ಕನ್ನಡಪ್ರಭ ವಾರ್ತೆ ಮೈಸೂರುನಮ್ಮ ಆಹಾರದ ಬಟ್ಟಲಿನಿಂದ ಗೆಡ್ಡೆ ಗೆಣಸುಗಳು ಮಾಯವಾಗಿವೆ. ಇವುಗಳ ನಿರಂತರ ಬಳಕೆಯಿಂದ ಶರೀರಕ್ಕೆ ರೋಗನಿರೋಧಕ ಶಕ್ತಿ ಬರುತ್ತದೆ. ಆರೋಗ್ಯದ ಜೀವನಕ್ಕೆ ಗೆಡ್ಡೆ ಗೆಣಸುಗಳ ಬಳಕೆ ಪೂರಕ ಎಂದು ಆಹಾರ ತಜ್ಞೆ ಮತ್ತು ಬರಹಗಾರ್ತಿ ರತ್ನಾ ರಾಜಯ್ಯ ತಿಳಿಸಿದರು.
ಬರಗಾಲದ ಬೆಳೆಗಳು ಎಂದು ಪರಿಗಣಿಸಿದ ಗೆಡ್ಡೆ ಗೆಣಸುಗಳು ಪೋಷಕಾಂಶದ ಖಜಾನೆ. ಇಷ್ಟೊಂದು ಬಗೆಯ ಗೆಡ್ಡೆ ಗೆಣಸು ಇರುವುದು ಹೆಚ್ಚಿನವರಿಗೆ ಗೊತ್ತೇ ಇಲ್ಲ. ಇಂಥ ಮೇಳಗಳನ್ನು ಆಯೋಜಿಸುವ ಮೂಲಕ, ಗ್ರಾಹಕರಲ್ಲಿ ಮರೆತು ಹೋದ ಆಹಾರಗಳ ಬಗ್ಗೆ ಜಾಗೃತಿಯನ್ನು ಮೂಡಿಸುತ್ತಿರುವುದು ಶ್ಲಾಘನೀಯ ಎಂದರು.
ಸಾವಯವ ಕೃಷಿಕ ಹುಣಸೂರಿನ ಪಾಸಿಟೀವ್ ತಮ್ಮಯ್ಯ ಮಾತನಾಡಿ, ಗ್ರಾಹಕರು ಕಂದಮೂಲಗಳನ್ನು ತಮ್ಮ ದಿನನಿತ್ಯದ ಅಡುಗೆಗಳಲ್ಲಿ ಬಳಸಬೇಕೆಂದರೆ, ಅವುಗಳ ಪಾಕ ವಿಧಾನ ಪರಿಚಯ ಮಾಡಬೇಕು. ಇವತ್ತಿನ ಅಡುಗೆ ಸ್ಪರ್ಧೆಯಲ್ಲಿ ವಿವಿಧ ಬಗೆಯ ಹೊಸ ತರಹದ ಅಡುಗೆಗಳನ್ನು ಪರಿಚಯಿಸಿದ್ದು ಸಂತಸದ ಸಂಗತಿ ಎಂದು ಹೇಳಿದರು.ತೀರ್ಪುಗಾರರಾಗಿದ್ದ ಶ್ವೇತ ಮಾತನಾಡಿ, ಗೆಡ್ಡೆ ಗೆಣಸುಗಳು ದೇಹದಲ್ಲಿ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುವಲ್ಲಿ ಸಹಕಾರಿಯಾಗಿವೆ. ಸುಲಭನಾಗಿ ಬೆಳೆಯಬಹುದಾದ ಗೆಡ್ಡೆ ಗೆಣಸುಗಳನ್ನು ದಿನ ನಿತ್ಯದ ಅಡುಗೆಗಳಲ್ಲಿ ಬಳಸುವ ಮೂಲಕ ಅಪೌಷ್ಟಿಕತೆಯನ್ನು ದೂರ ಮಾಡಬಹುದು ಎಂದರು.
ಗೆಡ್ಡೆ ಗೆಣಸು ಅಡುಗೆ ಸ್ಪರ್ಧೆ ವಿಜೇತರು
ಈ ಸ್ಪರ್ಧೆಯಲ್ಲಿ ಪ್ರತಿಮಾ ಪಾಟೀಲ್ (ಪ್ರಥಮ), ತಿರುಮಲೇಶ್ವರಿ ವಿಠ್ಠಲ್(ದ್ವಿತೀಯ) ಹಾಗೂ ಹರ್ಷಿತಾ ಎಂ. ಸಂತೋಷಿ (ತೃತೀಯ) ಬಹುಮಾನ ಪಡೆದರು. ಗೀತಾ ರಾವ್, ಬೀಬಿ ಜಾನ್ ಮತ್ತು ಗುಲಾಬಿ ಅವರು ಸಮಾಧಾನಕರ ಬಹುಮಾನ ಪಡೆದರು.