ಕನ್ನಡಪ್ರಭ ವಾರ್ತೆ ಗುಡಿಬಂಡೆ
ತಾಲೂಕಿನ ತೀಲುಕುಂಟಹಳ್ಳಿ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ಶಾಲಾ ಸಮವಸ್ತ್ರ ಹಾಗೂ ಬ್ಯಾಂಡ್ ಸೆಟ್ ವಿತರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸರ್ಕಾರಿ ಶಾಲೆಗಳಿಗೆ ದಾನಿಗಳು ವಿವಿಧ ಬಗೆಯ ನೆರವು ನೀಡುವುದರಿಂದ ಶಾಲೆಗಳ ಮೂಲಸೌಕರ್ಯ ಮತ್ತು ಶೈಕ್ಷಣಿಕ ವಾತಾವರಣವನ್ನು ಮತ್ತಷ್ಟು ಉತ್ತಮಪಡಿಸಲು ಸಾಧ್ಯವಾಗುತ್ತದೆ. ಹಣ ಸಂಪಾದಿಸುವ ಸಾಮರ್ಥ್ಯ ಎಲ್ಲರಿಗೂ ಇರಬಹುದು. ಆದರೆ ಅದರಲ್ಲಿ ಒಂದು ಭಾಗವನ್ನು ಸಮಾಜದ ಒಳಿತಿಗಾಗಿ ನೀಡುವ ಮನೋಭಾವ ಎಲ್ಲರಲ್ಲೂ ಇರುವುದಿಲ್ಲ. ಸರ್ಕಾರಿ ಶಾಲೆಗಳ ಅಗತ್ಯೆತೆಗಳನ್ನು ಅರಿತು ದಾನಿಗಳು ನೆರವಿನ ಹಸ್ತ ಚಾಚುವುದು ಶ್ಲಾಘನೀಯ ಕಾರ್ಯವಾಗಿದೆ ಎಂದು ಹೇಳಿದರು.
ಗ್ರಾಮೀಣ ಭಾಗದ ಸರ್ಕಾರಿ ಶಾಲೆಗಳಲ್ಲಿ ಓದುತ್ತಿರುವ ಮಕ್ಕಳಿಗೆ ಅಗತ್ಯ ಸೌಲಭ್ಯಗಳು ದೊರೆತಾಗ ಅವರಲ್ಲಿ ಆತ್ಮವಿಶ್ವಾಸ ಹೆಚ್ಚುತ್ತದೆ. ದಾನಿಗಳು ಶಾಲೆಗಳ ಅಭಿವೃದ್ಧಿ ಕಾರ್ಯಗಳಲ್ಲಿ ಕೈಜೋಡಿಸಿದರೆ ವಿದ್ಯಾರ್ಥಿಗಳಿಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸಲು ಸಾಧ್ಯವಾಗುತ್ತದೆ. ಶಿಕ್ಷಕರು ಮಕ್ಕಳಿಗೆ ಪಠ್ಯಕ್ರಮದ ಜ್ಞಾನ ನೀಡುವುದರ ಜತೆಗೆ ಉತ್ತಮ ಸಂಸ್ಕಾರ, ಶಿಸ್ತು, ಮಾನವೀಯತೆ ಹಾಗೂ ದೇಶದ ಬಗ್ಗೆ ಜವಾಬ್ದಾರಿಯ ಭಾವನೆಯನ್ನು ಬೆಳೆಸಬೇಕು. ಶಾಲಾ ಹಂತದಲ್ಲಿಯೇ ಮಕ್ಕಳನ್ನು ಉತ್ತಮ ನಾಗರಿಕರನ್ನಾಗಿ ರೂಪಿಸುವ ಜವಾಬ್ದಾರಿ ಶಿಕ್ಷಕರು ಹಾಗೂ ಸಮಾಜದ ಮೇಲಿದೆ ಎಂದರು.ಇನ್ನೂ ಶಾಸಕ ಸ್ಥಾನವನ್ನು ವೈಯಕ್ತಿಕ ಲಾಭಕ್ಕಾಗಿ ಬಳಸಿಕೊಂಡಿಲ್ಲ. ಜನರ ಸೇವೆಯ ಉದ್ದೇಶದಿಂದಲೇ ರಾಜಕೀಯಕ್ಕೆ ಬಂದಿದ್ದು, ಕ್ಷೇತ್ರದ ಜನರೊಂದಿಗೆ ನಿರಂತರವಾಗಿ ಬೆರೆತು ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಸಿಕೊಂಡಿದ್ದೇನೆ. ನಾನು ಇರುವಷ್ಟು ದಿನ ಕಾಂಗ್ರೆಸ್ ಪಕ್ಷದಲ್ಲೇ ಇರುತ್ತೇನೆ. ಯಾವುದೇ ಕಾರಣಕ್ಕೂ ಬೇರೆ ಪಕ್ಷಕ್ಕೆ ಹೋಗುವುದಿಲ್ಲ. ನಾನು ಶಾಸಕನಾಗಿರುವುದು ನನ್ನ ಜೀವನಕ್ಕಾಗಿ ಅಲ್ಲ. ಶಾಸಕ ಸ್ಥಾನವನ್ನು ಎಂದಿಗೂ ದುರ್ಬಳಕೆ ಮಾಡಿಕೊಂಡಿಲ್ಲ. ನನ್ನ ಕ್ಷೇತ್ರದ ಜನರಿಗೆ ನಿರಂತರವಾಗಿ ಸಮಾಜ ಸೇವೆ ಮಾಡುತ್ತಾ ಬಂದಿದ್ದೇನೆ ಎಂದರು.
ಈ ವೇಳೆ ಬಿಇಒ ಕಾಳೇಗೌಡ, ಆರಕ್ಷಕ ವೃತ್ತ ನಿರೀಕ್ಷಕ ಮುನಿಕೃಷ್ಣ, ಪೆರೇಸಂದ್ರ ಅರಕ್ಷಕ ಉಪನಿರೀಕ್ಷಕಿ ಗುಣವತಿ, ಮುಖಂಡರಾದ ನಾರಾಯಣಪ್ಪ, ಎಂ.ವಿ. ಕೃಷ್ಣಪ್ಪ, ನಂಜುಂಡ, ಅಕ್ಕಲರೆಡ್ಡಿ, ಅಶ್ವತ್ಥಪ್ಪ, ರಮೇಶ್, ಮಂಜುನಾಥ್, ದೇವರಾಜು ಸೇರಿದಂತೆ ಹಲವರು ಉಪಸ್ಥಿತರಿದ್ದರು.