- 5 ಪೈಪ್ ಲೈನ್ ಬಳಸಿ ಬೆಂಕಿ ನಂದಿಸುವ ಕಾರ್ಯ: ಆಯುಕ್ತೆ ರೇಣುಕಾ ಹೇಳಿಕೆ
- ಘಟಕ ಸ್ಥಳಾಂತರಕ್ಕೆ ಆಗ್ರಹಿಸಿ ಸ್ಥಳೀಯರ ಪ್ರತಿಭಟನೆ ಹಿನ್ನೆಲೆ ಸ್ಥಳಕ್ಕೆ ಭೇಟಿ - - - ಕನ್ನಡಪ್ರಭ ವಾರ್ತೆ, ದಾವಣಗೆರೆ
ತಾಲೂಕಿನ ಆವರಗೊಳ್ಳದಲ್ಲಿ ಮಹಾನಗರ ಪಾಲಿಕೆ ವತಿಯಿಂದ ನಿರ್ವಹಿಸುತ್ತಿರುವ ಘನತ್ಯಾಜ್ಯ ವಿಲೇವಾರಿ ಘಟಕ ಸ್ಥಳಾಂತರಕ್ಕೆ ಆಗ್ರಹಿಸಿ ಪ್ರತಿಭಟನೆ ನಡೆದ ಹಿನ್ನೆಲೆ ಪಾಲಿಕೆ ಸದಸ್ಯರು ಹಾಗೂ ಆಯುಕ್ತೆ ರೇಣುಕಾ ನೇತೃತ್ವದಲ್ಲಿ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಲಾಯಿತು.ಪಾಲಿಕೆ ಮೇಯರ್ ವಿನಾಯಕ್ ಪೈಲ್ವಾನ್, ಸದಸ್ಯರಾದ ಗಡಿಗುಡಾಳ್ ಮಂಜುನಾಥ್, ಕೆ.ಚಮನ್ ಸಾಬ್, ಸೋಗಿ ಶಾಂತಕುಮಾರ್, ಮೀನಾಕ್ಷಿ ಜಗದೀಶ್, ವಿರೋಧ ಪಕ್ಷದ ನಾಯಕ ಪ್ರಸನ್ನಕುಮಾರ್, ಇಟ್ಟುಗುಡಿ ಮಂಜುನಾಥ್, ಜಗದೀಶ್ ಮತ್ತಿತರ ತಂಡವು ಅಧಿಕಾರಿಗಳೊಂದಿಗೆ ತೆರಳಿ ಸ್ಥಿತಿಗತಿ ಪರಿಶೀಲಿಸಿತು.
ಘನತ್ಯಾಜ್ಯ ವಿಲೇವಾರಿಗೆ ಟೆಂಡರ್ ಪ್ರಕ್ರಿಯೆ ನಡೆಯುತ್ತಿದೆ. ರಾಜ್ಯ ಸರ್ಕಾರಕ್ಕೆ ಪತ್ರ ಬರೆದು ಅನುದಾನಕ್ಕೆ ಅನುಮತಿ ಪಡೆಯಲಾಗುವುದು. ಡಂಪಿಂಗ್ ಯಾರ್ಡ್ ಇರುವುದರಿಂದ ಸಮಸ್ಯೆಯಾಗುತ್ತಿದೆ ಎಂಬುದು ಗ್ರಾಮಸ್ಥರ ಅಳಲು. ಮುಂಬರುವ ದಿನಗಳಲ್ಲಿ ಸಮಸ್ಯೆ ಆಗದಂತೆ ಕಾರ್ಯನಿರ್ವಹಿಸುವಂತೆ ಸಂಬಂಧಪಟ್ಟವರಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ ಎಂದು ಮಾಹಿತಿ ನೀಡಿದರು.
ಉತ್ತರ ಭಾಗದಲ್ಲಿ ತ್ಯಾಜ್ಯ ವಿಲೇವಾರಿ ಘಟಕ ಸ್ಥಾಪನೆ ಕುರಿತಂತೆ ಜಾಗ ಪರಿಶೀಲನೆ ನಡೆಸಲಾಗುತ್ತಿದೆ. ಒಂದೇ ಕಡೆ ತ್ಯಾಜ್ಯ ಹಾಕುತ್ತಿರುವುದರಿಂದ ಸಹಜವಾಗಿಯೇ ಗ್ರಾಮಸ್ಥರಲ್ಲಿ ಆತಂಕ ಶುರುವಾಗಿದೆ. ಇನ್ನೊಂದು ಕಡೆ ಘಟಕ ಆರಂಭಿಸಿದರೆ ಸಮಸ್ಯೆಗೆ ಪರಿಹಾರ ಸಿಗಲಿದೆ. ಈ ನಿಟ್ಟಿನಲ್ಲಿಯೂ ಕಾರ್ಯೋನ್ಮುಖರಾಗಿದ್ದೇವೆ ಎಂದು ತಿಳಿಸಿದರು.ಪಾಲಿಕೆ ಸದಸ್ಯ ಗಡಿಗುಡಾಳ್ ಮಂಜುನಾಥ್ ಮಾತನಾಡಿ, ಯಾರೋ ಕಿಡಿಗೇಡಿಗಳು ಬೆಂಕಿ ಹಚ್ಚಿರುವುದರಿಂದ ಸಮಸ್ಯೆ ಆಗಿದೆ. ರಾತ್ರಿವೇಳೆ ಗಾಳಿ ಹೆಚ್ಚಿರುವ ಕಾರಣ ಬೆಂಕಿ ತಕ್ಷಣವೇ ನಂದಿಸಲು ಆಗದು. ಈ ಕಾರಣಕ್ಕಾಗಿ ಈಗಾಗಲೇ ಐದು ಕಡೆಗಳಲ್ಲಿ ಪೈಪ್ ಲೈನ್ ಮೂಲಕ ಬೆಂಕಿ ನಂದಿಸುವ ಕಾರ್ಯ ನಡೆಯುತ್ತಿದೆ. ಗಾಳಿ ಹೆಚ್ಚಿರುವ ಕಾರಣ ಧೂಳು ಬರುತ್ತಿದ್ದು, ಜನರಿಗೆ ಸಮಸ್ಯೆ ಆಗುತ್ತಿರುವುದು ಗಮನಕ್ಕೆ ಬಂದಿದೆ. ಆದಷ್ಟು ಬೇಗ ಪರಿಹರಿಸಲಾಗುವುದು ಎಂದರು.
ದಾವಣಗೆರೆ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಅವರ ಗಮನಕ್ಕೂ ಈ ವಿಚಾರ ತರಲಾಗಿದೆ. ಆದಷ್ಟು ಬೇಗ ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಅಧಿಕಾರಿಗಳು ಕಾರ್ಯೋನ್ಮುಖ ಆಗುವಂತೆ ಸಚಿವರು ಸೂಚನೆ ನೀಡಿದ್ದಾರೆ ಎಂದು ಹೇಳಿದರು.- - - -15ಕೆಡಿವಿಜಿ35ಃ:
ದಾವಣಗೆರೆ ತಾಲೂಕು ಆವರಗೊಳ್ಳದಲ್ಲಿನ ಘನತ್ಯಾಜ್ಯ ವಿಲೇವಾರಿ ಘಟಕಕ್ಕೆ ಪಾಲಿಕೆ ಸದಸ್ಯರು, ಆಯುಕ್ತೆ ರೇಣುಕಾ ನೇತೃತ್ವದಲ್ಲಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.