರು.
ಪ್ರತಿಭಟನೆಯ ನೇತೃತ್ವ ವಹಿಸಿದ್ದ ಪಕ್ಷದ ಜಿಲ್ಲಾಧ್ಯಕ್ಷ ಅಲ್ಲಂ ಪ್ರಶಾಂತ್ ಹಾಗೂ ಲಿಡ್ಕರ್ ನಿಗಮದ ಅಧ್ಯಕ್ಷ ಮುಂಡರಗಿ ನಾಗರಾಜ್ ಮಾತನಾಡಿ, ಸಚಿವ ನಾಗೇಂದ್ರ ಅವರು ವಾಲ್ಮೀಕಿ ಸಮುದಾಯದ ರಾಜಕೀಯ ನಾಯಕರಾಗಿ ಬೆಳೆಯುತ್ತಿದ್ದಾರೆ. ಇದನ್ನು ಸಹಿಸದ ಪ್ರತಿಪಕ್ಷಗಳು ರಾಜಕೀಯ ಪ್ರೇರಿತವಾಗಿ ಹೋರಾಟ ನಡಸುತ್ತಿರುವುದು ಖಂಡನೀಯ. ಮಹರ್ಷಿ ವಾಲ್ಮೀಕಿ ನಿಗಮದ ಪ್ರಕರಣದಲ್ಲಿ ನಾಗೇಂದ್ರ ಅವರು ಆರೋಪಿಯೇ ಹೊರತು, ಅಪರಾಧಿಯಲ್ಲ. ಬಿಜೆಪಿಯ ಅನೇಕ ನಾಯಕರ ಮೇಲೆ ಸಾಕಷ್ಟು ಆರೋಪಗಳಿವೆ. ಹಾಗಾದರೆ ಅವರು ರಾಜಿನಾಮೆ ನೀಡಿದ್ದಾರೆಯೇ ಎಂದು ಪ್ರಶ್ನಿಸಿದರು.
ಮಾಜಿ ಬುಡಾ ಅಧ್ಯಕ್ಷ ಹುಮಾಯೂನ್ ಖಾನ್ ಮಾತನಾಡಿ, ವಾಲ್ಮೀಕಿ ನಾಯಕ ಎನಿಸಿಕೊಂಡಿದ್ದ ಶ್ರೀರಾಮುಲು ಅವರನ್ನು ಜನರು ಮರೆತು ಹೋಗಿದ್ದಾರೆ. ಹೀಗಾಗಿ, ಮತ್ತೆ ರಾಜಕೀಯವಾಗಿ ಗುರುತಿಸಿಕೊಳ್ಳಲು ನಾಗೇಂದ್ರ ವಿರುದ್ಧ ಮಾಧ್ಯಮಗಳಲ್ಲಿ ಹೇಳಿಕೆ ನೀಡುತ್ತಿದ್ದಾರೆ. ಜನಾರ್ದನ ರೆಡ್ಡಿ ಅವರು ಈ ಹಿಂದೆ ಅಕ್ರಮ ಗಣಿಗಾರಿಕೆ ಮಾಡಿ ರಿಪಬ್ಲಿಕ್ ಆಫ್ ಬಳ್ಳಾರಿ ಮಾಡಿದ್ದರು. ಜೈಲು ವಾಸ ಅನುಭವಿಸಿದರು. ಅವರಿಂದಾಗಿಯೇ ಬಳ್ಳಾರಿ ಹೆಸರು ಹಾಳಾಯಿತು. ಇದೀಗ ಅವರ ಬಾಯಲ್ಲಿ ಭ್ರಷ್ಟಾಚಾರ ವಿರೋಧಿ ಮಾತುಗಳು ಬರುತ್ತಿರುವುದು ಹಾಸ್ಯಾಸ್ಪದ ಎಂದು ಟೀಕಿಸಿದರು.ನಗರದ ಇಂದಿರಾ ವೃತ್ತದಿಂದ ಮೆರವಣಿಗೆ ಆರಂಭಿಸಿದ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ನಾಗೇಂದ್ರ ಬೆಂಬಲಿಗರು ಗಡಗಿಚನ್ನಪ್ಪ ವೃತ್ತದಲ್ಲಿ ಕೆಲ ಹೊತ್ತು ಧರಣಿ ನಡೆಸಿದರು. ಬಳಿಕ ಜಿಲ್ಲಾಧಿಕಾರಿ ಕಚೇರಿ ಎದುರುಗಿನ ಗಾಂಧಿ ಪ್ರತಿಮೆಗೆ ಬಳಿ ಸಮಾವೇಶಗೊಂಡರು. ಇದೇ ವೇಳೆ ಪಕ್ಷದ ಜಿಲ್ಲಾ ಪ್ರಮುಖರು ಮಾತನಾಡಿದರು.