ರಾಣಿಬೆನ್ನೂರು: ಉತ್ತರ ಕರ್ನಾಟಕ ಭಾಗದಲ್ಲಿ ರೇಷ್ಮೆ ಬೆಳೆ ಹೆಚ್ಚಾಗಿ ಬೆಳೆಯುತ್ತಿರುವುದರಿಂದ ಈ ಭಾಗದ ರೇಷ್ಮೆ ಬೆಳೆಗಾರರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಸುಮಾರು ₹15 ಕೋಟಿ ವೆಚ್ಚದ ರೇಷ್ಮೆ ಮೆಗಾ ಮಾರುಕಟ್ಟೆ ನಿರ್ಮಿಸಲಾಗುತ್ತಿದೆ ಎಂದು ಪಶುಸಂಗೋಪನೆ ಮತ್ತು ರೇಷ್ಮೆ ಇಲಾಖೆ ಸಚಿವ ಕೆ. ವೆಂಕಟೇಶ ಹೇಳಿದರು.
ಬ್ಯಾಡಗಿ ಶಾಸಕ ಬಸವರಾಜ ಶಿವಣ್ಣನವರ ಮಾತನಾಡಿ, ನಮ್ಮ ಹಾವೇರಿ ಜಿಲ್ಲೆಯಲ್ಲಿ ರೇಷ್ಮೆ ಮಾರುಕಟ್ಟೆ ನಿರ್ಮಾಣವಾಗುತ್ತಿರುವುದು ಈ ಭಾಗದ ರೇಷ್ಮೆ ಬೆಳಗಾರರಿಗೆ ವರದಾನವಾಗಲಿದೆ. ಕರ್ನಾಟಕದಲ್ಲಿ ಅತೀ ಹೆಚ್ಚು ರೇಷ್ಮೆ ಬೆಳೆ ಬೆಳೆಯುವಲ್ಲಿ ಮೂರನೇ ಸ್ಥಾನದಲ್ಲಿದೆ. ಈ ನಿಟ್ಟಿನಲ್ಲಿ ಸರ್ಕಾರ ಮಾರುಕಟ್ಟೆ ನಿರ್ಮಾಣಕ್ಕೆ ಆಧ್ಯತೆ ನೀಡಿದೆ. ಆದಷ್ಟು ಗುತ್ತಿಗೆದಾರರು ನಿಗದಿತ ಸಮಯದಲ್ಲಿ ಗುಣಮಟ್ಟದ ಕಾಮಗಾರಿಯನ್ನು ಪೂರ್ಣಗೊಳಿಸಬೇಕು ಎಂದರು.
ಇದೇ ಸಂದರ್ಭದಲ್ಲಿ ರೇಷ್ಮೆ ನೂತನ ಕಟ್ಟಡ ನೀಲಿ ನಕ್ಷೆ ಹಾಗೂ ಕಟ್ಟಡ ಯೋಜನೆ ಕುರಿತು ಮಾಹಿತಿ ಪಡೆದುಕೊಂಡರು. ಉಳಿದ ಜಾಗದಲ್ಲಿ ಏನು ಮಾಡಬೇಕು ಎನ್ನುವುದರ ಬಗ್ಗೆ ಶಾಸಕರ ಜೊತೆ ಚರ್ಚೆ ನಡೆಸಿದರು.ಸಚಿವರು ಭೇಟಿ ಸಮಯದಲ್ಲಿ ಮುಖಂಡರಾದ ಬಸವರಾಜ ಸವಣೂರು, ಸಂಜೀವ ಮೋಟೆಬೆನ್ನೂರು ಸೇರಿದಂತೆ ಗ್ರಾಪಂ ಸದಸ್ಯರು ಹಾಜರಿದ್ದರು.
ರೇಷ್ಮೆ ಇಲಾಖೆಯ ಉಪ ನಿರ್ದೇಶಕರಾದ ಎಂ.ಡಿ. ಪಾಟೀಲ, ತಾಲೂಕು ರೇಷ್ಮೆ ವಿಸ್ತರಣಾಧಿಕಾರಿ ನರ್ಮದಾ ಎಂ., ಸಹಾಯಕ ರೇಷ್ಮೆ ಅಧಿಕಾರಿ ಬಿ.ಆರ್. ಅಂಗಡಿ, ರೇಷ್ಮೆ ಜಂಟಿ ನಿರ್ದೇಶಕ ವೈ.ಟಿ. ತಿಮ್ಮಯ್ಯ, ಬ್ಯಾಡಗಿ ರೇಷ್ಮೆ ವಿಸ್ತರಣಾಧಿಕಾರಿ ಭಾರತಿ ಡಿ. ನಾಯಕ, ಎಸ್.ಎನ್. ಕೋರೆ ಸೇರಿದಂತೆ ಇತರ ಅಧಿಕಾರಿಗಳು ಹಾಜರಿದ್ದರು.