ಕೆರೆಗಳ ಸಂರಕ್ಷಣೆ, ಅಭಿವೃದ್ಧಿ ನಮ್ಮ ಕರ್ತವ್ಯ: ಶಾಸಕ ಕೆ.ಎಂ.ಉದಯ್

KannadaprabhaNewsNetwork |  
Published : Oct 15, 2025, 02:06 AM IST
14ಕೆಎಂಎನ್ ಡಿ16 | Kannada Prabha

ಸಾರಾಂಶ

ಮದ್ದೂರು ತಾಲೂಕಿನ ಕೆಲವು ಕಡೆಗಳಲ್ಲಿ ಕೆರೆ, ಕಟ್ಟೆಗಳಲ್ಲಿ ಸರಿಯಾದ ಪ್ರಮಾಣದಲ್ಲಿ ನೀರಿನ ಸಂಗ್ರಹಣೆ ಮಾಡಿದ ಕಾರಣ ಬೇಸಿಗೆಯಲ್ಲಿ ಜನ, ಜಾನುವಾರು ಮತ್ತು ಕೃಷಿ ಚಟುವಟಿಕೆಗೆ ನೀರಿನ ಸಮಸ್ಯೆ ಎದುರಾಗಿತ್ತು. ತಾವು ಶಾಸಕರಾಗಿ ಆಯ್ಕೆಯಾದ ನಂತರ ಕೆರೆಕಟ್ಟೆಗಳ ಅಭಿವೃದ್ಧಿ ಜೊತೆಗೆ ರಸ್ತೆ, ಮೂಲ ಸೌಲಭ್ಯಗಳಿಗೆ ಹೆಚ್ಚಿನ ಆದ್ಯತೆ ನೀಡಿದ್ದೇನೆ.

ಕನ್ನಡಪ್ರಭ ವಾರ್ತೆ ಮದ್ದೂರು

ಕೃಷಿಕರ ಜೀವನಾಡಿ, ಪುರಾತನ ಕೆರೆಗಳನ್ನು ಸಂರಕ್ಷಣೆ ಮಾಡಿ ಅಭಿವೃದ್ಧಿ ಪಡಿಸುವುದು ನಮ್ಮ ಕರ್ತವ್ಯ ಎಂದು ಶಾಸಕ ಕೆ.ಎಂ.ಉದಯ್ ಶುಕ್ರವಾರ ಹೇಳಿದರು.

ತಾಲೂಕಿನ ಆತಗೂರು ಗ್ರಾಮದಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮ ಅಭಿವೃದ್ಧಿ ಮತ್ತು ಕೆರೆ ಅಭಿವೃದ್ಧಿ ಸಮಿತಿಯಿಂದ 8 ಲಕ್ಷ ರು. ವೆಚ್ಚದಲ್ಲಿ ಅಭಿವೃದ್ಧಿ ಪಡಿಸಿರುವ ಆತಗೂರು ಕೆರೆಗೆ ಪೂಜೆ ಸಲ್ಲಿಸಿ, ಬಾಗಿನ ಅರ್ಪಣೆ ಮಾಡಿದ ನಂತರ ಗ್ರಾಮ ಪಂಚಾಯ್ತಿಗೆ ಹಸ್ತಾಂತರಿಸಿ ಮಾತನಾಡಿದರು.

ಪ್ರತಿ ಊರಿಗೊಂದು ಕೆರೆ ಅವಶ್ಯಕತೆ ಇದೆ. ಸ್ಥಳೀಯ ಗ್ರಾಮಸ್ಥರು ಕೆರೆಗಳನ್ನು ರಕ್ಷಣೆ ಮಾಡಬೇಕು. ನಾಲೆಗಳ ಮೂಲಕ ಹರಿದು ಬರುವ ನೀರನ್ನು ಕೆರೆಗಳಿಗೆ ತಲುಪಿಸುವುದರಿಂದ ನೀರಿನ ಸಂಗ್ರಹಣೆಯೊಂದಿಗೆ ಅಂತರ್ಜಲ ವೃದ್ಧಿಗೂ ಸಹಕಾರಿಯಾಗುತ್ತದೆ ಎಂದರು.

ತಾಲೂಕಿನ ಕೆಲವು ಕಡೆಗಳಲ್ಲಿ ಕೆರೆ, ಕಟ್ಟೆಗಳಲ್ಲಿ ಸರಿಯಾದ ಪ್ರಮಾಣದಲ್ಲಿ ನೀರಿನ ಸಂಗ್ರಹಣೆ ಮಾಡಿದ ಕಾರಣ ಬೇಸಿಗೆಯಲ್ಲಿ ಜನ, ಜಾನುವಾರು ಮತ್ತು ಕೃಷಿ ಚಟುವಟಿಕೆಗೆ ನೀರಿನ ಸಮಸ್ಯೆ ಎದುರಾಗಿತ್ತು. ತಾವು ಶಾಸಕರಾಗಿ ಆಯ್ಕೆಯಾದ ನಂತರ ಕೆರೆಕಟ್ಟೆಗಳ ಅಭಿವೃದ್ಧಿ ಜೊತೆಗೆ ರಸ್ತೆ, ಮೂಲ ಸೌಲಭ್ಯಗಳಿಗೆ ಹೆಚ್ಚಿನ ಆದ್ಯತೆ ನೀಡಿದ್ದೇನೆ ಎಂದರು.

ಶ್ರೀಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆ ತನ್ನ ಹಲವು ಜನಪರ ಯೋಜನೆಗಳ ಜೊತೆಗೆ ಕೆರೆಗಳ ಪುನಶ್ಚೇತನಕ್ಕೂ ಹೆಚ್ಚಿನ ಆದ್ಯತೆ ನೀಡುತ್ತಿರುವುದು ಶ್ಲಾಘನೀಯ ಎಂದರು.

ಈ ವೇಳೆ ಧರ್ಮಸ್ಥಳ ಸಂಸ್ಥೆ ಪ್ರಾದೇಶಿಕ ನಿರ್ದೇಶಕ ಜಯಂತ್ ಪೂಜಾರಿ ಕಾರ್ಯಕ್ರಮ ಉದ್ಘಾಟಿಸಿದರು. ಕೆರೆ ಸಮಿತಿ ಗೌರವಾಧ್ಯಕ್ಷೆ ಲಲಿತಮ್ಮ ಸಿದ್ದರಾಜು ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ನಿರ್ದೇಶಕಿ ಎಂ.ಚೇತನ, ಕೆರೆ ಸಮಿತಿ ಅಧ್ಯಕ್ಷ ಶಮಿತಾ, ಗ್ರಾಮ ಅಭಿವೃದ್ಧಿ ಅಧ್ಯಕ್ಷ ಶಶಿಧರ್, ಜಿಲ್ಲಾ ಜನಜಾಗೃತಿ ವೇದಿಕೆ ಸದಸ್ಯ ಎಂಪಿ ಲಿಂಗೇಗೌಡ, ಗ್ರಾಪಂ ಅಧ್ಯಕ್ಷ ಗೋವಿಂದ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆ ಮೇಲ್ವಿಚಾರಕರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕೇಂದ್ರ ಸರ್ಕಾರದ ಸಾಧನೆ ತಿಳಿ ಹೇಳಿ
ತಂದೆಯಂತೆ ಜನಸೇವೆ ಮಾಡುವ ಕನಸು ನನ್ನದು: ವಿನಯ ತಿಮ್ಮಾಪುರ