ದೇಶದಲ್ಲೇ ಅತೀ ದೊಡ್ಡ ಭೂಗತ ದ್ರವೀಕೃತ ಪೆಟ್ರೋಲಿಯಂ ಅನಿಲ(ಎಲ್ಪಿಜಿ) ಸ್ಥಾವರವನ್ನು ಮಂಗಳೂರಿನಲ್ಲಿ ಯಶಸ್ವಿಯಾಗಿ ಸ್ಥಾಪಿಸಲಾಗಿದೆ. ಈ ಭೂಗತ ಸುರಂಗದಲ್ಲಿ 80 ಸಾವಿರ ಮೆಟ್ರಿಕ್ ಟನ್ ಎಲ್ಪಿಜಿ ಅನಿಲವನ್ನು ಸಂಗ್ರಹಿಸುವುದು ಸಾಧ್ಯವಾಗಲಿದೆ.
ಕನ್ನಡಪ್ರಭ ವಾರ್ತೆ ಮಂಗಳೂರು
ದೇಶದಲ್ಲೇ ಅತೀ ದೊಡ್ಡ ಭೂಗತ ದ್ರವೀಕೃತ ಪೆಟ್ರೋಲಿಯಂ ಅನಿಲ(ಎಲ್ಪಿಜಿ) ಸ್ಥಾವರವನ್ನು ಮಂಗಳೂರಿನಲ್ಲಿ ಯಶಸ್ವಿಯಾಗಿ ಸ್ಥಾಪಿಸಲಾಗಿದೆ. ಈ ಭೂಗತ ಸುರಂಗದಲ್ಲಿ 80 ಸಾವಿರ ಮೆಟ್ರಿಕ್ ಟನ್ ಎಲ್ಪಿಜಿ ಅನಿಲವನ್ನು ಸಂಗ್ರಹಿಸುವುದು ಸಾಧ್ಯವಾಗಲಿದೆ.ಭೂಗತ ಸಂಗ್ರಹಣ ವ್ಯವಸ್ಥೆಯ ಸುರಕ್ಷತೆ ಪರಿಶೀಲಿಸಲು ಕಳೆದ ಮೇ 9 ರಿಂದ ಜೂನ್ 6 ರ ವರೆಗೆ ಕ್ಯಾವರ್ನ್ ಆಕ್ಸೆಪ್ಟೆನ್ಸ್ ಟೆಸ್ಟ್-ಕ್ಯಾಟ್ ನಡೆದಿರುವ ಬಗ್ಗೆ ಈ ಕಾಮಗಾರಿ ವಹಿಸಿರುವ ಮೇಘಾ ಎಂಜಿನಿಯರಿಂಗ್ನ ತಜ್ಞರು ತಿಳಿಸಿದ್ದಾರೆ.ಯಾವುದೇ ತುರ್ತು ಸನ್ನಿವೇಶಗಳಲ್ಲಿ ದೇಶಕ್ಕೆ ಬೇಕಾದ ಅನಿಲ ಬೇಡಿಕೆಯನ್ನು ಈಡೇರಿಸಲು ಈ ಹೊಸ ಸೌಲಭ್ಯ ನೆರವಾಗಲಿದೆ. ಹಾಗಾಗಿ ಕೇಂದ್ರ ಸರ್ಕಾರ ಮಂಗಳೂರಿನಲ್ಲಿ ಇದನ್ನು ಸ್ಥಾಪಿಸಿದೆ. ವಿಶಾಖಪಟ್ಟಣಂನಲ್ಲಿ ಕೂಡಾ ಇದೇ ರೀತಿಯ ಭೂಗತ ಸಂಗ್ರಹಣಾಗಾರವಿದೆ.ಈಗಾಗಲೇ ಮಂಗಳೂರಿನ ಪೆರ್ಮುದೆ(1.5 ಲಕ್ಷ ಮೆಟ್ರಿಕ್ ಟನ್) ಹಾಗೂ ಪಾದೂರಿನಲ್ಲಿ(2.5 ಲಕ್ಷ ಮೆಟ್ರಿಕ್ ಟನ್) ಭೂಗತ ತೈಲ ಸಂಗ್ರಹಣಾಗಾರಗಳಿವೆ. ಇದು ಮೂರನೇ ಭೂಗತ ಸುರಂಗವಾಗಿದ್ದು, ಇದರಲ್ಲಿ ಎಲ್ಪಿಜಿ ಸಂಗ್ರಹಿಸಲಾಗುವುದು.
ಸದ್ಯ ವಿಶಾಖ ಪಟ್ಟಣಂನಲ್ಲಿ ನಿರ್ಮಿಸಿರುವ ಎಲ್ಪಿಜಿ ಸಂಗ್ರಹಣಾಗಾರ 60 ಸಾವಿರ ಟನ್ನದ್ದು. ಮಂಗಳೂರಿನದ್ದು 80 ಸಾವಿರ ಮೆ.ಟನ್ನದ್ದಾಗಿದ್ದು ದೇಶದಲ್ಲೇ ಅತಿ ದೊಡ್ಡದು. 2018ರಲ್ಲಿ ಕೇಂದ್ರ ಸರ್ಕಾರ ಈ ಯೋಜನೆಗೆ ಮುಂದಾಗಿದ್ದು 2019 ರಿಂದ ಕಾಮಗಾರಿ ಆರಂಭಿಸಲಾಗಿದೆ. ನೆಲದಿಂದ 500 ಮೀಟರ್ನಷ್ಟುಆಳದಲ್ಲಿ ದೊಡ್ಡ ಕಲ್ಲನ್ನು ಕೊರೆದು ಸುರಂಗ ನಿರ್ಮಾಣ ಮಾಡಲಾಗಿದೆ. ಇದಕ್ಕಾಗಿ 800 ಕೋ.ರು. ವೆಚ್ಚ ಮಾಡಲಾಗಿದೆ. ಈ ಸಂಗ್ರಹಣಾಗಾರಕ್ಕೆ ಸಮುದ್ರದಲ್ಲಿರುವ ತೇಲು ಜೆಟ್ಟಿ ಮೂಲಕ ಮುಂದಿನ ದಿನಗಳಲ್ಲಿ ಅನಿಲವನ್ನು ಪಂಪಿಂಗ್ ಮಾಡಲಾಗುತ್ತದೆ. ಅದಕ್ಕೆ ಬೇಕಾದ ಪೈಪ್ಲೈನ್ ನಿರ್ಮಾಣವೂ ಪೂರ್ಣಗೊಂಡಿದೆ.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.