ವಿಘ್ನೇಶ್ ಎಂ. ಭೂತನಕಾಡು
ಕಾವೇರಿ ನದಿ ಉಗಮಿಸುವ ಕೊಡಗು ಜಿಲ್ಲೆಯಲ್ಲೇ ಕಾವೇರಿ ನದಿ ನೀರು ಮಲಿನಗೊಳ್ಳುತ್ತಿದೆ. ಜಿಲ್ಲೆಯ ಕೆಲವು ಕಡೆಗಳಲ್ಲಿ ನದಿಗೆ ನೇರವಾಗಿ ಕೊಳಚೆ ನೀರನ್ನು ಬಿಡುವುದು ಸಾಮಾನ್ಯವಾಗಿದೆ. ಆದರೆ ಈ ವರೆಗೂ ಯಾವುದೇ ಕಠಿಣ ಕ್ರಮ ಜಾರಿಯಾಗಿಲ್ಲ.
ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ರಾಜ್ಯದ ನದಿಗಳ ನೀರಿನ ಗುಣಮಟ್ಟದ ಕುರಿತಂತೆ ಕಾಲಕಾಲಕ್ಕೆ ಪರೀಕ್ಷೆ ನಡೆಸುತ್ತದೆ. ಕಾವೇರಿ ಸೇರಿದಂತೆ ರಾಜ್ಯದ ಸುಮಾರು 12 ನದಿಗಳ ನೀರು ಕುಡಿಯಲು ಯೋಗ್ಯವಲ್ಲ ಎಂದು ಈಗಾಗಲೇ ವರದಿ ನೀಡಿದೆ. ಹೀಗಿದ್ದರೂ ಕಾವೇರಿ ತವರಲ್ಲಿ ನದಿ ನೀರು ಕಲುಷಿತಗೊಳ್ಳುತ್ತಿರುವುದು ಮಾತ್ರ ತಪ್ಪುತ್ತಿಲ್ಲ.ಸಿದ್ದಾಪುರ ಸಮೀಪದ ನೆಲ್ಯಹುದಿಕೇರಿಯಲ್ಲಿ ಕಾವೇರಿ ನದಿಯಲ್ಲಿ ತ್ಯಾಜ್ಯ ನೀರು ಸರಾಗವಾಗಿ ಹರಿಯುತ್ತಿದ್ದು, ಕಾವೇರಿ ನದಿ ನೀರು ಮತ್ತಷ್ಟು ಕಲುಷಿತವಾಗಲು ಕಾರಣವಾಗುತ್ತಿದೆ. ಈ ಬಗ್ಗೆ ಸಂಬಂಧಿಸಿದವರು ಯಾವುದೇ ಕ್ರಮ ಕೈಗೊಂಡಿಲ್ಲ.
ಕಾವೇರಿ ನದಿ ನೀರು ಹರಿಯುವ ಭಾಗಮಂಡಲ, ಸಿದ್ದಾಪುರ, ಕುಶಾಲನಗರ ಸೇರಿದಂತೆ ಹಲವು ಕಡೆಗಳಲ್ಲಿ ತ್ಯಾಜ್ಯ ನೀರು ಕಾವೇರಿಗೆ ಸೇರುತ್ತಿರುವ ಪರಿಣಾಮ ಕಾವೇರಿ ನದಿ ನೀರಿನ ಗುಣಮಟ್ಟ ತೀರಾ ಕಳಪೆಯಾಗಿದೆ.
