ಗ್ರಾಮ ಆಡಳಿತ ಅಧಿಕಾರಿಗಳ ಬೇಡಿಕೆ ಈಡೇರಿಕೆಗೆ ಮುಂದುವರಿದ ಮುಷ್ಕರ

KannadaprabhaNewsNetwork |  
Published : Oct 01, 2024, 01:41 AM IST
30ಎಚ್‌ಪಿಟಿ2- ರಾಜ್ಯ ಗ್ರಾಮ ಆಡಳಿತ ಅಧಿಕಾರಿಗಳ ಕೇಂದ್ರ ಸಂಘದಿಂದ ನಗರದ ಜಿಲ್ಲಾಧಿಕಾರಿ ಎದುರು ನಡೆಯುತ್ತಿರುವ ಅನಿರ್ದಿಷ್ಟಾವಧಿ ಮುಷ್ಕರ ಸೋಮವಾರ ನಾಲ್ಕನೇ ದಿನಕ್ಕೆ ಕಾಲಿಟ್ಟಿತು. | Kannada Prabha

ಸಾರಾಂಶ

ಅಧಿಕ ಒತ್ತಡದೊಂದಿಗೆ ಗ್ರಾಮ ಆಡಳಿತ ಅಧಿಕಾರಿಗಳು ನೋವು ಅನುಭವಿಸುತ್ತಿದ್ದಾರೆ

ಹೊಸಪೇಟೆ: ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಒತ್ತಾಯಿಸಿ ರಾಜ್ಯ ಗ್ರಾಮ ಆಡಳಿತ ಅಧಿಕಾರಿಗಳ ಕೇಂದ್ರ ಸಂಘದಿಂದ ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ನಡೆಯುತ್ತಿರುವ ಅನಿರ್ದಿಷ್ಟಾವಧಿ ಮುಷ್ಕರ ಸೋಮವಾರ ನಾಲ್ಕನೇ ದಿನಕ್ಕೆ ಕಾಲಿಟ್ಟಿತು.ಇಲಾಖೆಯಿಂದ ಅಭಿವೃದ್ದಿ ಪಡಿಸಿರುವ ಸುಮಾರು 21ಕ್ಕೂ ಅಧಿಕ ಮೊಬೈಲ್-ವೆಬ್ ತಂತ್ರಾಂಶಗಳ ಮೂಲಕ ಕರ್ತವ್ಯ ನಿರ್ವಹಿಸಲು ಒತ್ತಡ ಹೇರುತ್ತಿದ್ದಾರೆ. ಈ ತಂತ್ರಾಂಶಗಳ ನಿರ್ವಹಣೆಗೆ ಅವಶ್ಯಕವಾಗಿರುವ ಮೊಬೈಲ್ ಸಾಧನ, ಲ್ಯಾಪ್ ಟಾಪ್, ಅದಕ್ಕೆ ಅವಶ್ಯಕವಾಗಿರುವ ಇಂಟರ್ನೆಟ್ ಹಾಗೂ ಸ್ಕ್ಯಾನರ್‌ಗಳನ್ನು ಒದಗಿಸದೇ ಕರ್ತವ್ಯ ನಿರ್ವಹಿಸಲು ಒತ್ತಡ ಹೇರುತ್ತಿರುವುದರಿಂದ ಕ್ಷೇತ್ರ ಮಟ್ಟದಲ್ಲಿ ಅಧಿಕ ಒತ್ತಡದೊಂದಿಗೆ ಗ್ರಾಮ ಆಡಳಿತ ಅಧಿಕಾರಿಗಳು ನೋವು ಅನುಭವಿಸುತ್ತಿದ್ದಾರೆ ಎಂದು ದೂರಿದರು.

ಕಂದಾಯ ಇಲಾಖೆಯ ಮೂರು ವರ್ಷ ಸೇವೆ ಪರಿಗಣಿಸಿ ಅಂತರ ಜಿಲ್ಲಾ ವರ್ಗಾವಣೆಗೆ ಹೊಸ ಮಾರ್ಗ ಸೂಚಿ ರಚಿಸಬೇಕು. ಆಯುಕ್ತಾಲಯದ ಅಡಿಯಲ್ಲಿ ಗ್ರಾಮ ಆಡಳಿತ ಅಧಿಕಾರಿಗಳ ಜೇಷ್ಠತೆಯನ್ನು ರಾಜ್ಯ ಮಟ್ಟದ ಜೇಷ್ಠತೆಯನ್ನಾಗಿ ಪರಿಗಣಿಸಬೇಕು. ಮೊಬೈಲ್ ತಂತ್ರಾಂಶಗಳ ಕೆಲಸದ ವಿಚಾರವಾಗಿ ಇದುವರೆಗೆ ಆಗಿರುವ ಎಲ್ಲಾ ಅಮಾನತುಗಳನ್ನು ತಕ್ಷಣವೇ ರದ್ದುಪಡಿಸಿ ಆದೇಶ ಹಿಂಪಡೆಯಬೇಕು. ಪ್ರಯಾಣ ಭತ್ಯೆ ದರವನ್ನು ₹500 ಬದಲಾಗಿ ₹3000 ಹೆಚ್ಚಿಸಬೇಕೆಂಬ ಬೇಡಿಕೆ ಸೇರಿದಂತೆ ಇತರೆ ಬೇಡಿಕೆಗಳ ಈಡೇರಿಕೆಗಾಗಿ ಮನವಿ ಪತ್ರ ಸಲ್ಲಿಸಲಾಯಿತು.

