ಅಕ್ರಮ ಗಣಿಗಾರಿಕೆಯಲ್ಲಿ ನಿರಂತರ ತೊಡಗಿದಲ್ಲಿ ಗಡಿಪಾರು ಶಿಕ್ಷೆ:ಡಿಸಿ ವೈಶಾಲಿ

KannadaprabhaNewsNetwork |  
Published : Jun 11, 2024, 01:36 AM IST
ಸಭೆಯಲ್ಲಿ ಜಿಲ್ಲಾಧಿಕಾರಿ ವೈಶಾಲಿ.ಎಂ.ಎಲ್‌ ಮಾತನಾಡಿದರು. | Kannada Prabha

ಸಾರಾಂಶ

ತಹಸೀಲ್ದಾರರು ತಮಗಿರುವ ದಂಡಾಧಿಕಾರಿ ಅಧಿಕಾರವನ್ನು ಬಳಸಿಕೊಂಡು ಅಕ್ರಮ ಗಣಿಗಾರಿಕೆಯಲ್ಲಿ ತೊಡಗಿದವರನ್ನು ಶಿಕ್ಷೆಗೆ ಗುರಿಪಡಿಸಬೇಕು ಎಂದು ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್. ಸೂಚಿಸಿದರು.

ಕನ್ನಡಪ್ರಭ ವಾರ್ತೆ ಗದಗ

ಜಿಲ್ಲೆಯಲ್ಲಿ ಗಣಿಗಾರಿಕೆಯನ್ನು ಸರ್ಕಾರದ ನಿಯಮಾನುಸಾರ ಸರಿಯಾಗಿ ನಿರ್ವಹಿಸಬೇಕು. ಅಕ್ರಮ ಗಣಿಗಾರಿಕೆಯಲ್ಲಿ ತೊಡಗಿ ನಿರಂತರವಾಗಿ ನಿಯಮಗಳನ್ನು ಉಲ್ಲಂಘಿಸುವರನ್ನು ಗುರುತಿಸಿ ಗಡಿಪಾರು ಶಿಕ್ಷೆಗೆ ಒಳಪಡಿಸಲು ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್. ಸೂಚಿಸಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ನಡೆದ ಜಿಲ್ಲಾ ಟಾಸ್ಕ್‌ಫೋರ್ಸ್‌(ಗಣಿ) ಸಮಿತಿ, ಜಿಲ್ಲಾ ಮರಳು ಉಸ್ತುವಾರಿ ಸಮಿತಿ ಹಾಗೂ ಕರ್ನಾಟಕ ಕಲ್ಲುಪುಡಿ ಮಾಡುವ ಘಟಕಗಳ ನಿಯಂತ್ರಣ ಮತ್ತು ಲೈಸನ್ಸಿಂಗ್ ಪ್ರಾಧಿಕಾರದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ತಾಲೂಕು ತಹಸೀಲ್ದಾರರು ತಮಗಿರುವ ದಂಡಾಧಿಕಾರಿ ಅಧಿಕಾರವನ್ನು ಬಳಸಿಕೊಂಡು ಅಕ್ರಮ ಗಣಿಗಾರಿಕೆಯಲ್ಲಿ ತೊಡಗಿದವರನ್ನು ಶಿಕ್ಷೆಗೆ ಗುರಿಪಡಿಸಬೇಕು. ತಮ್ಮ ಅಧಿಕಾರ ವ್ಯಾಪ್ತಿಯಲ್ಲಿ ಅಕ್ರಮ ಗಣಿಗಾರಿಕೆ ನಡೆಸುವವರಿಗೆ ಅಧಿಕ ಪ್ರಮಾಣದ ದಂಡ ವಿಧಿಸಲು ಅವಕಾಶವಿದ್ದು, ಅದನ್ನು ಚಲಾಯಿಸುವ ಮೂಲಕ ಕಾನೂನು ಉಲ್ಲಂಘನೆ ಮಾಡುವವರನ್ನು ಸರಿದಾರಿಗೆ ತರಬೇಕು. ದಂಡ ವಿಧಿಸಿದ ನಂತರ ಅದನ್ನು ಸಂಬಂಧಿಸಿದ ವ್ಯಕ್ತಿಯ ಖಾತೆಯಲ್ಲಿ ಭೋಜಾ ದಾಖಲಿಸಬೇಕು. ಪದೇ ಪದ ತಪ್ಪೆಸಗಿದಲ್ಲಿ ಅವರನ್ನು ಗಡಿಪಾರು ಶಿಕ್ಷೆಗೆ ಒಳಪಡಿಸಲು ಶಿಸ್ತು ಕ್ರಮ ಕೈಗೊಳ್ಳಲು ಮುಂದಾಗುವಂತೆ ಸೂಚಿಸಿದರು.

