ಧಾರವಾಡ/ನವಲಗುಂದ: ನವಲಗುಂದ ತಾಲೂಕಿನ ಗುಡಿಸಾಗರ ಗ್ರಾಮದಲ್ಲಿ ಮಂಗಳವಾರ ಸಂಜೆ ಕೆಲವರು ವಾಂತಿ ಬೇಧಿಯಿಂದ ಅಸ್ವಸ್ಥರಾಗಿದ್ದವರನ್ನು ಬುಧವಾರ ಶಾಸಕ ಎನ್.ಎಚ್. ಕೋನರಡ್ಡಿ, ಜಿಲ್ಲಾಧಿಕಾರಿ ದಿವ್ಯ ಪ್ರಭು ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು.
ಜಿಲ್ಲಾಧಿಕಾರಿ ದಿವ್ಯ ಪ್ರಭು ಮಾತನಾಡಿ, ಸುಮಾರು 19 ಜನ ತಾಲೂಕು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಎಲ್ಲರ ಆರೋಗ್ಯ ಸ್ಥಿರವಾಗಿದೆ. ಗ್ರಾಮಸ್ಥರು ಗ್ರಾಮದ ಕುಡಿಯುವ ನೀರಿನ ಕೆರೆಯಿಂದ ಈ ಘಟನೆ ಆಗಿದೆ ಎಂದು ದೂರಿದ್ದಾರೆ. ಈ ಕುರಿತು ಪರಿಶೀಲಿಸಿ, ವರದಿ ನೀಡಲು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಇಇ ಅವರಿಗೆ ನಿರ್ದೇಶನ ನೀಡಲಾಗಿದೆ. ಈಗಾಗಲೇ ಗ್ರಾಮದ ಕೆರೆ, ಮೇಲ್ಮಟ್ಟದ ಜಲಸಂಗ್ರಹಗಾರ ಮತ್ತು ಮನೆಹತ್ತಿರದ ನಳದಿಂದ ನೀರು ಸಂಗ್ರಹಿಸಿ ಪರೀಕ್ಷೆಗಾಗಿ ಕಳುಹಿಸಲಾಗಿದೆ ಎಂದು ತಿಳಿಸಿದರು.
ಗ್ರಾಮದಲ್ಲಿ ನೀರು, ನೈರ್ಮಲ್ಯ, ನೀರನ್ನು ಶುದ್ಧೀಕರಿಸಿ, ಬಳಸುವ ಬಗ್ಗೆ ಜಾಗೃತಿ ಮೂಡಿಸಿ, ಆರೋಗ್ಯ ತಪಾಸಣೆಗಾಗಿ 30 ಜನ ಆಶಾ ಸದಸ್ಯರ ತಂಡ ರಚಿಸಿ, ಮನೆಮನೆ ಸಮೀಕ್ಷೆ ಆರಂಭಿಸಲಾಗಿದೆ ಎಂದು ತಿಳಿಸಿದರು.ಶಾಸಕ ಎನ್.ಎಚ್. ಕೋನರಡ್ಡಿ ಮಾತನಾಡಿ, ಜಿಲ್ಲಾಡಳಿತ ಹಾಗೂ ತಾಲೂಕು ಆಡಳಿತ ಈಗಾಗಲೇ ಗ್ರಾಮದ ಪರಿಸ್ಥಿತಿ ಅವಲೋಕಿಸಿ ಅಗತ್ಯ ಕ್ರಮ ಜರುಗಿಸಲು ಮುಂದಾಗಿದೆ. ಮುಂಬರುವ ದಿನಗಳಲ್ಲಿ ಗ್ರಾಪಂನವರು ಕೆರೆಯ ನೀರನ್ನು ಸ್ವಚ್ಛವಾಗಿಡುವಂತೆ ಕ್ರಮ ವಹಿಸಲು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಅಗತ್ಯ ಬಿದ್ದಲ್ಲಿ ಕೆರೆಯ ನೀರನ್ನು ಹೊರ ಹಾಕಿ ಹೊಸದಾಗಿ ನೀರು ತುಂಬಿಸಲು ಪ್ರಯತ್ನಿಸಲಾಗುವುದು. ಜತೆಗೆ ಜನತೆಯ ಆರೋಗ್ಯ ಕುರಿತಾಗಿ ನಿರಂತರ ನಿಗಾ ವಹಿಸಲು ಡಿಎಚ್ಒ ಹಾಗೂ ಟಿಎಚ್ಒ ಅವರನ್ನು ಖಾಯಂ ಗ್ರಾಮದಲ್ಲಿರುವಂತೆ ಸೂಚಿಸಲಾಗಿದೆ ಎಂದರು.
ನಂತರ ನವಲಗುಂದ ಪ್ರವಾಸಿ ಮಂದಿರದಲ್ಲಿ ಸಂಬಂಧಿಸಿದ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಚರ್ಚೆ ಮಾಡಿ ಮುಂದಿನ ದಿನಗಳಲ್ಲಿ ಇಂತಹ ಪ್ರಕರಣಗಳು ಆಗದಂತೆ ಕ್ರಮ ವಹಿಸಲು ಸೂಚಿಸಿದರು.