ಗದಗ: ಸಾರ್ವಜನಿಕರು ಸಲ್ಲಿಸುವ ಪ್ರತಿಯೊಂದು ಅರ್ಜಿಯನ್ನು ಕೇವಲ ಸ್ವೀಕರಿಸಿ ಅಲ್ಲಿಗೇ ಕೈಬಿಡದೆ, ಸಮಸ್ಯೆ ಸಂಪೂರ್ಣವಾಗಿ ಬಗೆಹರಿಯುವ ವರೆಗೆ ಸಂಬಂಧಪಟ್ಟ ಇಲಾಖೆಗಳೊಂದಿಗೆ ನಿರಂತರವಾಗಿ ಅನುಸರಣೆ ಮಾಡಲಾಗುವುದು ಎಂದು ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ ಹೇಳಿದರು.
ಸಭೆಯಲ್ಲಿ ಕಂದಾಯ, ಪಂಚಾಯತ್ ರಾಜ್, ಪೊಲೀಸ್, ಅರಣ್ಯ ಹಾಗೂ ಕೃಷಿ ಇಲಾಖೆಗಳಿಗೆ ಸಂಬಂಧಿಸಿದಂತೆ ನೂರಾರು ಅರ್ಜಿಗಳು ಸಲ್ಲಿಕೆಯಾದವು. ಕೆಲವು ಸಮಸ್ಯೆಗಳಿಗೆ ಅಧಿಕಾರಿಗಳು ಸ್ಥಳದಲ್ಲೇ ಪರಿಹಾರ ಕಲ್ಪಿಸಿದರು. ಸ್ಥಳ ಪರಿಶೀಲನೆ ಹಾಗೂ ಹೆಚ್ಚಿನ ದಾಖಲೆಗಳ ಅಗತ್ಯವಿರುವ ಅರ್ಜಿಗಳನ್ನು ನಿಗದಿತ ಕಾಲಮಿತಿಯಲ್ಲಿ ಇತ್ಯರ್ಥಪಡಿಸುವಂತೆ ಜಿಲ್ಲಾಧಿಕಾರಿ ಕಟ್ಟುನಿಟ್ಟಿನ ಸೂಚನೆ ನೀಡಿದರು.
ಪ್ರಜಾಸೇವಾ ಅಭಿಯಾನವು ಸರ್ಕಾರದ ಸೇವೆಗಳನ್ನು ಜನರ ಮನೆ ಬಾಗಿಲಿಗೆ ತಲುಪಿಸುವ ಮಹತ್ವದ ಹೆಜ್ಜೆಯಾಗಿದೆ. ಸಾರ್ವಜನಿಕರು ಕೇವಲ ಅಹವಾಲು ಸಲ್ಲಿಸುವುದಷ್ಟೇ ಅಲ್ಲದೆ, ಪರಿಹಾರ ದೊರೆಯುವ ಪ್ರಕ್ರಿಯೆಯಲ್ಲಿ ಅಗತ್ಯ ದಾಖಲೆ ಮತ್ತು ಮಾಹಿತಿಗಳನ್ನು ನೀಡಿ ಜಿಲ್ಲಾಡಳಿತದೊಂದಿಗೆ ಸಕ್ರಿಯವಾಗಿ ಕೈಜೋಡಿಸಬೇಕು ಎಂದು ಗದಗ ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ ಹೇಳಿದರು.ಕಾರ್ಯಕ್ರಮದಲ್ಲಿ ಎಸ್ಪಿ ಮಿಥುನ್ ಎಚ್.ಎನ್., ಅಪರ ಜಿಲ್ಲಾಧಿಕಾರಿ ಡಾ. ದುರ್ಗೇಶ್ ಕೆ.ಆರ್., ಉಪ ಅರಣ್ಯ ಸಂರಕ್ಷಣಾಧಿಕಾರಿ ಸಂತೋಷ ಕುಮಾರ, ಜಿಪಂ ಉಪಕಾರ್ಯದರ್ಶಿ ಸಿ.ಆರ್. ಮುಂಡರಗಿ ಹಾಗೂ ಸಹಾಯಕ ಆಯುಕ್ತ ಗಂಗಪ್ಪ ಎಂ. ಉಪಸ್ಥಿತರಿದ್ದರು.