ಮೂಲ ಕಾವೇರಿಯಿಂದ ಜಿಲ್ಲೆಯ ಹಲವು ಪಂಚಾಯಿತಿಗಳ ವ್ಯಾಪ್ತಿಯ ಕಲುಷಿತ ನೀರು ನೇರವಾಗಿ ನದಿಗೆ ಸೇರುತ್ತಿರುವುದು ಇದಕ್ಕೆ ಪ್ರಮುಖ ಕಾರಣ. ಪಟ್ಟಣದ ಬಹುತೇಕ ತ್ಯಾಜ್ಯ ನದಿ ಸೇರುತ್ತಿರುವುದರಿಂದ ಜಲಚರಗಳು ನಾಶ ಹೊಂದುವುದರೊಂದಿಗೆ ನದಿ ನೀರಿನ ಗುಣಮಟ್ಟ ಬಳಕೆಗೆ ಯೋಗ್ಯವಲ್ಲ ಎನ್ನುವ ಸ್ಥಿತಿಗೆ ತಲುಪಿರುವುದು ಆತಂಕಕಾರಿಯಾಗಿದೆ.
ನೀರಿಗೆ ರಾಸಾಯನಿಕ: ಕಾಫಿ ಪಲ್ಪಿಂಗ್ ಕೊಳಚೆ ನೀರು ಮತ್ತು ಶುಂಠಿ ತೊಳೆದ ರಾಸಾಯನ ಮಿಶ್ರಿತ ನೀರು ಸೇರುವುದರಿಂದ ಕಾವೇರಿ ನೀರು ಮತ್ತಷ್ಟು ಮಲಿನಗೊಳ್ಳುತ್ತಿದೆ.
...............................ಅಸ್ಸಾಂ ಕಾರ್ಮಿಕರಿಗೆ ದಂಡ!
ಮಡಿಕೇರಿ ತಾಲೂಕಿನ ಕಕ್ಕಬೆ ಪಟ್ಟಣದ ಹತ್ತಿರ ಮುಖ್ಯರಸ್ತೆಯ ಹೊಳೆಯಲ್ಲಿ ಅಸ್ಸಾಂ ವಲಸಿಗರು 8 ಜನರು ಸ್ಥಾನ ಮಾಡುವುದು, ಬಟ್ಟೆ ಒಗೆಯುತ್ತಿರುವುದು, ಮೀನು ಹಿಡಿಯುವುದು, ಪಾತ್ರೆ ತೊಳೆಯುವುದು, ಅಲ್ಲದೆ ತಲೆ ಕೂದಲುಗಳನ್ನು ಕತ್ತರಿಸಿ ಹೊಳೆಗೆ ಹಾಕುತ್ತಿರುವುದು ಕಂಡುಬಂದಿದೆ.
ಪಂಚಾಯಿತಿಯ ಈ ಕೆಲಸಕ್ಕೆ ಮೆಚ್ಚುಗೆ ವ್ಯಕ್ತವಾಗಿದ್ದು, ಜಿಲ್ಲೆಯಾದ್ಯಂತ ಕಾವೇರಿ ನದಿ ಹರಿದು ಹೋಗುವ ಪ್ರದೇಶದ ಎಲ್ಲಾ ಪಂಚಾಯಿತಿಗಳಲ್ಲಿ ಇಂತಹ ಕ್ರಮ ತೆಗೆದುಕೊಳ್ಳಬೇಕೆಂಬ ಆಗ್ರಹ ಕೇಳಿ ಬಂದಿದೆ. ................................
