ಕಲಬುರಗಿ: ನಗರದಲ್ಲಿ ಸುಸಜ್ಜಿತ ಹಾಗೂ ಅತ್ಯಾಧುನಿಕ ರೀತಿಯ ಸ್ಯಾಟಲೈಟ್ ಬಸ್ ನಿಲ್ದಾಣ ನಿರ್ಮಾಣ ಮಾಡುವ ಉದ್ದೇಶದೊಂದಿಗೆ ಸಚಿವ ಪ್ರಿಯಾಂಕ್ ಖರ್ಗೆ ಬೆಂಗಳೂರಿನಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು.ಈಗಾಗಲೇ ಎರಡು ಮೂರು ಸ್ಥಳಗಳಲ್ಲಿ ಸ್ಯಾಟಲೈಟ್ ಬಸ್ ನಿಲ್ದಾಣಕ್ಕೆ ಅಗತ್ಯವಿರುವ ಸ್ಥಳವನ್ನು ಗುರುತಿಸಲಾಗಿದ್ದು, ಸೂಕ್ತವೆನಿಸುವ ಜಾಗದಲ್ಲಿ ಉದ್ದೇಶಿತ ಬಸ್ ನಿಲ್ದಾಣ ನಿರ್ಮಿಸಲು ಸಂಬಂಧಪಟ್ಟ ಇಲಾಖೆಗಳಿಗೆ ಪ್ರಸ್ತಾವನೆ ಸಲ್ಲಿಸಲು ಅಧಿಕಾರಿಗಳಿಗೆ ಸಚಿವರು ನಿರ್ದೇಶಿಸಿದರು.ಪ್ರಗತಿಯತ್ತ ದಾಪುಗಾಲು ಇಡುತ್ತಿರುವ ಕಲಬುರಗಿ ನಗರಕ್ಕೆ ಉದ್ದೇಶಿತ ಸ್ಯಾಟಲೈಟ್ ಬಸ್ ನಿಲ್ದಾಣವು ಅಭಿವೃದ್ಧಿಗೆ ವೇಗ ನೀಡಲಿದೆ ಎಂದು ಸಚಿವರು ಅಭಿಪ್ರಾಯಪಟ್ಟರು. ಶಾಸಕರಾದ ಅಲ್ಲಮಪ್ರಭು ಪಾಟೀಲ್, ಉನ್ನತ ಶಿಕ್ಷಣ ಇಲಾಖೆಯ ಕಾರ್ಯದರ್ಶಿ ಖುಷ್ಬು ಘೋಯಲ್ ಚೌದರಿ, ಕೃಷಿ, ಪಶುಸಂಗೋಪನೆ, ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.