ಕಾಂಗ್ರೆಸ್ಸಿಗರು ಹೊಣೆ ಅರಿತು ಮಾತನಾಡಲಿ : ವಿಜಯೇಂದ್ರ

KannadaprabhaNewsNetwork |  
Published : Apr 24, 2025, 11:48 PM ISTUpdated : Apr 25, 2025, 10:46 AM IST
BY Vijayendra

ಸಾರಾಂಶ

ಪಹಲ್ಗಾಂ ಉಗ್ರ ದಾಳಿ ಕುರಿತು ಜವಾಬ್ದಾರಿಯುತ ಸ್ಥಾನದಲ್ಲಿರುವ ಕಾಂಗ್ರೆಸ್ ನಾಯಕರು ತಮ್ಮ ಹೊಣೆ ಅರಿತು ಮಾತನಾಡಬೇಕು ಎಂದು ತಾಕೀತು ಮಾಡಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ,

  ಬೆಂಗಳೂರು : ಪಹಲ್ಗಾಂ ಉಗ್ರ ದಾಳಿ ಕುರಿತು ಜವಾಬ್ದಾರಿಯುತ ಸ್ಥಾನದಲ್ಲಿರುವ ಕಾಂಗ್ರೆಸ್ ನಾಯಕರು ತಮ್ಮ ಹೊಣೆ ಅರಿತು ಮಾತನಾಡಬೇಕು ಎಂದು ತಾಕೀತು ಮಾಡಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಅರವತ್ತು ವರ್ಷಗಳ ಕಾಲ ಆಡಳಿತ ನಡೆಸಿರುವ ಕಾಂಗ್ರೆಸ್ ಪಕ್ಷಕ್ಕೆ ಈ ದೇಶದಿಂದ ಭಯೋತ್ಪಾದನೆಯನ್ನು ಕಿತ್ತು ಹಾಕಲು ಯಾಕೆ ಸಾಧ್ಯವಾಗಲಿಲ್ಲ ಎಂದು ಖಾರವಾಗಿ ಪ್ರಶ್ನಿಸಿದ್ದಾರೆ.

ಗುರುವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ನೀವು ಕೇಂದ್ರದ ಬೇಹುಗಾರಿಕಾ ವೈಫಲ್ಯಗಳ ಬಗ್ಗೆ ಮಾತನಾಡುತ್ತೀರಿ. ಸಿದ್ದರಾಮಯ್ಯನವರೇ, ನೀವು ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಅವರಿಗೆ ಈ ಬಗ್ಗೆ ಪ್ರಶ್ನೆ ಮಾಡಬೇಕಿದೆ ಎಂದರು.

ಇದರ ಬಗ್ಗೆ ಚರ್ಚಿಸುವುದನ್ನು ಬಿಟ್ಟು, ಇಂತಹ ಸಂದಿಗ್ಧ ಪರಿಸ್ಥಿತಿಯಲ್ಲಿ ಪ್ರತಿಯೊಬ್ಬ ಭಾರತೀಯರೂ ಒಟ್ಟಾಗಿ ನಿಲ್ಲಬೇಕಾಗಿದೆ. ಈ ಜಗತ್ತಿಗೆ ಒಂದು ಸ್ಪಷ್ಟ ಸಂದೇಶ ನೀಡಬೇಕಾಗಿದೆ. ಭಯೋತ್ಪಾದನೆ ಎಂಬುದು ಕೇವಲ ಭಾರತಕ್ಕೆ ಸೀಮಿತವಾಗಿಲ್ಲ. ಇದು ಜಾಗತಿಕ ಸಮಸ್ಯೆ. ಹಾಗಾಗಿ ಪ್ರಧಾನಿ ಮೋದಿ ಅವರು ಯಾವುದೇ ದೇಶಕ್ಕೆ ಹೋದಾಗಲೂ ಉಗ್ರವಾದವನ್ನು ಜಗತ್ತು ಖಂಡಿಸಬೇಕು, ಬುಡಸಮೇತ ಕಿತ್ತು ಹಾಕಬೇಕೆಂದು ಬಲವಾಗಿ ಪ್ರತಿಪಾದನೆ ಮಾಡುತ್ತಿದ್ದಾರೆ ಎಂದು ಹೇಳಿದರು.

ಹಿಂದೂ ಅನಿಸಲೇ ಇಲ್ಲ:

ಸಿದ್ದರಾಮಯ್ಯ, ಮಲ್ಲಿಕಾರ್ಜುನ ಖರ್ಗೆ, ಪ್ರಿಯಾಂಕ್ ಖರ್ಗೆ ಅವರಿಗೆ ಕೇಳಲು ಬಯಸುತ್ತೇನೆ. ನೀವು ಮಲ್ಲಿಕಾರ್ಜುನ ಖರ್ಗೆ ಅವರ ಟ್ವೀಟ್ ನೋಡಿ. ಮಲ್ಲಿಕಾರ್ಜುನ ಖರ್ಗೆ ಅವರು ಟ್ವೀಟ್‍ನಲ್ಲಿ ಭಾರತೀಯ ಪ್ರವಾಸಿಗರ ಮೇಲೆ ಭಯೋತ್ಪಾದಕರು ದಾಳಿ ಮಾಡಿದ್ದಾಗಿ ಹೇಳಿದ್ದಾರೆ. ಪಾಪ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಮೃತರೆಲ್ಲ ಹಿಂದೂ ಎಂದು ಅನಿಸಲೇ ಇಲ್ಲ. ಉಗ್ರರು ಪ್ರತಿಯೊಬ್ಬರನ್ನು ಶೂಟ್ ಮಾಡಬೇಕಾದರೆ ಹಿಂದೂವೇ, ಮುಸಲ್ಮಾನರೇ ಎಂದು ಪತ್ತೆ ಹಚ್ಚಿ ಗುಂಡಿಟ್ಟು ಸಾಯಿಸಿದ್ದಾರೆ ಎಂದು ಟೀಕಿಸಿದರು.

ಮಲ್ಲಿಕಾರ್ಜುನ ಖರ್ಗೆ ಅವರಿಗೆ ಕೇವಲ ಭಾರತೀಯ ಪ್ರವಾಸಿಗರಷ್ಟೇ ಕಾಣುತ್ತಿದ್ದಾರೆ. ಕಾಂಗ್ರೆಸ್ಸಿಗರಿಗೆ ಹಿಂದೂಗಳು ಕಾಣುತ್ತಿಲ್ಲ. ಇದು ದೇಶದ ದುರ್ದೈವ. ಈ ರೀತಿಯ ರಾಜಕಾರಣ ಇನ್ನಾದರೂ ಬಿಡಬೇಕಿದೆ. ಪ್ರತಿಯೊಬ್ಬ ಭಾರತೀಯರೂ ಒಂದಾಗಿ ನಿಲ್ಲಬೇಕೆಂದು ಮನವಿ ಮಾಡಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರೈಲ್ವೆ ಪರೀಕ್ಷೆಯಲ್ಲಿ ಮತ್ತೆ ಕನ್ನಡಕ್ಕೆ ಕೊಕ್
ಓಡಿ ಹೋದ ಹೇಡಿ ಎನಿಸಿಕೊಳ್ಳುವುದಿಲ್ಲ. ಅಲ್ಲೇ ರಾಜಕೀಯ ಅಸ್ತಿತ್ವ ಕಂಡುಕೊಳ್ಳುತ್ತೇನೆ : ನಿಖಿಲ್‌