ಕನ್ನಡಪ್ರಭ ವಾರ್ತೆ ಮೈಸೂರು
ನಗರದ ಕಲಾಮಂದಿರದಲ್ಲಿ ಜಿಲ್ಲಾಡಳಿತ ಮತ್ತು ಮಹರ್ಷಿ ವಾಲ್ಮೀಕಿ ಜಯಂತಿ ಆಚರಣ ಸಮಿತಿ ವತಿಯಿಂದ ಗುರುವಾರ ಆಯೋಜಿಸಿದ್ದ ವಾಲ್ಮೀಕಿ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಮೊದಲು ತುಳಿತಕ್ಕೆ ಒಳಗಾದ, ಅಸಮಾನತೆಯಿಂದ ನೊಂದ ಜನರು ಒಂದಾಗಬೇಕು. ವಾಲ್ಮೀಕಿ ಅವರ ಕಷ್ಟ ಈ ಆರ್.ಎಸ್.ಎಸ್ ಮತ್ತು ವಿ.ಎಚ್.ಪಿ ಅವರಿಗೇನು ಗೊತ್ತು ಎಂದು ಪ್ರಶ್ನಿಸಿದರು.ಸಿದ್ದರಾಮಯ್ಯ ಅವರು ಎಸ್.ಇ.ಪಿ ಮತ್ತು ಟಿಎಸ್.ಪಿ. ಹಣ ಏಕೆ ಕೊಟ್ಟಿದ್ದಾರೆ ಎಂಬುದು ಗೊತ್ತಲ್ಲವೇ? ರಾಜ್ಯದ ಒಟ್ಟಾರೆ ಜನಸಂಖ್ಯೆಯಲ್ಲಿ ಶೇ. 7ರಷ್ಟು ಮಂದಿ ಎಸ್ಟಿ ಇದ್ದಾರೆ. ಆದರೆ ಅವರ ಬಳಿ ವ್ಯವಸಾಯ ಮಾಡಲು ಶೇ. 4ರಷ್ಟು ಹಣ ಕೂಡ ಇಲ್ಲ. ಆದ್ದರಿಂದ ಸಾಮಾಜಿಕ ನ್ಯಾಯ ಪಡೆಯಬೇಕಾದರೆ ಸಂವಿಧಾನದ ಪೀಠಿಕೆ ಜಾರಿಗೊಳ್ಳಬೇಕು ಎಂದರು.
ವಾಲ್ಮೀಕಿ ರಾಮಾಯಣ ಪ್ರಪಂಚದಲ್ಲಿ ಶ್ರೇಷ್ಠವಾದ ಮಹಾಕಾವ್ಯ. ವಾಲ್ಮೀಕಿ ಬೇಟೆಯಾಡಿ, ಕಳ್ಳತನ ಮಾಡುತ್ತಿದ್ದರು. ಇವರಿಗೆ ಊಟಕ್ಕೂ ತೊಂದರೆ ಆಗಿದ್ದರಿಂದ ಆ ಕೆಲಸ ಮಾಡುತ್ತಿದ್ದರು. ಬಳಿಕ ಜ್ಞಾನೋದಯವಾಗಿ ಬದುಕು ವಿಸ್ತರಿಸಿಕೊಂಡಿದ್ದಾಗಿ ಹೇಳಿದರು.
ಬೇರೆಯವರು ವಾಲ್ಮೀಕಿ ಹೈಜಾಕ್ ಮಾಡುವ ಮೊದಲು ನಮ್ಮ ಮನೆಯಲ್ಲಿ ವಾಲ್ಮೀಕಿ ಪೋಟೋ ಇರಬೇಕು. ಸಮ ಸಮಾಜದ ನಿರ್ಮಾಣಕ್ಕೆ ಹೋರಾಟ ನಡೆಸಬೇಕು. ರಾಮಾಯಣದ ತತ್ತ್ವ, ಸಾರಾಂಶ ಎಷ್ಟು ಗಟ್ಟಿಯಾಗಿದೆ ಎಂಬುದನ್ನು ಅರ್ಥ ಮಾಡಿಕೊಳ್ಳಬೇಕು ಎಂದರು.