ಈಗಲೇ ನದಿಗೆ ಪಂಪ್ ಸೆಟ್!ಇದೀಗ ಕಾಫಿ ಕೊಯ್ಲು ಸಮಯವಾಗಿರುವುದರಿಂದ ಕೆಲವು ಕಡೆಗಳಲ್ಲಿ ನದಿ ಹಾಗೂ ಹೊಳೆಗೆ ಮೋಟಾರ್ ಪಂಪ್ ಸೆಟ್ ಗಳನ್ನು ಈಗಲೇ ಅಳವಡಿಸಿ ನೀರು ಎತ್ತಲಾಗುತ್ತಿದೆ. ಕಾವೇರಿ ನದಿ ನೀರು ಹರಿದು ಹೋಗುವ ಅಲ್ಲಲ್ಲಿ ಅಕ್ರಮ ಪಂಪ್ ಸೆಟ್ ಗಳಿದ್ದು, ಈ ಬಗ್ಗೆ ಸಂಬಂಧಿಸಿದವರು ಕ್ರಮ ತೆಗೆದುಕೊಳ್ಳಬೇಕಿದೆ. ಇಲ್ಲವಾದಲ್ಲಿ ಬೇಸಗೆ ಅವಧಿಯಲ್ಲಿ ನೀರಿನ ಪ್ರಮಾಣ ತೀವ್ರ ಇಳಿಮುಖವಾಗಿದ್ದು, ನೀರಿಗೆ ತೀವ್ರ ಸಮಸ್ಯೆ ಉಂಟಾಗಲಿದೆ. ಕಾಫಿ ಪಲ್ಪಿಂಗ್ ತ್ಯಾಜ್ಯವನ್ನು ಅದೇ ನೀರಿಗೆ ಬಿಡುತ್ತಿರುವುದರಿಂದ ನದಿ ಮೂಲ ತೀವ್ರವಾಗಿ ಕಲುಷಿತವಾಗುತ್ತಿದೆ. ಈ ಬಗ್ಗೆ ಸಂಬಂಧಿಸಿದವರು ಎಚ್ಚರ ವಹಿಸಿ ಕ್ರಮ ತೆಗೆದುಕೊಳ್ಳಬೇಕಿದೆ.
........................ಕಾವೇರಿ ನದಿ ಉಗಮಿಸುವ ಸ್ಥಳದಲ್ಲೇ ನೀರು ಮಲಿನವಾಗುತ್ತಿದೆ. ಈಗಾಗಲೇ ನೀರು ಕಲುಷಿತಗೊಂಡಿದೆ. ಅಸ್ಸಾಂ ಕಾರ್ಮಿಕರು ನೀರನ್ನು ಕಲುಷಿತ ಮಾಡುತ್ತಿದ್ದರು. ಈ ಸಂದರ್ಭ ಪಂಚಾಯಿತಿಯಿಂದ ಅವರಿಗೆ ದಂಡ ವಿಧಿಸಿ ನೀರು ಕಲುಷಿತ ಮಾಡದಂತೆ ಎಚ್ಚರಿಕೆ ನೀಡಲಾಗಿದೆ.
-ಕಲಿಯಂಡ ಸಂಪನ್ ಅಯ್ಯಪ್ಪ, ಮಾಜಿ ಅಧ್ಯಕ್ಷ, ಕುಂಜಿಲ-ಕಕ್ಕಬ್ಬೆ ಗ್ರಾ.ಪಂ............................
ಕುಶಾಲನಗರ, ನೆಲ್ಯಹುದಿಕೇರಿ ಸೇರಿದಂತೆ ಕಾವೇರಿ ನದಿ ಹರಿದು ಹೋಗುವ ಹಲವು ಕಡೆಗಳಲ್ಲಿ ಕಾವೇರಿ ನದಿ ನೀರು ಗಣನೀಯ ಪ್ರಮಾಣದಲ್ಲಿ ಮಲಿನವಾಗುತ್ತಿದೆ. ಈ ಬಗ್ಗೆ ಸರ್ಕಾರ ಕ್ರಮ ತೆಗೆದುಕೊಳ್ಳಬೇಕು. ಕಾವೇರಿ ನದಿ ನೀರು ಸ್ವಚ್ಛತೆ ಹಾಗೂ ಸಂರಕ್ಷಣೆಗೆ ಸರ್ಕಾರ ಬಜೆಟ್ನಲ್ಲಿ ಯೋಜನೆ ರೂಪಿಸಬೇಕು.-ಚಂದ್ರಶೇಖರ್ ಹೇರೂರು, ಬಿಜೆಪಿ ಯುವ ಮುಖಂಡ, ಕುಶಾಲನಗರ.