ಹಾವೇರಿ: ಜಿಲ್ಲೆಯಲ್ಲಿ ಮಳೆ ತಗ್ಗಿದ್ದರೂ ಅನಾಹುತ ಮುಂದುವರಿದಿದೆ. ಬೈಕ್ನಲ್ಲಿ ಹೋಗುತ್ತಿದ್ದ ವೇಳೆ ಬೃಹತ್ ಮರವೊಂದು ಉರುಳಿಬಿದ್ದು ಇಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಹಿರೇಕೆರೂರಿನಲ್ಲಿ ಸಂಭವಿಸಿದೆ. ವರದಾ ನದಿ ಪ್ರವಾಹದಿಂದ ತಾಲೂಕಿನ ಹೊಸರಿತ್ತಿಯ ಮಂತ್ರಾಲಯ ರಾಘವೇಂದ್ರ ಮೂಲ ಸಂಸ್ಥಾನ ಮಠ ಜಲಾವೃತಗೊಂಡಿದೆ. ನದಿ ತೀರದ ಸಾವಿರಾರು ಎಕರೆ ಜಮೀನು ಮುಳುಗಡೆಯಾಗಿದೆ.
ಜಿಲ್ಲೆಯಲ್ಲಿ ಸೋಮವಾರ ಮಳೆ ಶಾಂತಗೊಂಡಿದೆ. ಆದರೆ, ಜಿಲ್ಲೆಯಲ್ಲಿ ವರದಾ, ತುಂಗಭದ್ರಾ, ಧರ್ಮಾ, ಕುಮದ್ವತಿ ನದಿಗಳು ಅಪಾಯದ ಮಟ್ಟದಲ್ಲಿ ಹರಿಯುತ್ತಿವೆ. ಅದರಲ್ಲೂ ವರದಾ ನದಿ ನೀರಿನ ಮಟ್ಟ ಏರುತ್ತಲೇ ಇದೆ. ಇದರಿಂದ ತಾಲೂಕಿನ ಹೊಸರಿತ್ತಿಯಲ್ಲಿರುವ ಮಂತ್ರಾಲಯ ರಾಘವೇಂದ್ರ ಸ್ವಾಮಿಗಳ ಮೂಲ ಸಂಸ್ಥಾನ ಮಠ ಜಲಾವೃತಗೊಂಡಿದೆ.
ಮಠದ ಸುತ್ತ ವರದಾ ನದಿ ನೀರು ತುಂಬಿದ್ದು, ಒಳನುಗ್ಗುವ ಆತಂಕ ಎದುರಾಗಿದೆ. ರಾಯರ ಮಠದ ಉದ್ಯಾನ, ಸಭಾಭವನ, ಮೆಟ್ಟಿಲು, ಆವರಣವನ್ನು ವರದೆ ನೀರು ಸುತ್ತುವರಿದಿದೆ. ಗುರುಪೂರ್ಣಿಮೆ ಅಂಗವಾಗಿ ವಿವಿಧೆಡೆಯಿಂದ ಆಗಮಿಸಿದ್ದ ಭಕ್ತರು ಪರದಾಡುವಂತಾಗಿದೆ.ಬೆಳೆ ಮುಳುಗಡೆ: ವರದಾ ನದಿ ಅಬ್ಬರಕ್ಕೆ ನೂರಾರು ಎಕರೆ ಜಮೀನು ಮುಳುಗಡೆಯಾಗಿದೆ. ನಾಗನೂರು, ಕೋಳೂರು, ಕೂಡಲ, ಹೊಸರಿತ್ತಿ, ಸಂಗೂರು, ವರ್ದಿ, ವರದಾಹಳ್ಳಿ, ಕುಣಿಮೆಳ್ಳಿಹಳ್ಳಿ ಸೇರಿದಂತೆ ಹಲವು ಗ್ರಾಮಗಳ ಹೊಲಗದ್ದೆಗಳಿಗೆ ನೀರು ನುಗ್ಗಿದೆ. ಹತ್ತಿ, ಮೆಕ್ಕೆಜೋಳ, ತರಕಾರಿ ಬೆಳೆಗಳು ನೀರಿನಲ್ಲಿ ಮುಳುಗಿ ಕೊಳೆಯತೊಡಗಿದೆ.
ಕಾಲುವೆಯಿಂದ ಬೋರ್ಗರೆಯುತ್ತಿರುವ ನೀರನ್ನು ನೋಡಲು ಅಕ್ಕಪಕ್ಕದ ಜನತೆ ಮುಗಿಬೀಳುತ್ತಿದ್ದಾರೆ. ಅದೇ ರೀತಿ ಹಿರೇಕೆರೂರು ತಾಲೂಕಿನ ಮದಗ ಮಾಸೂರು ಕೆರೆ ಕೂಡ ಕೋಡಿ ಬಿದ್ದಿದೆ.