ಉಡುಪಿ: ಸಂವಿಧಾನದ ಮೂಲ ಆಶಯಗಳಾದ ಧಾರ್ಮಿಕ ಸ್ವಾತಂತ್ರ್ಯದ ಹಕ್ಕು. ಶೋಷಣೆಯ ವಿರುದ್ಧ ಹಕ್ಕು, ಸಾಮಾಜಿಕ ನ್ಯಾಯ, ಪರಿಸರ ಸಂರಕ್ಷಣೆಯ ಕುರಿತು ಕಾರಂತರು ತಮ್ಮ ಕಾದಂಬರಿಗಳಲ್ಲಿ ವಿವರಿಸುವ ಮೂಲಕ ಸಂವಿಧಾನದ ಆಶಯಗಳನ್ನು ಎತ್ತಿ ಹಿಡಿದಿದ್ದಾರೆ. ಈ ಮೂಲಕ ಸಂವಿಧಾನದ ಕುರಿತು ಜನ ಸಾಮಾನ್ಯರು ಸೃಷ್ಟಿಸಿಕೊಂಡ ಅನೇಕ ಗೊಂದಲಗಳಿಗೆ ಕಾದಂಬರಿಗಳಲ್ಲಿ ಉತ್ತರ ದೊರಕಿಸಿಕೊಟ್ಟಿದ್ದಾರೆ ಎಂದು ನಿವೃತ್ತ ಪ್ರಾಧ್ಯಾಪಕ ಹಾಗೂ ಸಂವಿಧಾನತಜ್ಞ ಕೊಕ್ಕರ್ಣೆ ಸುರೇಂದ್ರನಾಥ್ ಶೆಟ್ಟಿ ಹೇಳಿದರು. ಅವರು ಸೋಮವಾರ ಮೂಲ್ಕಿಯ ವಿಜಯಾ ಕಾಲೇಜಿನಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಡಾ.ಶಿವರಾಮ ಕಾರಂತ ಟ್ರಸ್ಟ್ ವತಿಯಿಂದ ಇವರ ಸಹಯೋಗದಲ್ಲಿ ನಡೆದ ಅರಿವಿನ ಬೆಳಕು ಉಪನ್ಯಾಸ ಮಾಲೆ-೧೪ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಉಪನ್ಯಾಸ ನೀಡಿ ಮಾತನಾಡಿದರು. ಕಾಲೇಜಿನ ಪ್ರಾಂಶುಪಾಲ ಪ್ರೊ. ವೆಂಕಟೇಶ್ ಭಟ್ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಡಾ.ಶಿವರಾಮ ಕಾರಂತ ಟ್ರಸ್ಟಿನ ಅಧ್ಯಕ್ಷ ಡಾ.ಗಣನಾಥ ಎಕ್ಕಾರು, ಕಾರಂತರು ತಮ್ಮ ಕಾದಂಬರಿಗಳಲ್ಲಿ ಸಮಾನತೆಯನ್ನು ಪ್ರತಿಪಾದಿಸಿದವರು. ಹಿಂದುಳಿದ ಸಮುದಾಯವನ್ನು ಮುಖ್ಯ ವಾಹಿನಿಗೆ ತರುವುದು ಕಾರಂತರ ಉದ್ದೇಶವಾಗಿತ್ತು ಎಂದರು.