ಕಂದಾಯ, ಅರಣ್ಯ, ಗಣಿ ಮತ್ತು ಭೂ ವಿಜ್ಞಾನ ಇಲಾಖೆ, ಸಾರಿಗೆ ಇಲಾಖೆ, ಸಣ್ಣ ನೀರಾವರಿ ಇಲಾಖೆ ಹಾಗೂ ಪೊಲೀಸ್‌ ಇಲಾಖೆ ಅಧಿಕಾರಿಗಳು ತಮಗಿರುವ ಅಧಿಕಾರವನ್ನು ಚಲಾಯಿಸುವ ಮೂಲಕ ಅಕ್ರಮ ಮರಳು, ಕಲ್ಲು ಗಣಿಗಾರಿಕೆ ತಡೆಗೆ ಮುಂದಾಗಬೇಕು. ಈ ಮೂಲಕ ಸಾರ್ವಜನಿಕ ಆಸ್ತಿ ಸಂರಕ್ಷಣೆ ಮಾಡಬೇಕು ಹಾಗೂ ಸಾರ್ವಜನಿಕರ ವಿಶ್ವಾಸಾರ್ಹತೆ ಉಳಿಸಿಕೊಳ್ಳುವಂತೆ ತಿಳಿಸಿದರು.

ಅಕ್ರಮ ಗಣಿಗಾರಿಕೆ ಕುರಿತು ಮಾಧ್ಯಮದಲ್ಲಿ ಪ್ರಕಟವಾಗುವ ಸುದ್ದಿಗಳ ಕುರಿತು ಸಂಬಂಧಿತ ಇಲಾಖೆಯ ಅಧಿಕಾರಿಗಳು ನೈಜತೆ ಬಗ್ಗೆ ಪರಿಶೀಲಿಸಿ ಸೂಕ್ತ ಕ್ರಮಗಳನ್ನು ವಹಿಸುವಂತೆ ಹೇಳಿದರು.

ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಬಿ.ಎಸ್. ನೇಮಗೌಡ ಮಾತನಾಡಿ, ಅಕ್ರಮ ಗಣಿಗಾರಿಕೆಯಲ್ಲಿ ತೊಡಗಿದವರ ಮೇಲೆ ನಿರಂತರ ನಿಗಾ ವಹಿಸಬೇಕು. ವಾಹನಗಳ ತಪಾಸಣೆ ನಿಯಮಿತವಾಗಿ ಸಾರಿಗೆ ಅಧಿಕಾರಿಗಳು ಮಾಡಬೇಕು. ಓವರ ಲೋಡ್ ವಾಹನಗಳಿಗೆ ನಿಯಮಾನುಸಾರ ದಂಡ ವಿಧಿಸುವ ಮೂಲಕ ಪ್ರಕರಣ ದಾಖಲಿಸುವಂತೆ ಸೂಚಿಸಿದರು.

