ಚಾಮರಾಜನಗರ: ಜಿಲ್ಲಾ ಮಟ್ಟದಲ್ಲಿ ಸುಸಜ್ಜಿತ ಗುರುಭವನ ನಿರ್ಮಾಣಕ್ಕೆ ಕ್ರಮ ಕೈಗೊಳ್ಳುವುದಾಗಿ ಪಶು ಸಂಗೋಪನೆ, ರೇಷ್ಮೆ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸಿ.ಪುಟ್ಟರಂಗಶೆಟ್ಟಿ ಭರವಸೆ ನೀಡಿದರು.
ಯಡಬೆಟ್ಟ ಸಮೀಪದಲ್ಲಿ ಹೊಸ ಬಡಾವಣೆಗೆ ಜಾಗ ಗುರುತಿಸಿದ್ದು ಅನುದಾನ ಬಿಡುಗಡೆಯಾಗಲಿದ್ದು, ನಿಮ್ಮ ಬೇಡಿಕೆಯಂತೆ ಸುಸಜ್ಜಿತ ಗುರುಭವನ ನಿರ್ಮಿಸಲಾಗುವುದು ಎಂದು ಹೇಳಿದರು.
ಶಿಕ್ಷಕರಿಗೆ ಇತರೆ ಹೊಣೆಗಾರಿಕೆಗಳಿಂದ ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ನೀಡಲು ಸಾಧ್ಯವಾಗುತ್ತಿಲ್ಲವೆಂಬ ಶಿಕ್ಷಕರ ಸಮಸ್ಯೆಗಳನ್ನು ವಿಧಾನಸಭೆಯಲ್ಲಿ ಚರ್ಚಿಸಿ ಪರಿಹರಿಸುತ್ತೇನೆ. ರಾಜ್ಯ ಪ್ರಾಥಮಿಕ ಶಿಕ್ಷಕರ ಸಂಘದ ಜಿಲ್ಲಾ ಘಟಕ ಎಸ್ಸೆಸ್ಸೆಲ್ಸಿ, ಪಿಯುಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕ ಪಡೆದ ಶಿಕ್ಷಕರ ಮಕ್ಕಳನ್ನು ಗುರುತಿಸಿ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸುತ್ತಿರುವುದು ಮಕ್ಕಳಿಗೆ ಪ್ರೋತ್ಸಾಹಿಸುವ ಕಾರ್ಯಕ್ರಮ ಎಂದರು.ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಮಹಾದೇವಸ್ವಾಮಿ ಮಾತನಾಡಿ, ಬಿಸಿಯೂಟದ ಉಚಿತ ಮೊಟ್ಟೆ ಜವಾಬ್ದಾರಿ ಏಜೆನ್ಸಿಗೆ ಕೊಡಬೇಕು. ಕ್ಷೇತ್ರ ಶಿಕ್ಷಣಾಧಿಕಾರಿಗಳ ನೂತನ ಕಚೇರಿ ಆಗಬೇಕು. ರಾಜ್ಯ ಸಮೀಕ್ಷೆಗಳಿಗೆ ಇತರ ಕೆಲಸಗಳಿಗೆ ಶಿಕ್ಷಕರನ್ನು ನೇಮಿಸಬಾರದು. ಇದರಿಂದ ಮಕ್ಕಳ ಬೋಧನೆಗೆ ಸಮಯ ಸಾಲದೆ ಶಿಕ್ಷಣದ ಗುಣಮಟ್ಟ ಕಾಪಾಡಲು ಸಾಧ್ಯವಾಗುತ್ತಿಲ್ಲ. ಈ ಕುರಿತು ಸಚಿವರು ಗಮನಹರಿಸಬೇಕು ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಸಾಹಿತಿ ದೇವನೂರು ಮಹೇಂದ್ರಕುಮಾರ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕೆ.ಎಸ್.ಮಾದಪ್ಪ, ತಾಲೂಕು ಅಧ್ಯಕ್ಷ ಸಿ.ಕೆ.ರಾಮಸ್ವಾಮಿ, ಬಿಇಒ ಹನುಮಶೆಟ್ಟಿ, ಬಿಎಸ್ವಿ ಪ್ರತಿಷ್ಠಾನದ ವೆಂಕಟನಾಗಪ್ಪಶೆಟ್ಟಿ, ರೋಟರಿ ಅಧ್ಯಕ್ಷ ಅಬ್ದುಲ್ ಅಜೀಜ್ ದೀನಾ, ಮಾಜಿ ಅಧ್ಯಕ್ಷ ಕಾಗಲವಾಡಿ ಚಂದ್ರು, ಜಿಲ್ಲಾ ಉಪಾಧ್ಯಕ್ಷ ಶಿವಪ್ರಸಾದ್, ಭವಾನಿದೇವಿ, ಖಜಾಂಚಿ ನಂದೀಶ್, ಸಹ ಕಾರ್ಯದರ್ಶಿ ಉಮೇಶ್, ಸಂಘಟನಾ ಕಾರ್ಯದರ್ಶಿ ಶಿವರಾಜ್, ತಾಲೂಕು ಕಾರ್ಯದರ್ಶಿ ಎನ್.ಸುಧಾ, ಉಪಾಧ್ಯಕ್ಷರಾದ ಸಿ.ಎಂ.ಸುಶೀಲ, ಧನಂಜಯ, ಸಹ ಕಾರ್ಯದರ್ಶಿ ಬಿ.ಕೃಷ್ಣಮೂರ್ತಿ, ಬಿ.ಎಸ್.ಲತಾ, ಸಂಘಟನಾ ಕಾರ್ಯದರ್ಶಿಗಳಾದ ಭರತ್ ಭೂಷಣ್, ಎನ್.ಶ್ವೇತ ಇತರರು ಹಾಜರಿದ್ದರು.
ಚಾಮರಾಜನಗರದ ವಾಲ್ಮೀಕಿ ಭವನದಲ್ಲಿ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾ ಘಟಕ ಹಮ್ಮಿಕೊಂಡಿದ್ದ ಪ್ರತಿಭಾ ಪುರಸ್ಕಾರ ಸಮಾರಂಭವನ್ನು ಸಚಿವ ಸಿ.ಪುಟ್ಟರಂಗಶೆಟ್ಟಿ ಉದ್ಘಾಟಿಸಿದರು.