ನಾಳೆಯಿಂದ ಸಂವಿಧಾನ ಜಾಗೃತಿ ಜಾಥಾ: ಸಿಇಒ

KannadaprabhaNewsNetwork | Published : Jan 25, 2024 2:01 AM

ಸಾರಾಂಶ

ರಾಮನಗರ: ಜನವರಿ 26ರಿಂದ ಫೆ. 24ರವರೆಗೆ ಸಂವಿಧಾನ ಜಾಗೃತಿ ಜಾಥಾ ನಡೆಯಲಿದೆ ಎಂದು ಜಿಪಂ ಸಿಇಒ ದಿಗ್ವಿಜಯ್ ಬೋಡ್ಕೆ ತಿಳಿಸಿದರು.

ರಾಮನಗರ: ಜನವರಿ 26ರಿಂದ ಫೆ. 24ರವರೆಗೆ ಸಂವಿಧಾನ ಜಾಗೃತಿ ಜಾಥಾ ನಡೆಯಲಿದೆ ಎಂದು ಜಿಪಂ ಸಿಇಒ ದಿಗ್ವಿಜಯ್ ಬೋಡ್ಕೆ ತಿಳಿಸಿದರು.

ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ನಡೆದ ಸಂವಿಧಾನ ದಿನಾಚರಣೆ ಪ್ರಯುಕ್ತ ರಾಷ್ಟ್ರೀಯ ಮಟ್ಟದ ಸಮ್ಮೇಳನದ ಅಂಗವಾಗಿ ಜಿಲ್ಲೆಯಲ್ಲಿ ಸಂವಿಧಾನ ಜಾಗೃತಿ ಜಾಥಾ ಹಮ್ಮಿಕೊಳ್ಳುವ ಸಂಬಂಧ ಕರೆದಿದ್ದ ಪೂರ್ವ ಸಿದ್ದತಾ ಸಭೆಯಲ್ಲಿ ಅವರು ಮಾತನಾಡಿದರು.

ಸರ್ಕಾರದ ನಿರ್ದೇಶನದಂತೆ ಸಂವಿಧಾನ ಜಾಗೃತಿ ಜಾಥಾ ಸ್ತಬ್ಧ ಚಿತ್ರ ಜಿಲ್ಲೆಯ ಎಲ್ಲ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಸಂಚರಿಸಲಿದೆ. ಸಂವಿಧಾನ ಮೌಲ್ಯಗಳು ಮತ್ತು ಆಶಯಗಳ ಕುರಿತು ಜನಜಾಗೃತಿ ಮೂಡಿಸುವುದು ಜಾಥಾದ ಉದ್ದೇಶ. ಈ ಜಾಥಾಕ್ಕೆ ಜನವರಿ 26ರಂದು ಜಿಲ್ಲಾ ಉಸ್ತುವಾರಿ ಸಚಿವ ರಾಮಲಿಂಗಾರೆಡ್ಡಿ ಚಾಲನೆ ನೀಡುವರು.

ಕಾರ್ಯಕ್ರಮಕ್ಕೆ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳನ್ನು ನೋಡಲ್ ಅಧಿಕಾರಿಗಳನ್ನಾಗಿ ನೇಮಿಸಿ ಜಾಥಾದ ವ್ಯವಸ್ಥೆ ಕುರಿತು ನಿಗಾ ವಹಿಸುವಂತೆ ಸೂಚಿಸಲಾಗಿದೆ. ಸ್ತಬ್ಧ ಚಿತ್ರದಲ್ಲಿ ಡಾ. ಬಿ.ಆರ್.ಅಂಬೇಡ್ಕರ್ ಅವರ ಸಂವಿಧಾನದ ಪರಿಕಲ್ಪನೆ, ಅವರ ಪ್ರತಿಮೆ, ಕ್ಷೇತ್ರದ ಪ್ರಮುಖ ವ್ಯಕ್ತಿಗಳ ಮಾಹಿತಿ, ಸಾಹಿತ್ಯ, ಕಲೆ, ಸಂಸ್ಕೃತಿ ಮತ್ತು ಸರ್ಕಾರದ ಐದು ಯೋಜನೆಗಳನ್ನು ಸ್ತಬ್ಧ ಚಿತ್ರದಲ್ಲಿ ಅಳವಡಿಸಲಾಗುವುದು. ಗ್ರಾಪಂ ಮಟ್ಟದಲ್ಲಿ ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸಲಾಗುವುದಲ್ಲದೆ, ಪಂಚಾಯಿತಿ ವತಿಯಿಂದ ಪ್ರಬಂಧ, ಚಿತ್ರಕಲೆ, ಭಾಷಣ ಸ್ಪರ್ಧೆ ಸೇರಿದಂತೆ ಸಾಂಸ್ಕೃತಿ ಕಾರ್ಯಕ್ರಮಗಳನ್ನು ಆಯೋಜಿಸಲಾಗುವುದು ಎಂದರು.

ಸಭೆಯಲ್ಲಿ ಉಪ ಕಾರ್ಯದರ್ಶಿ ಚಿಕ್ಕಸುಬ್ಬಯ್ಯ, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಶಾಂತಿಪ್ರಿಯಾ, ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ವಿವಿಧ ಸಂಘಟನೆಗಳು ಅಧ್ಯಕ್ಷರು, ಪದಾಧಿಕಾರಿಗಳು ಆದ ಶಿವಕುಮಾರಸ್ವಾಮಿ, ಶಿವಕುಮಾರ್, ಶಿವಪ್ರಕಾಶ್ , ಸಂಪಾದಕ ಚಲುವರಾಜು, ಗುಡ್ಡೆ ವೆಂಕಟೇಶ್, ದೊಡ್ಡಯ್ಯ, ಕೃಷ್ಣಮೂರ್ತಿ, ವಾಸು, ಮಲ್ಲಿಕಾರ್ಜುನ್, ರಮೇಶ್, ಶೇಖರ್, ಹರೀಶ್ ಬಾಲು ಹಾಗೂ ಇತರರಿದ್ದರು.

24ಕೆಆರ್ ಎಂಎನ್ 5 .ಜೆಪಿಜಿ

ರಾಮನಗರ ಜಿಪಂ ಸಭಾಂಗಣದಲ್ಲಿ ನಡೆದ ಸಂವಿಧಾನ ಜಾಗೃತಿ ಜಾಥಾ ಪೂರ್ವಭಾವಿ ಸಭೆಯಲ್ಲಿ ಜಿಪಂ ಸಿಇಒ ದಿಗ್ವಿಜಯ್ ಬೋಡ್ಕೆ ಮಾತನಾಡಿದರು.

Share this article