ಕನ್ನಡಪ್ರಭ ವಾರ್ತೆ ಮಂಗಳೂರು
ಮಹತ್ವಕಾಂಕ್ಷೆಯ ಸಹಕಾರಿ ಕ್ಷೇತ್ರವನ್ನು ಇನ್ನಷ್ಟು ಅಭಿವೃದ್ಧಿಗೊಳಿಸುವ ಸಲುವಾಗಿ ಸ್ವಸಹಾಯ ಗುಂಪುಗಳು, ಮಹಿಳಾ ಸ್ವಾವಲಂಬನೆ, ಬಡಜನರಿಗೆ ಸಾಲ ಸೌಲಭ್ಯಗಳ ಸರಳಿಕರಣ, ಸ್ವಸಹಾಯ ಸಂಘಗಳ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಹಿರಿಯ ಸಹಕಾರಿ ಧುರೀಣ, ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಅಧ್ಯಕ್ಷ ಡಾ. ಎಂ. ಎನ್. ರಾಜೇಂದ್ರ ಕುಮಾರ್ ಅವರು ಪತ್ರಕರ್ತರೊಂದಿಗೆ ಸಂವಾದ ಸಭೆಯನ್ನು ಶನಿವಾರ ಕಾರ್ಕಳದ ದಾನಶಾಲೆ ಬಾಹುಬಲಿ ಪ್ರವಚನ ಮಂದಿರದಲ್ಲಿ ನಡೆಸಿದರು.ಈ ಸಂದರ್ಭದಲ್ಲಿ ಮಾತನಾಡಿದ ಡಾ. ಎಂ. ಎನ್. ರಾಜೇಂದ್ರ ಕುಮಾರ್, ಕೇಂದ್ರ ಸರ್ಕಾರ ಗ್ರಾಮೀಣ ಮಟ್ಟದಲ್ಲಿರುವ ಸಹಕಾರಿ ಬ್ಯಾಂಕ್ಗಳಿಗೆ ಸರ್ಕಾರಿ ಸಾಲ ಸವಲತ್ತುಗಳನ್ನು ನೀಡುವ ಜವಾಬ್ದಾರಿ ವಹಿಸಿದಲ್ಲಿ ಸೂಕ್ತ ಹಾಗೂ ಸಮರ್ಪಕವಾಗಿ ನಿರ್ವಹಿಸಬಹುದಾಗಿದೆ. ಇದರಿಂದಾಗಿ ಸರ್ಕಾರಿ ಸಾಲ ಸವಲತ್ತುಗಳು ಗ್ರಾಮದ ಕಟ್ಟ ಕಡೆಯ ವ್ಯಕ್ತಿಗಳಿಗೂ ಸಿಗುವಂತಾಗಲಿದೆ. ಸಹಕಾರಿ ಕ್ಷೇತ್ರದಲ್ಲಿ ಸಾಲ ಪಡೆದುಕೊಂಡಿರುವ ಬಡ ವರ್ಗದ ಜನತೆ ನಿಷ್ಠಾವಂತರಾಗಿ ಶೇ. ನೂರರಷ್ಟು ಸಾಲ ಮರುಪಾವತಿ ಮಾಡುತ್ತಿರುವುದರಿಂದ ಸಹಕಾರಿ ಕ್ಷೇತ್ರ ಪ್ರಗತಿಯತ್ತ ಸಾಗಲು ಕಾರಣವಾಗಿದೆ ಎಂದರು.ಸಹಕಾರಿ ಕ್ಷೇತ್ರದಲ್ಲಿ ಮಹಿಳೆಯರು ಹೆಚ್ಚಾಗಿ ತಮ್ಮನ್ನು ತೊಡಗಿಸಿ ಕೊಂಡಿರುವುದರಿಂದ ಇಂದು ಮಹಿಳೆಯರು ವಿವಿಧ ಕ್ಷೇತ್ರಗಳಲ್ಲಿ ಗುರುತಿಸಿಕೊಳ್ಳುವುದರ ಜೊತೆಗೆ ಸ್ವಾವಲಂಬಿ ಬದುಕು ನಡೆಸಲು ಸಹಕಾರ ಕ್ಷೇತ್ರ ಸಹಕಾರಿಯಾಗಿದೆ. ಹೊರ ಜಿಲ್ಲೆಗಳ ಸಣ್ಣ ಹಾಗೂ ಭಾರಿ ಉದ್ಯಮಗಳಿಗೆ, ಸಕ್ಕರೆ ಕಾರ್ಖಾನೆಗಳಿಗೆ ಸಾಲ ನೀಡುತ್ತಿದೆ. ಸಹಕಾರಿ ಬ್ಯಾಂಕ್ ಗಳು ರಾಷ್ಟ್ರೀಕೃತ ಬ್ಯಾಂಕ್ಗಳಂತೆ ಉದ್ಯಮ, ಕೈಗಾರಿಕೆಗಳಿಗೂ ಸಾಲ ನೀಡುವ ಮಟ್ಟಕ್ಕೆ ಬೆಳೆಯುವಂತಾಗಿದೆ ಎಂದರು.ಈ ಸಂದರ್ಭದಲ್ಲಿ ಎಸ್ಸಿಡಿಸಿಸಿ ಬ್ಯಾಂಕ್ ನಿರ್ದೇಶಕರಾದ ಇರ್ವತ್ತೂರು ಭಾಸ್ಕರ್ ಕೋಟ್ಯಾನ್, ಶಶಿಕುಮಾರ್ ರೈ ಬಾಲ್ಯೋಟ್ಟು, ನವೋದಯ ಗ್ರಾಮ ವಿಕಾಸ ಚಾರಿಟೇಬಲ್ ಟ್ರಸ್ಟ್ ನಿರ್ದೇಶಕ ಮೇಘರಾಜ್ ಜೈನ್, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪೂರ್ಣಿಮಾ ಶೆಟ್ಟಿ, ಕಾರ್ಕಳ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಮೊಹಮ್ಮದ್ ಶರೀಫ್, ಪದಾಧಿಕಾರಿಗಳು ಇದ್ದರು.