ರಾಮಾಯಣ, ಮಹಾಭಾರತ ಮಹಾಕಾವ್ಯಗಳು ಎಲ್ಲಾ ಕಾಲಘಟ್ಟ, ಪೀಳಿಗೆಗೆ ಅನ್ವಯ. ರಾಮಾಯಣವು ಭಾರತೀಯರ ಜೀವನಚರಿತ್ರೆಯನ್ನು ಮತ್ತು ಸಂಸ್ಕೃತಿಯನ್ನು ಪ್ರತಿಬಿಂಬಿಸುವ ಮಹಾಕಾವ್ಯವಾಗಿದೆ. ಈ ಬಾರಿ ಮೈಸೂರಿನಲ್ಲಿ ಶ್ರೀ ಮಹರ್ಷಿ ವಾಲ್ಮೀಕಿಯವರ ಪ್ರತಿಮೆಯನ್ನು ನಿರ್ಮಿಸಲು ಶಂಕು ಸ್ಥಾಪನೆ ಕಾರ್ಯಕ್ರಮವನ್ನು ನೆರವೇರಿಸಿರುವುದು ಸಂತಸವಾಗಿದೆ. ವಾಲ್ಮೀಕಿಯು ಕವಿಕುಲದ ಗುರುವಾಗಿ ಹಲವಾರು ಕವಿಗಳಿಗೆ ಮತ್ತು ಸಾಹಿತಿಗಳಿಗೆ ಸ್ಫೂರ್ತಿಯ ಸೆಲೆಯಾಗಿದ್ದಾರೆ. ಇಂದಿಗೂ ರಾಮಾಯಣ ಮಹಾಕಾವ್ಯವು ಜಗತ್ತಿನಲ್ಲಿ ಸತ್ವಯುತವಾದ ಮತ್ತು ಮೌಲ್ಯಯುತವಾದ ಸಾಹಿತ್ಯ ಸೃಷ್ಟಿಗೆ ಪ್ರೇರಣೆಯಾಗಿದೆ ಎಂದರು.
ಇಂದು ವಾಲ್ಮೀಕಿ ರಾಮಾಯಣದ ಆಧಾರದ ಮೇಲೆ ವಿವಿಧ ಭಾಷೆಗಳಲ್ಲಿ ಕಾವ್ಯ, ನಾಟಕ, ಕಾದಂಬರಿ ಮತ್ತು ಕತೆಗಳನ್ನು ಅನೇಕರು ರಚಿಸಿದ್ದಾರೆ. ರಾಮಾಯಣದಂತಹ ಮಹಾಕಾವ್ಯ ಮತ್ತು ವಾಲ್ಮೀಕಿಯಂತಹ ಮಹಾಕವಿ ನಮಗೆ ದೊರೆತಿದ್ದು ಭುವನದ ಭಾಗ್ಯ. ಹಾಗಾಗಿ, ಮನುಷ್ಯ ಅಳಿದರೂ ಈ ಮಹಾಕಾವ್ಯಗಳು ಅಳಿಯುವುದಿಲ್ಲ ಎಂದು ತಿಳಿಸಿದರು.
ಎಲ್ಲಿವರೆಗೆ ಭೂಮಿಯಲ್ಲಿ ಪರ್ವತ, ಸಮುದ್ರ, ನದಿಗಳಿರುತ್ತವೆಯೋ ಅಲ್ಲಿವರೆಗೂ ರಾಮಾಯಣ ಕಾವ್ಯ ಲೋಕದಲ್ಲಿ ಪ್ರಚಲಿತದಲ್ಲಿರುತ್ತದೆ. ಆದ್ದರಿಂದ ಸೂರ್ಯಚಂದ್ರರಿರುವರೆಗೂ ರಾಮಾಯಣ ಮಹಾಕಾವ್ಯವು ಜಗತ್ತಿನಲ್ಲಿ ಅಮರಕಾವ್ಯ ಆಗಿರುತ್ತದೆ ಮತ್ತು ಇದನ್ನು ರಚಿಸಿರುವ ಮಹರ್ಷಿ ವಾಲ್ಮೀಕಿಯು ಅಮರಕವಿ ಆಗಿರುತ್ತಾರೆ ಎಂದರು.
ಮೈಸೂರು ವಿವಿ ಕುವೆಂಪು ಕನ್ನಡ ಅಧ್ಯಯನ ಸಂಸ್ಥೆ ನಿರ್ದೇಶಕಿ ಪ್ರೊ.ಎನ್.ಕೆ. ಲೋಲಾಕ್ಷಿ ಮುಖ್ಯ ಭಾಷಣಕಾರರಾಗಿ ಪಾಲ್ಗೊಂಡಿದ್ದರು. ನಗರ ಪಾಲಿಕೆ ಮಾಜಿ ಸದಸ್ಯ ಲೋಕೇಶ್ ಪಿಯಾ, ಜಿಲ್ಲಾಧಿಕಾರಿ ಜಿ. ಲಕ್ಷ್ಮೀಕಾಂತ ರೆಡ್ಡಿ, ನಗರ ಪೊಲೀಸ್ ಆಯುಕ್ತೆ ಸೀಮಾ ಲಾಟ್ಕರ್, ಎಸ್ಪಿ ವಿಷ್ಣುವರ್ಧನ ಮೊದಲಾದವರು ಇದ್ದರು.