ಇಲಾಖಾಧಿಕಾರಿಗಳು ಜಂಟಿ ಸಮೀಕ್ಷೆ, ಸ್ಥಳ ಪರಿಶೀಲನೆಗೆ ತೆರಳುವ ಸಂದರ್ಭದಲ್ಲಿ ಪೊಲೀಸ್‌ ಇಲಾಖಾಧಿಕಾರಿಗಳ ಸಹಕಾರದೊಂದಿಗೆ ಕಾರ್ಯನಿರ್ವಹಿಸಲು ತಿಳಿಸಿದರು.

ಜಿಪಂ ಸಿಇಒ ಭರತ್‌ ಎಸ್‌. ಮಾತನಾಡಿ, ಸರ್ಕಾರದ ಮಾರ್ಗಸೂಚಿಗಳನ್ವಯ ಗಣಿಗಾರಿಕೆ ಮಾಡುವವರಿಗೆ ಅವಕಾಶ ನೀಡಬೇಕು. ಮಾರ್ಗಸೂಚಿ ಉಲ್ಲಂಘಿಸಿದಲ್ಲಿ ಶಿಸ್ತು ಕ್ರಮ ತಪ್ಪಿದ್ದಲ್ಲ ಎಂಬುದನ್ನು ಮನವರಿಕೆ ಮಾಡಿಸುವ ಕಾರ್ಯ ಇಲಾಖಾಧಿಕಾರಿಗಳಿಂದ ಆಗಬೇಕು ಎಂದರು.

ಸಭೆಯಲ್ಲಿ ಹೊಳೆ, ನದಿಗಳ ಪಾತ್ರದಲ್ಲಿನ ಗುರುತಿಸಿರುವ ಮರಳು ಬ್ಲಾಕ್‍ಗಳನ್ನು ವಿಲೇವಾರಿ ಮಾಡುವ ಕುರಿತು, ಕಪ್ಪತಗುಡ್ಡ ವನ್ಯ ಜೀವಿ ಧಾಮದಿಂದ 1 ಕಿ.ಮೀ ವ್ಯಾಪ್ತಿಯೊಳಗೆ ಬರುವ ಕ್ರಶರ್ ಘಟಕಗಳ ಲೈಸನ್ಸಗಳನ್ನು ನಿಲಂಬನೆಗೊಳಿಸುವ ಕುರಿತು, ಕ್ರಶರ್ ಘಟಕಗಳ ಹೊಸದಾಗಿ ಮಂಜೂರು ಮಾಡುವ ಕುರಿತು, ಕಪ್ಪತಗುಡ್ಡ ವನ್ಯಜೀವಿ ಧಾಮದಿಂದ 10 ಕಿ.ಮೀ ವ್ಯಾಪ್ತಿಯಲ್ಲಿರುವ ಕಟ್ಟಡ ಕಲ್ಲು, ಮರಳು, ಮಣ್ಣು ಗಣಿಗಾರಿಕೆ ಮತ್ತು ಕ್ರಶರ್ ಘಟಕಗಳ ಚಟುವಟಿಕೆ ನಿಷೇಧಿಸುವ ಕುರಿತು ಹಾಗೂ ಪರಿಸರ ಸೂಕ್ಷ್ಮ ವಲಯದ ವ್ಯಾಪ್ತಿಯೊಳಗೆ ಕಲ್ಲು ಗಣಿ ಪರವಾನಗಿ ಹೊಸ ಅರ್ಜಿ ಕುರಿತಂತೆ ಚರ್ಚಿಸಲಾಯಿತು.

ಉಪ ವಿಭಾಗಾಧಿಕಾರಿ ಡಾ. ವೆಂಕಟೇಶ ನಾಯ್ಕ, ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಹಿರಿಯ ಭೂ ವಿಜ್ಞಾನಿ ಚಿದಂಬರಂ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು, ತಹಸೀಲ್ದಾರರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ರಾಜ್ಯದ 13 ಜಿಲ್ಲೆಗಳಲ್ಲಿ ಬೇಸಿಗೆ ಮಳೆ
ಕನ್ನಡಿಗ ಅಮರೇಶ್‌ಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಗೌರವ