ಕನ್ನಡಪ್ರಭ ವಾರ್ತೆ ಕೆ.ಎಂ.ದೊಡ್ಡಿಪಟ್ಟಣದ ಮಧ್ಯಭಾಗದಲ್ಲಿರುವ ಕಾವೇರಿ ನೀರಾವರಿ ನಿಗಮದ ಕಚೇರಿಯ ಜಾಗದಲ್ಲಿ ಸುಮಾರು ₹4 ಕೋಟಿ ವೆಚ್ಚದಲ್ಲಿ ಬಹುಮಹಡಿ ಕಟ್ಟಡ ನಿರ್ಮಿಸಲಾಗುವುದು ಎಂದು ಶಾಸಕ ಕೆ.ಎಂ.ಉದಯ್ ತಿಳಿಸಿದರು.ಸುಮಾರು 75 ವರ್ಷಗಳ ಹಳೆಯ ಕಚೇರಿಯ ಕಟ್ಟಡದ ಸ್ಥಿತಿಗತಿಗಳನ್ನು ಗಮನಿಸಿ ನೂತನ ಕಟ್ಟಡ ನಿರ್ಮಾಣ ಕಾಮಗಾರಿ ನಡೆಯುವ ಸ್ಥಳಕ್ಕೆ ಕಾವೇರಿ ನೀರಾವರಿ ನಿಗಮದ ಮುಖ್ಯ ಕಾರ್ಯಪಾಲಕ ಅಭಿಯಂತರಾದ ನಂಜುಂಡೇಗೌಡ ಹಾಗೂ ಸಿಬ್ಬಂದಿಗಳ ಜತೆಗೂಡಿ ಕಾಮಗಾರಿ ವೀಕ್ಷಿಸಿ, ಯೋಜನೆ ಬಗ್ಗೆ ಮಾಹಿತಿ ಪಡೆದರು.ಕಾವೇರಿ ನೀರಾವರಿ ನಿಗಮದ ಕಾರ್ಯಪಾಲಕ ಅಭಿಯಂತರ ಕಚೇರಿ ಮತ್ತು ಲೋಕಪಯೋಗಿ ಇಲಾಖೆ ಕಚೇರಿಯನ್ನು ಪೂರ್ಣ ನೆಲಸಮ ಮಾಡಿ ಹೊಸದಾಗಿ ಬಹು ಮಾಡಿ ಕಟ್ಟಡ ನಿರ್ಮಿಸಲಾಗುವುದು. ಸಾರ್ವಜನಿಕರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಒಂದೇ ಸೂರಿನಡಿ ಹಲವು ಕಚೇರಿಗಳು ಬರಲಿವೆ ಎಂದು ವಿವರಿಸಿದರು.ಬಹುಮಹಡಿ ಕಟ್ಟಡದಲ್ಲಿ ಉಪನೋಂದಣಾಧಿಕಾರಿ ಕಚೇರಿ, ಉಪತಹಸೀಲ್ದಾರ್ ಕಚೇರಿ, ಕಂದಾಯ ಅಧಿಕಾರಿಗಳು ಕಚೇರಿ, ಕಾವೇರಿ ನೀರಾವರಿ ನಿಗಮ, ಲೋಕಪಯೋಗಿ ಇಲಾಖೆ ಸೇರಿದಂತೆ ಹಲವು ಕಚೇರಿಗಳು ಒಂದೇ ಸೂರಿನಡಿ ಲಭ್ಯವಾಗುವುದು ಶೀಘ್ರದಲ್ಲಿ ಕಾಮಗಾರಿ ಕೈಗೆತ್ತಿ ಕೊಳ್ಳಲಾಗುವುದು ಎಂದರು. ಮದ್ದೂರು ಕ್ಷೇತ್ರವು ಅಭಿವೃದ್ಧಿಯಲ್ಲಿ ಹಿಂದುಳಿದಿದೆ. ಅದರ ಭಾಗವಾಗಿ ಕೆ.ಎಂ.ದೊಡ್ಡಿಯಲ್ಲಿ ಸುಮಾರು 75 ವರ್ಷಗಳ ಹಳೆಯ ಕಚೇರಿಯ ಕಟ್ಟಡವು ನಿರ್ಲಕ್ಷ್ಯಕ್ಕೆ ಒಳಗಾಗಿ ದುಸ್ಥಿತಿಯಲ್ಲಿತ್ತು. ಆ ಕಟ್ಟಡವನ್ನು ನೆಲಸಮಗೊಳಿಸಿ ಹೊಸ ವಿನ್ಯಾಸದಲ್ಲಿ ಸುಮಾರು 4 ಕೋಟಿಗೂ ಹೆಚ್ಚಿನ ವೆಚ್ಚದಲ್ಲಿ ಬಹುಮಹಡಿ ಕಟ್ಟಡ ನಿರ್ಮಿಸಲಾಗುತ್ತಿದೆ ಎಂದು ಹೇಳಿದರು.ಕಾವೇರಿ ನೀರಾವರಿ ಉಪ ವಿಭಾಗದ ಕಚೇರಿ ಸೇರಿದಂತೆ ಬಹುಮಹಡಿ ಕಟ್ಟಡ ನಿರ್ಮಾಣಕ್ಕೆ ಜೂ.20 ಭೂಮಿ ಪೂಜೆ ನೆರವೇರಿಸಲಾಗುವುದು. ಶೀಘ್ರ ಕಟ್ಟಡ ಕಾಮಗಾರಿ ಆರಂಭಿಸಿ ನಿಗದಿತ ಸಮಯದಲ್ಲಿ ಪೂರ್ಣಗೊಳಿಸಿ ಸಾರ್ವಜನಿಕ ಸೇವೆಗೆ ಒಳಪಡಿಸಲಾಗುವುದು ಎಂದು ತಿಳಿಸಿದರು. ಈ ವೇಳೆ ಭಾರತಿನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎ.ಎಸ್. ರಾಜೀವ್, ಮನ್ಮುಲ್ ನಿರ್ದೇಶಕ ಹರೀಶ್ ಬಾಬು, ಡಿಸಿಸಿ ಬ್ಯಾಂಕ್ ನಿರ್ದೇಶಕ ಸಂದರ್ಶ, ಕಾವೇರಿ ನೀರಾವರಿ ನಿಗಮದ ಮುಖ್ಯ ಕಾರ್ಯಪಾಲಕ ಅಭಿಯಂತರ ನಂಜುಂಡೇಗೌಡ, ಎಇಇ ಪ್ರಶಾಂತ್, ಎಇ ಅವಿನಾಶ್ ಮುಖಂಡರಾದ ಅಮೀನ್ ಶಿವಲಿಂಗಯ್ಯ, ಪೂಜಾರಿ ಮಹೇಶ್, ರಾಘವೇಂದ್ರ ಸೇರಿದಂತೆ ಹಲವರು ಉಪಸ್ಥಿತರಿದ್ದರು.