ಹೊಸಪೇಟೆ: ವಿಜಯನಗರ ಜಿಲ್ಲೆ ಕೂಡ್ಲಿಗಿ ತಾಲೂಕಿನ 74 ಕೆರೆಗಳಿಗೆ ನೀರು ತುಂಬಿಸುವ ಯೋಜನೆ ಸೇರಿ ವಿವಿಧ ಅಭಿವೃದ್ಧಿ ಯೋಜನೆಗಳ ಲೋಕಾರ್ಪಣೆ ಮತ್ತು ಶಂಕುಸ್ಥಾಪನೆ ಕಾರ್ಯಕ್ರಮದ ಉದ್ಘಾಟನೆಗೆ ನ.9ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಗಮನದ ಹಿನ್ನೆಲೆಯಲ್ಲಿ ಕೂಡ್ಲಿಗಿ ಪಟ್ಟಣದಲ್ಲಿ ಬೃಹತ್ ವೇದಿಕೆ ನಿರ್ಮಾಣ ಕಾರ್ಯ ಭರದಿಂದ ಸಾಗಿದೆ.
600 ಬಸ್ಗಳ ವ್ಯವಸ್ಥೆ:
ಜಿಲ್ಲೆ ಹಾಗೂ ತಾಲೂಕಿನಿಂದ ಜನರು ಆಗಮಿಸಲು 600ಕ್ಕೂ ಹೆಚ್ಚು ಬಸ್ಗಳನ್ನು ನಿಯೋಜಿಸಿ ಸಾರಿಗೆ ವ್ಯವಸ್ಥೆ ಅನುಕೂಲ ಮಾಡಲಾಗಿದೆ. ಅಂದಾಜು 50 ಸಾವಿರ ಜನರು ಸೇರುವ ನಿರೀಕ್ಷೆ ಇದೆ. ಸರ್ಕಾರದ ವಿವಿಧ ಇಲಾಖೆಗಳ ಅಭಿವೃದ್ಧಿ ಯೋಜನೆಗಳ ಬಗ್ಗೆ ಪ್ರತ್ಯೇಕವಾಗಿ ಮಳಿಗೆಗಳನ್ನು ನಿರ್ಮಿಸಿ ವಸ್ತು ಪ್ರದರ್ಶನವನ್ನು ಆಯೋಜಿಸಲಾಗಿದೆ. ವೇದಿಕೆ ಕಾರ್ಯಕ್ರಮದಲ್ಲಿ ಫಲಾನುಭವಿಗಳಿಗೆ ವಿವಿಧ ಇಲಾಖೆಗಳ ಸವಲತ್ತುಗಳನ್ನು ವಿತರಣೆ ಮಾಡಲಾಗುವುದು. ಕಾರ್ಯಕ್ರಮಕ್ಕೆ ಬರುವ ಜನತೆಗೆ ಅನುಕೂಲವಾಗುವ ನಿಟ್ಟಿನಲ್ಲಿ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ, ಶೌಚಾಲಯದ ವ್ಯವಸ್ಥೆ, ಗಾಳಿ, ಬೆಳಕು, ಎಲ್ಇಡಿ ಪರದೆಗಳಲ್ಲಿ ವೇದಿಕೆ ಕಾರ್ಯಕ್ರಮದ ವೀಕ್ಷಣೆ ಸೇರಿದಂತೆ ಸವಿಭೋಜನದ ವ್ಯವಸ್ಥೆಯನ್ನು ಅಚ್ಚುಕಟ್ಟಾಗಿ ನಿರ್ವಹಿಸಲಾಗುವುದು. ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ಸಹಕಾರದಿಂದ ಸಕಲ ಸಿದ್ದತೆ ಕೈಗೊಳ್ಳಲಾಗಿದೆ. ಹೆಚ್ಚಿನ ಸಂಖ್ಯೆಯಲ್ಲಿ ಜನತೆ ಆಗಮಿಸಿ ಐತಿಹಾಸಿಕ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕಿದೆ. ಪಟ್ಟಣದ ಗ್ರಾಮ ದೇವತೆ ಶ್ರೀಊರಮ್ಮ ದೇವಸ್ಥಾನದಿಂದ ಸುಮಾರು 100ಕ್ಕೂ ಹೆಚ್ಚು ಜನ ಸುಮಂಗಲೆಯರು ಪೂರ್ಣಕುಂಭ ಹೊತ್ತು ಸಕಲ ಮಂಗಳ ವಾದ್ಯಗಳ ಮೂಲಕ ಮೆರವಣಿಗೆ ಮೂಲಕ ವೇದಿಕೆಗೆ ಆಗಮಿಸಲಿದ್ದಾರೆ. ಈ ನೀರಾವರಿ ಹೋರಾಟದಲ್ಲಿ ಭಾಗಿಯಾದ ಹೋರಾಟಗಾರರಿಗೆ ವೇದಿಕೆಯಲ್ಲಿ ಗೌರವಿಸಿ ಸನ್ಮಾನಿಸಲಾಗುವುದು ಎಂದರು.ಈ ವೇಳೆ ಜಿಲ್ಲಾಧಿಕಾರಿ ಕವಿತಾ ಎಸ್.ಮನ್ನಿಕೇರಿ, ಜಿಪಂ ಸಿಇಒ ಅಕ್ರಮ್ ಷಾ, ಅಪರ ಜಿಲ್ಲಾಧಿಕಾರಿ ಇ.ಬಾಲಕೃಷ್ಣಪ್ಪ, ಹೊಸಪೇಟೆ ಸಹಾಯಕ ಆಯುಕ್ತ ಪಿ.ವಿವೇಕಾನಂದ, ಹರಪನಹಳ್ಳಿ ಸಹಾಯಕ ಆಯುಕ್ತ ಚಿದಾನಂದ ಗುರುಸ್ವಾಮಿ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಅಧಿಕಾರಿಗಳು ಭಾಗವಹಿಸಿದ್ದರು.