ಕನ್ನಡಪ್ರಭ ವಾರ್ತೆ ಬೆಳಗಾವಿ
ಸಿಎಂ ಸಿದ್ದರಾಮಯ್ಯನವರು ಒಳ ಮೀಸಲಾತಿ ಜಾರಿ ವಿಚಾರದಲ್ಲಿ ಮಾನ್ಯ ಸುಪ್ರೀಂ ಕೋರ್ಟಿನ ಆದೇಶ ಸರಿಯಾಗಿ ಪಾಲನೆ ಮಾಡಿದಂತೆ ಕಾಣುತ್ತಿಲ್ಲ ಎಂದು ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ತಿಳಿಸಿದ್ದಾರೆ.ಪರಿಶಿಷ್ಟ ಪಂಗಡ ಮತ್ತು ಪರಿಶಿಷ್ಟ ಜಾತಿಯ ಜನರ ಬಹುದಿನಗಳ ಬೇಡಿಕೆಯ ಮೀಸಲಾತಿ ಹೆಚ್ಚಳ ಮಾಡಿ ಒಳ ಮೀಸಲಾತಿ ನೀಡಿದ್ದ ಹಿಂದಿನ ರಾಜ್ಯ ಬಿಜೆಪಿ ಸರ್ಕಾರದ ನಿಲುವನ್ನು ಪ್ರಶ್ನಿಸಿದ್ದ ಸಿಎಂ ಸಿದ್ದರಾಮಯ್ಯನವರು, ನ್ಯಾ.ನಾಗಮೋಹನ್ ದಾಸ್ ವರದಿಯನ್ನೂ ಸರಿಯಾಗಿ ಪಾಲಿಸಿಲ್ಲ ಎಂದು ಪ್ರಕಟಣೆಯಲ್ಲಿ ಆಕ್ಷೇಪಿಸಿದ್ದಾರೆ. ನ್ಯಾ.ನಾಗಮೋಹನ್ ದಾಸ್ ವರದಿಯಲ್ಲಿ ಎ.ಬಿ.ಸಿ.ಡಿ.ಇ ಎಂದು 5 ವರ್ಗಗಳನ್ನು ಮಾಡಿದ್ದರು. ