ಹೊಸಪೇಟೆ: ರಾಜ್ಯದಲ್ಲಿ ಸಂವಿಧಾನದ ಆಶಯಗಳನ್ನು ಈಡೇರಿಸುವ ಹಾಗೂ ಸಮ ಸಮಾಜವನ್ನು ನಿರ್ಮಿಸುವ ಧ್ಯೇಯೋದ್ದೇಶದೊಂದಿಗೆ ಸಂವಿಧಾನದ ಜಾಗೃತಿ ಜಾಥಾ ನಡೆಸಲಾಗುತ್ತಿದ್ದು, ವಿಜಯನಗರ ಜಿಲ್ಲಾದ್ಯಂತ ಯಶಸ್ವಿಯಾಗಿ ನಡೆಯುತ್ತಿದೆ ಎಂದು ಜಿಲ್ಲಾಧಿಕಾರಿ ಎಂ.ಎಸ್. ದಿವಾಕರ್ ತಿಳಿಸಿದರು.
ಗ್ರಾಮ ಪಂಚಾಯಿತಿ ಚುನಾಯಿತ ಪ್ರತಿನಿಧಿಗಳು ಸಂಘ ಸಂಸ್ಥೆಗಳ ಪ್ರತಿನಿಧಿಗಳು, ಶಾಲಾ- ಕಾಲೇಜುಗಳು ಮಕ್ಕಳಿಗೆ ನಾಟಕ, ಪ್ರಬಂಧ, ಚರ್ಚಾ ಸ್ಪರ್ಧೆಗಳನ್ನು ನಡೆಸಿ ಸಂವಿಧಾನದ ಆಶಯಗಳನ್ನು ತಿಳಿಸಲಾಗಿದೆ ಎಂದರು.
ಜಿಲ್ಲೆಯಲ್ಲಿ ಒಂದನೇ ತರಗತಿಯಿಂದ ಹತ್ತನೆ ತರಗತಿಯವರೆಗೆ 2,38 ಲಕ್ಷ ಮಕ್ಕಳಿಗೆ ಶಾಲೆಯಲ್ಲಿ ನಿತ್ಯವೂ ಸಂವಿಧಾನದ ಪೀಠಿಕೆಯನ್ನು ಬೋಧಿಸಲಾಗುತ್ತಿದೆ. ರಾಜ್ಯದಲ್ಲಿ ಬಸವಣ್ಣ, ಅಂಬೇಡ್ಕರ್ ಅವರ ಆಶಯಗಳನ್ನು ಪ್ರಚುರಪಡಿಸಲಾಗುತ್ತಿದೆ. ಸಮಾನತೆಯನ್ನು ಸಾರಲಾಗುತ್ತಿದೆ. ಇದರ ನಿಮಿತ್ತ ಜಿಲ್ಲೆಯಲ್ಲಿ ಸಂವಿಧಾನದ ಆಶಯದಂತೆ ನಡೆದುಕೊಳ್ಳಲು ಶಾಲಾ ಮಕ್ಕಳಿಗೆ ತಿಳಿ ಹೇಳಲಾಗುತ್ತಿದೆ. ಜಾಥಾಕ್ಕೆ ಜಿಲ್ಲೆಯಲ್ಲಿ ಉತ್ತಮ ಸ್ಪಂದನೆ ದೊರೆಯುತ್ತಿದೆ ಎಂದರು.ಜಿಪಂ ಸಿಇಒ ಸದಾಶಿವ ಪ್ರಭು, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಮಂಜುನಾಥ ಎಚ್.ವಿ. ಇದ್ದರು.