ಬೆಂಗಳೂರಿನಾಚೆಗೆ ಮೊದಲ ಬಾರಿಗೆ ರಾಜ್ಯಾಧ್ಯಕ್ಷ ಸ್ಥಾನದ ಗೌರವ । ಜಿಲ್ಲಾ ಗುತ್ತಿಗೆದಾರರ ಸಂಘದಿಂದ ಸಂಭ್ರಮಾಚರಣೆಕನ್ನಡಪ್ರಭ ವಾರ್ತೆ ಚಿತ್ರದುರ್ಗ
ಅಭಿನಂದನೆ ಕಾರ್ಯಕ್ರಮ ಕುರಿತು ಭಾನುವಾರ ಸುದ್ದಿಗಾರರಿಗೆ ಮಾಹಿತಿ ನೀಡಿದ ಗುತ್ತಿಗೆದಾರರ ಸಂಘದ ತಾಲೂಕು ಅಧ್ಯಕ್ಷ ಕೆ.ಮಲ್ಲೇಶಪ್ಪ, ಇದೊಂದು ಅಪರೂಪ ಹಾಗೂ ಅವಿಸ್ಮರಣೀಯ ಕಾರ್ಯಕ್ರಮವಾಗಿದೆ. ಗುತ್ತಿಗೆದಾರರ ಸಂಘ ರಾಜ್ಯ ಘಟಕದ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ರಾಜಧಾನಿಯಾಚೆ ಅಧ್ಯಕ್ಷ ಸ್ಥಾನದ ಅವಕಾಶ ಹುಡುಕಿಕೊಂಡು ಬಂದಿದೆ. ಹಿಂದಿನ ಅಧ್ಯಕ್ಷ ಕೆಂಪಣ್ಣ ಅವರು ಸಂಘದ ಬೈಲಾ ತಿದ್ದುಪಡಿ ಮಾಡಿ ಮಂಜುನಾಥ್ ಅವರಿಗೆ ಅವಕಾಶ ಕಲ್ಪಿಸಿದ್ದಾರೆ ಎಂದರು.
ಗುತ್ತಿಗೆದಾರರ ಸಂಘದ ಚಿತ್ರದುರ್ಗ ಜಿಲ್ಲಾ ಘಟಕಕ್ಕೆ 20 ವರ್ಷಗಳಷ್ಟು ಸುದೀರ್ಘ ಕಾಲ ಅಧ್ಯಕ್ಷರಾಗಿದ್ದ ಆರ್ ಮಂಜುನಾಥ್, ರಾಜ್ಯ ಸಂಘದಲ್ಲಿ ಉಪಾಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು. ತರುವಾಯ ಕಾರ್ಯಾಧ್ಯಕ್ಷರಾಗಿ,ಇದೀಗ ಅಧ್ಯಕ್ಷರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಸಂಘಟನೆಯಲ್ಲಿ ಚುರುಕಾಗಿರುವ ಮಂಜುನಾಥ್, ಗುತ್ತಿಗೆದಾರರ ಸಮಸ್ಯೆ ನಿವಾರಣೆಗೆ ಮೊದಲಿನಿಂದಲೂ ಹೋರಾಟ ಮಾಡಿಕೊಂಡು ಬಂದಿದ್ದಾರೆ. ಕಾಲ ಕಾಲಕ್ಕೆ ಸರ್ಕಾರದ ಜೊತೆ ಮಾತುಕತೆ ನಡೆಸಿ ಗುತ್ತಿಗೆದಾರರ ಬಾಕಿ ಬಿಲ್ ಪಾವತಿಗೆ ಕ್ರಮ ಕೈಗೊಡಿದ್ದಾರೆ ಎಂದು ಮಲ್ಲೇಶಪ್ಪ ಹೇಳಿದರು.ಇದೇ ಮೊದಲ ಬಾರಿಗೆ ಚಿತ್ರದುರ್ಗ ಜಿಲ್ಲೆಗೆ ರಾಜ್ಯಾಧ್ಯಕ್ಷ ಸ್ಥಾನ ಲಭ್ಯವಾದ ಹಿನ್ನಲೆ ಅದ್ದೂರಿ ಕಾರ್ಯಕ್ರಮದ ಮೂಲಕ ಅವಕಾಶವ ಸಾಕ್ಷೀಕರಿಸಲಾಗುತ್ತಿದೆ. ಚಿತ್ರದುರ್ಗ ಹೊರವಲಯದಲ್ಲಿರುವ ಎಸ್.ಜಿ.ಕಲ್ಯಾಣ ಮಂಟಪದಲ್ಲಿ ಏಪ್ರಿಲ್ 8 ರ ಬೆಲಿಗ್ಗೆ 11 ಗಂಟೆಗೆ ನಡೆಯಲಿರುವ ಅಭಿನಂದನಾ ಕಾರ್ಯಕ್ರಮಕ್ಕೆ ರಾಜ್ಯದ 31 ಜಿಲ್ಲೆಗಳಿಂದ ಪ್ರತಿನಿಧಿಗಳು ಆಗಮಿಸಲಿದ್ದಾರೆ. ಸಾವಿರಾರು ಮಂದಿ ಗುತ್ತಿಗೆದಾರರು ಪಾಲ್ಗೊಳ್ಲಲಿದ್ದಾರೆ ಎಂದರು.
ಜಿಲ್ಲಾ ಗುತ್ತಿಗೆದಾರರ ಸಂಘದ ಪ್ರದಾನ ಕಾರ್ಯದರ್ಶಿ ಹಾಗೂ ವಕ್ಫ್ ಬೋರ್ಡ್ ಮಾಜಿ ಅಧ್ಯಕ್ಷ ಕೆ.ಅನ್ವರ್ ಭಾಷಾ ಮಾತನಾಡಿ, ಆರ್.ಮಂಜುನಾಥ್ ಅವರಿಗೆ ಗುತ್ತಿಗೆದಾರರ ಸಂಘದ ರಾಜ್ಯಾಧ್ಯಕ್ಷ ಸ್ಥಾನ ಲಭಿಸಿರುವುದು ನಮ್ಮೆಲ್ಲರ ಸೌಭಾಗ್ಯ. ಅಧ್ಯಕ್ಷ ಸ್ಥಾನಕ್ಕೆ ಬೇರೆ ಜಿಲ್ಲೆಗಳ ತೀವ್ರ ಪೈಪೋಟಿ ಇತ್ತು. ಮಂಜುನಾಥ್ ಅವರ ಕಾಳಜಿ, ಸಂಘಟನೆ ಚಾಕಚಕ್ಯತೆ, ಗುತ್ತಿಗೆದಾರರ ಹಿತ ಕಾಯುವ ಗುಣದಿಂದಾಗಿ ಸರ್ವ ಸಮ್ಮತ ಅಧ್ಯಕ್ಷರಾಗಿ ಆಯ್ಕೆ ಮಾಡಲಾಯಿತೆಂದರು.