ಸಂವಿಧಾನದಿಂದ ಭಾರತ ಸದೃಢ ರಾಷ್ಟ್ರವಾಗಿ ಹೊರಹೊಮ್ಮುತ್ತಿದೆ: ಗಿರಿರಾಜ

KannadaprabhaNewsNetwork | Updated : Jan 06 2024, 11:52 AM IST

ಸಾರಾಂಶ

ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ರಚಿಸಿದ ಸಂವಿಧಾನದಿಂದ ಇಂದು ಭಾರತ ಸದೃಢ ರಾಷ್ಟ್ರವಾಗಿ ಹೊರಹೊಮ್ಮುತ್ತಿದೆ. ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಸಹ ಸಾಮಾಜಿಕ ನ್ಯಾಯ ಕೊಡುವ ರೀತಿ ಸಂವಿಧಾನವನ್ನು ಅಂಬೇಡ್ಕರ್‌ ರಚಿಸಿದ್ದಾರೆ ಎಂದು ವಾಣಿಜ್ಯ ಮಹಾವಿದ್ಯಾಲಯದ ಪ್ರಾ. ಪ್ರೊ. ಕೆ.ಗಿರಿರಾಜ ಹೇಳಿದರು.

ಗದಗ: ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರು ರಚಿಸಿದ ಸಂವಿಧಾನದಿಂದ ಇಂದು ಭಾರತ ಸದೃಢ ರಾಷ್ಟ್ರವಾಗಿ ಹೊರಹೊಮ್ಮುತ್ತಿದೆ. ಸಮಾಜದ ಕಟ್ಟ ಕಡೆಯ ವ್ಯಕ್ತಿಗೂ ಸಹ ಸಾಮಾಜಿಕ ನ್ಯಾಯ ಕೊಡುವ ರೀತಿ ಸಂವಿಧಾನವನ್ನು ಅಂಬೇಡ್ಕರ್‌ ರಚಿಸಿದ್ದಾರೆ ಎಂದು ವಾಣಿಜ್ಯ ಮಹಾವಿದ್ಯಾಲಯದ ಪ್ರಾ. ಪ್ರೊ. ಕೆ.ಗಿರಿರಾಜ ಹೇಳಿದರು.

ಅವರು ಕನ್ನಡ ಮತ್ತು ಸಂಸ್ಕೃತ ಇಲಾಖೆ, ಆದರ್ಶ ಶಿಕ್ಷಣ ಸಮಿತಿಯ ವಿ.ಆರ್.ಕುಷ್ಟಗಿ ಮೆಮೋರಿಯಲ್ ಕಾಲೇಜ್ ಆಫ್ ಕಾಮರ್ಸ್, ಐಕ್ಯೂಎಸಿ ಮತ್ತು ಕನ್ನಡ ವಿಭಾಗದ ಸಹಯೋಗದಲ್ಲಿ ನಡೆದ ಸಂವಿಧಾನ ಓದು ಕಾರ್ಯಕ್ರಮದಲ್ಲಿ ಮಾತನಾಡಿ, ಅರ್ಥ ಪೂರ್ಣ ಮೂಲಭೂತ ಹಕ್ಕುಗಳು ಹಾಗೂ ಕರ್ತವ್ಯಗಳನ್ನು ನೀಡಿದ್ದಾರೆ ಅವರ ಕಠಿಣ ಶ್ರಮದಿಂದಾಗಿ ಶೋಷಿತ ಸಮುದಾಯಗಳು, ರೈತರು, ಮಹಿಳೆಯರು, ಕಾರ್ಮಿಕರು ಇತರೆ ವರ್ಗದವರು ಶೈಕ್ಷಣಿಕವಾಗಿ, ಸಾಮಾಜಿಕವಾಗಿ ಮತ್ತು ಆರ್ಥಿಕವಾಗಿ ಸಬಲರಾಗುತ್ತಿದ್ದಾರೆ. ಇಂದಿನ ಯುವ ಜನತೆಗೆ ಅಂಬೇಡ್ಕರ್ ಅವರು ಮಾದರಿಯಾಗಿದ್ದು ಅವರು ನಡೆದ ದಾರಿಯಲ್ಲಿ ನಾವೆಲ್ಲರೂ ಸಾಗಬೇಕಾಗಿದೆ ಎಂದರು.

