ಕೇಂದ್ರ ಗೃಹಸಚಿವ ಅಮಿತ್ ಶಾ ಅವರು ಸಂಸತ್ತಿನಲ್ಲಿ ಡಾ.ಬಿ.ಆರ್. ಅಂಬೇಡ್ಕರ್ ಬಗ್ಗೆ ನೀಡಿರುವ ಅವಹೇಳನಕಾರಿ ಹೇಳಿಕೆಯನ್ನು ಖಂಡಿಸಿ ಹಾಗೂ ಅವರ ರಾಜೀನಾಮೆಗೆ ಒತ್ತಾಯಿಸಿ ದ.ಕ. ಜಿಲ್ಲಾ ಕಾಂಗ್ರೆಸ್ ಪರಿಶಿಷ್ಟ ಜಾತಿ ಘಟಕದ ನೇತೃತ್ವದಲ್ಲಿ ಸೋಮವಾರ ನಗರದಲ್ಲಿ ‘ಸಂವಿಧಾನ ಸಂರಕ್ಷಣಾ ಜಾಥಾ’ ನಡೆಯಿತು.
ಕನ್ನಡಪ್ರಭ ವಾರ್ತೆ ಮಂಗಳೂರು
ಕೇಂದ್ರ ಗೃಹಸಚಿವ ಅಮಿತ್ ಶಾ ಅವರು ಸಂಸತ್ತಿನಲ್ಲಿ ಡಾ.ಬಿ.ಆರ್. ಅಂಬೇಡ್ಕರ್ ಬಗ್ಗೆ ನೀಡಿರುವ ಅವಹೇಳನಕಾರಿ ಹೇಳಿಕೆಯನ್ನು ಖಂಡಿಸಿ ಹಾಗೂ ಅವರ ರಾಜೀನಾಮೆಗೆ ಒತ್ತಾಯಿಸಿ ದ.ಕ. ಜಿಲ್ಲಾ ಕಾಂಗ್ರೆಸ್ ಪರಿಶಿಷ್ಟ ಜಾತಿ ಘಟಕದ ನೇತೃತ್ವದಲ್ಲಿ ಸೋಮವಾರ ನಗರದಲ್ಲಿ ‘ಸಂವಿಧಾನ ಸಂರಕ್ಷಣಾ ಜಾಥಾ’ ನಡೆಯಿತು.
ನಗರದ ಅಂಬೇಡ್ಕರ್ ವೃತ್ತದಿಂದ ಮಿನಿ ವಿಧಾನಸೌಧವರೆಗೆ ಬೃಹತ್ ಜಾಥಾ ನಡೆದು ಬಳಿಕ ಮಿನಿ ವಿಧಾನಸೌಧದ ಎದುರು ಪ್ರತಿಭಟನಾ ಸಮಾವೇಶ ನಡೆಯಿತು.
ಮಾಜಿ ಸಚಿವ ಬಿ.ರಮಾನಾಥ ರೈ ಮಾತನಾಡಿ, ಅಮಿತ್ ಶಾ ಅವರು ಅಂಬೇಡ್ಕರ್ ಬಗ್ಗೆ ಹೇಳಿಕೆ ನೀಡುವ ಮೂಲಕ ಸಾಮಾಜಿಕ ನ್ಯಾಯದಿಂದ ವಂಚಿತರಾದ ಸಮುದಾಯಕ್ಕೆ ಅವಮಾನ ಮಾಡಿದ್ದಾರೆ. ಮೋದಿ ಅವರು ಸಂವಿಧಾನದ ಪುಸ್ತಕ ಮುಂದಿಟ್ಟು ನಾಟಕ ಮಾಡುತ್ತಿದ್ದಾರೆ ಎಂದು ಹೇಳಿದರು.ಸಂವಿಧಾನದ ರಕ್ಷಣೆ ಮಾಡುವ ಜವಾಬ್ದಾರಿ ನಮ್ಮದು. ಅಮಿತ್ ಶಾ ರಾಜೀನಾಮೆ ನೀಡುವ ತನಕ ನಮ್ಮ ಹೋರಾಟ ಮುಂದುವರಿಯಲಿದೆ ಎಂದು ಹೇಳಿದರು.
ಪ್ರತಿ ಕ್ಷೇತ್ರದಲ್ಲೂ ಹೋರಾಟ:
ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್ ಮಾತನಾಡಿ, ಅಮಿತ್ ಶಾ ರಾಜೀನಾಮೆ ನೀಡಬೇಕು ಅಥವಾ ಅವರನ್ನು ಸಂಪುಟದಿಂದ ವಜಾಗೊಳಿಸಿಬೇಕು ಎಂದು ಆಗ್ರಹಿಸಿ ಕಾಂಗ್ರೆಸ್ ಪ್ರತಿ ವಿಧಾನ ಕ್ಷೇತ್ರಗಳಲ್ಲೂ ಹೋರಾಟ ನಡೆಸಲಿದೆ ಎಂದು ತಿಳಿಸಿದರು.
ದ.ಕ. ಜಿಲ್ಲಾ ಕಾಂಗ್ರೆಸ್ ಪರಿಶಿಷ್ಟ ಜಾತಿ ಘಟಕದ ಜಿಲ್ಲಾಧ್ಯಕ್ಷ ದಿನೇಶ್ ಮೂಳೂರು, ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ ಮಾತನಾಡಿದರು.
ರಾಜ್ಯ ಗೇರು ನಿಗಮದ ಅಧ್ಯಕ್ಷೆ ಮಮತಾ ಡಿ.ಎಸ್. ಗಟ್ಟಿ, ಮಾಜಿ ಶಾಸಕ ಜೆ.ಆರ್ ಲೋಬೊ, ಮಾಜಿ ಮೇಯರ್ಗಳಾದ ಶಶಿಧರ ಹೆಗ್ಡೆ ಹಾಗೂ ಕೆ.ಅಶ್ರಫ್, ಕಾಂಗ್ರೆಸ್ ನಾಯಕರಾದ ಪದ್ಮರಾಜ್ ಆರ್. ಪೂಜಾರಿ, ಮಿಥುನ್ ರೈ, ಅನಿಲ್ ಕುಮಾರ್, ಸುಧೀರ್ ಕುಮಾರ್, ಶಾಲೆಟ್ ಪಿಂಟೊ, ಇನಾಯತ್ ಅಲಿ, ಎಂಜಿ ಹೆಗಡೆ, ಲುಕ್ಮಾನ್ ಬಂಟ್ವಾಳ, ಬಶೀರ್ ಬೈಕಂಪಾಡಿ, ಕೆ.ಕೆ.ಶಾಹುಲ್ ಹಮೀದ್, ಸುಹಾನ್ ಆಳ್ವ ಮತ್ತಿತರರು ಭಾಗವಹಿಸಿದ್ದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.