ಶಿರಹಟ್ಟಿ: ಭಾರತದ ಸಂವಿಧಾನ ಪ್ರಜಾಪ್ರಭುತ್ವದ ತಾಯಿಬೇರು ಮತ್ತು ವಿಶ್ವಕ್ಕೆ ಮಾದರಿಯಾದ ಸಂವಿಧಾನವಾಗಿದೆ. ಡಾ. ಬಿ.ಆರ್. ಅಂಬೇಡ್ಕರ್ ಅವರು ಕೋಟ್ಯಂತರ ಭಾರತೀಯರನ್ನು ಒಂದು ವ್ಯವಸ್ಥೆಯಲ್ಲಿ ತರುವ ಮೂಲಕ ಅತ್ಯುತ್ತಮ ಪ್ರಜಾತಂತ್ರ ರೂಪಿಸಲು ಈ ಸಂವಿಧಾನವನ್ನು ಕಾಣಿಕೆಯಾಗಿ ನೀಡಿದ್ದಾರೆ ಎಂದು ತಹಸೀಲ್ದಾರ್ ಅನಿಲ ಬಡಿಗೇರ ಹೇಳಿದರು.
ಪ್ರತಿ ಹಂತದಲ್ಲೂ ಮನುಷ್ಯನ ಹುಟ್ಟಿನಿಂದ ಅಂತ್ಯವಾಗುವವರೆಗೂ ಸಂವಿಧಾನ ಎಷ್ಟು ಮುಖ್ಯ ಎಂಬುದರ ಬಗ್ಗೆ ತಿಳಿದುಕೊಳ್ಳಬೇಕು. ಅದರಲ್ಲೂ ಶಾಲಾ ವಿದ್ಯಾರ್ಥಿಗಳು ಹಾಗೂ ಯುವ ಪೀಳಿಗೆ ಸಂವಿಧಾನ ಓದಿ ತಮ್ಮ ಅರಿವನ್ನು ಹೆಚ್ಚಿಸಿಕೊಂಡಾಗ ಜೀವನ ಸಾರ್ಥಕವಾಗುತ್ತದೆ ಎಂದು ತಿಳಿಸಿದರು.
ಎಲ್ಲ ಕ್ಷೇತ್ರಗಳಲ್ಲಿ ದಿಗ್ವಿಜಯ ಸಾಧಿಸುತ್ತಿದ್ದೇವೆ. ಮುಖ್ಯವಾಗಿ ಮಹಿಳೆಯರು ಎಲ್ಲ ಕ್ಷೇತ್ರಗಳಲ್ಲಿ ತಮ್ಮದೇ ಆದ ಛಾಪು ಮೂಡಿಸುತ್ತಿದ್ದಾರೆ. ಸರ್ವಧರ್ಮ ಜನಾಂಗಗಳ ಶಾಂತಿಯ ಹೂದೋಟದಲ್ಲಿ ನೆಮ್ಮದಿ, ಶಾಂತಿ ಹಾಗೂ ಸಾಮರಸ್ಯ ಅಂಶಗಳೊಂದಿಗೆ ಹೆಜ್ಜೆ ಇಡುತ್ತಿದ್ದೇವೆ ಎಂದರು. ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಡಾ. ನಿಂಗಪ್ಪ ಓಲೇಕಾರ, ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಶರಣಯ್ಯ ಬಿ. ಕುಲಕರ್ಣಿ ಮಾತನಾಡಿ, ಸಂವಿಧಾನವು ಸಮಾನತೆ, ಭ್ರಾತೃತ್ವ, ರಾಷ್ಟ್ರೀಯ ಏಕತೆ ತರುವಲ್ಲಿ ತನ್ನದೇ ಆದ ಪಾತ್ರ ವಹಿಸಿದೆ. ಸಂವಿಧಾನದ ಮಹತ್ವವನ್ನು ಮನೆ ಮನೆಗೆ ತಲುಪಿಸುವ ಪ್ರಯತ್ನವನ್ನು ರಾಜ್ಯ ಸರ್ಕಾರ ಜಾಗೃತಿ ಜಾಥಾ ಮೂಲಕ ಮಾಡುತ್ತಿರುವುದು ಸಂತಸದ ಸಂಗತಿ ಎಂದರು.ಹಲವಾರು ನಾಯಕರ ತ್ಯಾಗ ಬಲಿದಾನದ ಫಲವಾಗಿ ಸ್ವತಂತ್ರ ದೊರಕಿತು. ಅದರ ಭದ್ರ ಬುನಾದಿಯಲ್ಲಿ ದೇಶ ಇಂದು ಪ್ರಗತಿಪಥದಲ್ಲಿ ಸಾಗುತ್ತಿರುವುದು ಭಾರತೀಯರೆಲ್ಲರೂ ಹೆಮ್ಮೆ ಪಡುವ ಸಂಗತಿ, ಸಂವಿಧಾನ ಅನ್ವಯ ದೇಶದ ಎಲ್ಲ ರಾಜ್ಯಗಳಲ್ಲಿ ಕಾನೂನಾತ್ಮಕ ಅಂಶಗಳೊಂದಿಗೆ ಮೂರು ಅಂಗಗಳು ಪ್ರಜಾಸತ್ತಾತ್ಮಕವಾಗಿ ಕಾರ್ಯನಿರ್ವಹಿಸುತ್ತಿದೆ. ಅದರ ಅಡಿಯಲ್ಲಿ ಜಾಗತಿಕ ಮಟ್ಟದಲ್ಲಿ ಎಲ್ಲರೂ ನಿಬ್ಬೆರಗಾಗುವಂತೆ ದೇಶ ಮುನ್ನಡೆಯುತ್ತಿದೆ ಎಂದರು.