ಕನ್ನಡಪ್ರಭ ವಾರ್ತೆ ಮದ್ದೂರು
ಪಟ್ಟಣದ ಮಹಿಳಾ ಸರ್ಕಾರಿ ಕಾಲೇಜು ಆವರಣದಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ, ತಾಲೂಕು ಆಡಳಿತ ಸೇರಿದಂತೆ ವಿವಿದ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಆಯೋಜಿಸಿದ್ದ ಕಾರ್ಯಕ್ರಮದ ವೇಳೆ ಡಾ.ಅಂಬೇಡ್ಕರ್ ಭಾವಚಿತ್ರಕ್ಕೆ ಶಾಸಕ ಕೆ.ಎಂ.ಉದಯ್ ಪುಷ್ಪಾರ್ಚನೆ ನೆರವೇರಿಸಿ ಮಾತನಾಡಿದರು.
ಭಾರತೀಯ ಸಂವಿಧಾನ ನಿರ್ಮಾತೃ ಡಾ.ಬಿ.ಆರ್.ಅಂಬೇಡ್ಕರ್ ಧಮನಿತರ ದನಿಯಾಗಿ ಸಮಾನತೆಗೆ ಶ್ರಮಿಸಿದ ಮಹಾನ್ ವ್ಯಕ್ತಿ. 20ನೇ ಶತಮಾನದ ಭಾರತ ಸೃಜಿಸಿದ ಮಹಾನ್ ದಾರ್ಶನಿಕರು. ಅವರ ತತ್ವ, ಆದರ್ಶಗಳನ್ನು ಪ್ರತಿಯೊಬ್ಬರೂ ಮೈಗೂಡಿಸಿಕೊಳ್ಳಬೇಕೆಂದರು.ಅಂಬೇಡ್ಕರ್ ಅವರ ಕೊಡುಗೆ ವಿಶ್ವಕ್ಕೆ ಅನನ್ಯವಾಗಿದ್ದು ಸಂವಿಧಾನವನ್ನು ರಚಿಸುವ ಮೂಲಕ ದೇಶಕ್ಕೆ ಕೊಡುಗೆ ನೀಡಿರುವ ಇಂತಹ ಮಹಾನ್ ನಾಯಕನ ಜಯಂತಿಯನ್ನು ದಿನನಿತ್ಯವೂ ಆಚರಿಸುವಂತಹ ಕೆಲಸವಾಗಬೇಕು. ಕೆಲವರು ಸ್ವಾರ್ಥಕ್ಕಾಗಿ ಅಂಬೇಡ್ಕರ್ ಅವರ ಭಾವಚಿತ್ರವನ್ನು ಬಳಕೆ ಮಾಡಿಕೊಳ್ಳುತ್ತಿರುವುದು ಸರಿಯಲ್ಲ ವಿಷಾದಿಸಿದರು.
ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ ಹಲವು ಮಂದಿ ಸಾಧಕರನ್ನು ಅಭಿನಂದಿಸಲಾಯಿತು.
ಈ ವೇಳೆ ಡಿ.ಸಿ.ಸಿ ಬ್ಯಾಂಕ್ ನಿರ್ದೇಶಕ ಪಿ.ಸಂದರ್ಶ, ತಾಪಂ ಇಒ ರಾಮಲಿಂಗಯ್ಯ, ಬಿಇಒ ಎಸ್.ಬಿ.ಧನಂಜಯ, ಆರಕ್ಷಕ ನಿರೀಕ್ಷಕ ಎಚ್.ಎಸ್.ನವೀನ್, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಎಲ್.ನಾಗರಾಜು, ಮುಖಂಡರಾದ ಚಿದಂಬರ್ಮೂರ್ತಿ, ಅರವನಹಳ್ಳಿ ಸಿದ್ಧರಾಜು, ರಾಜೇಂದ್ರ, ಬೋರಯ್ಯ, ಮಹದೇವು ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಹಾಜರಿದ್ದರು.