ಕನ್ನಡ ಮತ್ತು ಸಂಸ್ಕೃತ ಇಲಾಖೆಯ ಸಹಾಯಕ ನಿರ್ದೇಶಕ ವೀರಯ್ಯಸ್ವಾಮಿ ಮಾತನಾಡಿ, ಅಂಬೇಡ್ಕರ್ ಅವರ ವಿಚಾರಗಳನ್ನು ಅರಿತುಕೊಂಡು ವಿದ್ಯಾರ್ಥಿಗಳು ಅವರ ಪುಸ್ತಕಗಳನ್ನು ಓದುವ ಮೂಲಕ ಪ್ರಜ್ಞಾವಂತರಾಗಬೇಕು ಸ್ಪರ್ಧಾತ್ಮಕ ಪರೀಕ್ಷೆಗಳನ್ನು ತೆಗೆದುಕೊಳ್ಳಬೇಕು. ಭಾರತದ ಸಂವಿಧಾನವು ನಮಗೆ ನೈತಿಕ ಮತ್ತು ಸದ್ಗುಣದ ಜೀವನದ ವಿಶಾಲ ಮಾರ್ಗಸೂಚಿಗಳನ್ನು ಒದಗಿಸುತ್ತದೆ. 

ಸಂವಿಧಾನದ ಆತ್ಮವು ಭವಿಷ್ಯದಲ್ಲಿ ನಮಗೆ ಮಾರ್ಗದರ್ಶನ ನೀಡುತ್ತದೆ ಎಂದು ನಾವು ಭಾವಿಸೋಣ ದೇಶದ ಪ್ರಜೆಗಳಾದ ನಾವು ಸಮಾಜವಾದಿ, ಜಾತ್ಯತೀತ ಪ್ರಜಾಸತ್ತಾತ್ಮಕ ಗಣ ರಾಜ್ಯವನ್ನು ನಿರ್ಮಿಸುವ ಭರವಸೆಯನ್ನು ಒಳಗೊಂಡಂತೆ ಸಂವಿಧಾನದ ಆದರ್ಶಗಳನ್ನು ಅಳವಡಿಸಿಕೊಳ್ಳಬೇಕು.

ಯುವಕರು ಸಂವಿಧಾನದ ಆದರ್ಶಗಳನ್ನು ಅಳವಡಿಸಿಕೊಂಡರೆ ದೇಶ ಎಲ್ಲ ರಂಗಗಳಲ್ಲಿ ಪ್ರಗತಿ ಸಾಧಿಸುತ್ತದೆ ಅಷ್ಟೇ ಅಲ್ಲದೆ ಮಹಿಳೆಯರಿಗೆ ಉನ್ನತ ಶಿಕ್ಷಣದ ಕೊರತೆ, ಬಾಲ್ಯ ವಿವಾಹ ಮತ್ತು ಅಪೌಷ್ಟಿಕತೆಯಂತಹ ಹಲವಾರು ಸಾಮಾಜಿಕ ಅನಿಷ್ಟಗಳಿಂದ ನಾವು ಬಳಲುತ್ತಿದ್ದೇವೆ. ಈ ದುಶ್ಚಟಗಳ ನಿರ್ಮೂಲನೆಗೆ ನಾವೆಲ್ಲರೂ ಶ್ರಮಿಸಬೇಕು ಎಂದರು.

ಸಂಸ್ಥೆಯ ಅಧ್ಯಕ್ಷ ಕೆ.ವಿ. ಕುಷ್ಟಗಿ, ಉಪ ಪ್ರಾ.ಡಾ. ವಿ.ಟಿ. ನಾಯ್ಕರ್, ಕನ್ನಡ ವಿಭಾಗದ ಮುಖ್ಯಸ್ಥ ಪ್ರೊ. ಬಾಹುಬಲಿ ಜೈನರ ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು. ಪ್ರಬಂಧ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಣೆಯೊಂದಿಗೆ ಭಾಗವಹಿಸಿದ ಎಲ್ಲಾ ವಿದ್ಯಾರ್ಥಿಗಳಿಗೂ ಅಭಿನಂದನ ಪತ್ರ ನೀಡಿ ಗೌರವಿಸಲಾಯಿತು.

Share this article