ಗ್ರಾಮ ಆಡಳಿತ ಅಧಿಕಾರಿಗಳಿಗೆ ಸುಸಜ್ಜಿತ ಕಚೇರಿ ಕಲ್ಪಿಸಬೇಕು. ಗುಣಮಟ್ಟದ ಪೀಠೋಪಕರಣಗಳು, ಅಂತರ್ಜಾಲ ವ್ಯವಸ್ಥೆಯನ್ನು ಒದಗಿಸಬೇಕು. ಸಂಯೋಜನೆ, ಇ-ಆಫೀಸ್, ಗರುಡ, ಭೂಮಿ, ನವೋದಯ, ದಿಶಾಂಕ್‌ ಮತ್ತಿತರ ತಂತ್ರಾಂಶಗಳ ನಿರ್ವಹಣೆಗೆ ಹೆಚ್ಚಿನ ಡೇಟಾ ಸಾಮರ್ಥ್ಯದ ಸ್ಮಾರ್ಟ್‌ ಫೋನ್‌ಗಳನ್ನು ನೀಡಬೇಕು ಎಂದು ಆಗ್ರಹಿಸಿದರು.

ಜಿಲ್ಲಾ ಗ್ರಾಮ ಆಡಳಿತ ಅಧಿಕಾರಿಗಳ ಸಂಘದ ಪ್ರಧಾನ ಕಾರ್ಯದರ್ಶಿ ಗುರುಬಸವರಾಜ ಸಿ., ಉಪಾಧ್ಯಕ್ಷ ವೀರೇಶ್, ಖಜಾಂಚಿ ಬಸವರಾಜ, ತಾಲೂಕು ಅಧ್ಯಕ್ಷರಾದ ರವಿಚಂದ್ರ ಗೊಗ್ಗಿ,ಮಲ್ಲೇಶ್ ನಾಯ್ಕ, ಶಶಿಕುಮಾರ್, ಜ್ಯೋತಿ ಬಾಯಿ, ಮರುಳಸಿದ್ದಪ್ಪ, ದೇವೇಂದ್ರಪ್ಪ ಮತ್ತು ಗ್ರಾಮ ಸಹಾಯಕರ ಜಿಲ್ಲಾ ಸಂಘದ ಅಧ್ಯಕ್ಷ ಟಿ. ಫಕ್ಕೀರಪ್ಪ ಮತ್ತು ಪದಾಧಿಕಾರಿಗಳು, ಎಲ್ಲಾ ಹಂತದ ಗ್ರಾಮ ಆಡಳಿತ ಅಧಿಕಾರಿಗಳ ಪದಾಧಿಕಾರಿಗಳು, ಜಿಲ್ಲೆಯ ಎಲ್ಲಾ ಗ್ರಾಮ ಆಡಳಿತ ಅಧಿಕಾರಿಗಳು ಇದ್ದರು.

ರಾಜ್ಯ ಗ್ರಾಮ ಆಡಳಿತ ಅಧಿಕಾರಿಗಳ ಕೇಂದ್ರ ಸಂಘದಿಂದ ನಗರದ ಜಿಲ್ಲಾಧಿಕಾರಿ ಎದುರು ನಡೆಯುತ್ತಿರುವ ಅನಿರ್ದಿಷ್ಟಾವಧಿ ಮುಷ್ಕರ ಸೋಮವಾರ ನಾಲ್ಕನೇ ದಿನಕ್ಕೆ ಕಾಲಿಟ್ಟಿತು.

PREV

Recommended Stories

ದೇಶದ ನಾಯಕರಾಗಲು ಶಾಲೆಯಲ್ಲಿ ನಾಯಕತ್ವ ವಹಿಸಿಕೊಳ್ಳಿ
ಪರಿಷ್ಕೃತ ಜಿಎಸ್‌ಟಿ ಬಡ ಜನತೆಗೆ ಅನುಕೂಲ