ಮುಂಡಗೋಡ: ಎಸ್.ಎಸ್.ಎಲ್.ಸಿ. ಫಲಿತಾಂಶ ಉತ್ತಮಪಡಿಸುವ ದೃಷ್ಟಿಯಿಂದ ಸರ್ಕಾರ ಮತ್ತು ಶಿಕ್ಷಣ ಇಲಾಖೆ ಸಾಕಷ್ಟು ಯೋಜನೆಗಳನ್ನು ರೂಪಿಸಿದ್ದು, ನಿರಂತರವಾಗಿ ತರಬೇತಿ ಕಾರ್ಯಕ್ರಮ ಮಾಡಲಾಗುತ್ತಿದೆ. ಮಕ್ಕಳು ಇದರ ಸದುಪಯೋಗ ಪಡಿಸಿಕೊಂಡು ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ ಪಡೆಯಬೇಕು ಎಂದು ಶಿರಸಿ ಶೈಕ್ಷಣಿಕ ಇಲಾಖೆ ಉಪನಿರ್ದೇಶಕ ಡಿ.ಆರ್. ನಾಯ್ಕ ಹೇಳಿದರು.
ಒಂದು ಸಾಮಾನ್ಯ ಹದ್ದು (ಪಕ್ಷಿ) ಮೋಡಕ್ಕೆ ಸವಾಲು ಹಾಕುವ ಸಾಮರ್ಥ್ಯ ಹೊಂದಿದೆ. ಆದರೆ ಇಡೀ ಜೀವರಾಶಿಗಳಲ್ಲಿಯೇ ಶ್ರೇಷ್ಠ ಹಾಗೂ ಬುದ್ಧಿವಂತ ಪ್ರಾಣಿ ಎನಿಸಿಕೊಂಡಿರುವ ಮನುಷ್ಯನಿಗೆ ಏಕೆ ಸಾಧ್ಯವಿಲ್ಲ ಎಂದು ಪ್ರಶ್ನಿಸಿದರು.
ಪ್ರಮುಖವಾಗಿ ಎಸ್.ಎಸ್.ಎಲ್.ಸಿ. ಪರೀಕ್ಷೆ ಮುಗಿಯುವ ತನಕ ಮೊಬೈಲ್, ಕಂಪ್ಯೂಟರ್, ಟಿವಿ ತ್ಯಜಿಸುವಂತೆ ಸಲಹೆ ನೀಡಿದ ಅವರು, ಆರೋಗ್ಯದ ಕಡೆ ಕೂಡ ಗಮನಹರಿಸಿ, ಧೈರ್ಯದಿಂದ ಪರೀಕ್ಷೆ ಎದುರಿಸುವಂತೆ ಕರೆ ನೀಡಿದರು.ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಶಿಕ್ಷಕ ಹಾಗೂ ಶಿಕ್ಷಣ ತಜ್ಞ ಸುರೇಶ ಕುಲಕರ್ಣಿ ಪರೀಕ್ಷಾ ಸಿದ್ಧತೆ ಉಪನ್ಯಾಸ ನೀಡಿದರು. ಮುಂಡಗೋಡ ಕ್ಷೇತ್ರ ಶಿಕ್ಷಣಾಧಿಕಾರಿ ಜಿ. ಸುಮಾ, ಧಾರವಾಡ ವಿಜೇತ ಶಿಕ್ಷಣ ಸಂಸ್ಥೆ ನಿರ್ದೇಶಕ ರಮೇಶ ಪರಿಟ್, ಗದಗ ಗ್ರಾಮೀಣ ಕ್ಷೇತ್ರ ಶಿಕ್ಷಣಾಧಿಕಾರಿ ವಿ.ವಿ. ನಡುವಿನಮನಿ, ಪಿ.ಎಂ. ಪೋಷಣೆ ಸಹಾಯಕ ನಿರ್ದೇಶಕ ವಾಸುದೇವ ನಾಯ್ಕ, ಶಂಕರ ಹಡಗಲಿ, ರಫೀಕ್ ಮಿರಾನಾಯ್ಕ, ಕುಂದಗೋಳ ಮೊರಾರ್ಜಿ ದೇಸಾಯಿ ವಸತಿ ಶಾಲೆ ಪ್ರಾಂಶುಪಾಲ ಮಂಜುನಾಥ ಮರಿತಮ್ಮಣ್ಣವರ, ರಾಜ್ಯ ಸರ್ಕಾರಿ ನೌಕರ ಸಂಘದ ಅಧ್ಯಕ್ಷ ಸುಭಾಸ ಡೋರಿ, ಪ್ರೌಢಶಾಲಾ ಮುಖ್ಯಾಧ್ಯಾಪಕರ ಸಂಘದ ಜಿಲ್ಲಾಧ್ಯಕ್ಷ ಎಸ್.ಡಿ. ಮುಡೆಣ್ಣವರ, ಕ್ಷೇತ್ರ ಸಂಪನ್ಮೂಲ ಕೇಂದ್ರ ಸಮನ್ವಯಾಧಿಕಾರಿ ರಮೇಶ ಅಂಬಿಗೇರ, ಎಸ್.ಎಸ್.ಎಲ್.ಸಿ. ಪರೀಕ್ಷಾ ವಿಭಾಗದ ನೋಡಲ್ ಅಧಿಕಾರಿ ನಾಗರಾಜ ನಾಯ್ಕ ಉಪಸ್ಥಿತರಿದ್ದರು.
ಉಪನ್ಯಾಸಕ ವಿನಾಯಕ ಶೇಟ್ ಕಾರ್ಯಕ್ರಮ ನಿರೂಪಿಸಿದರು. ಮಂಜುಳಾ ಹಿರೇಮಠ, ಅಂಬುಜಾ ಭಟ್, ವೈಶಾಲಿ ಗೊಬ್ಬರದವರ, ಅರ್ಚನಾ ಗುರವ ಸಂಗಡಿಗರು ಪ್ರಾರ್ಥಿಸಿದರು. ಎಸ್.ಡಿ. ಮುಡೆಣ್ಣವರ ಸ್ವಾಗತಿಸಿದರು. ಸದ್ಗುರು ಭಟ್ ವಂದಿಸಿದರು.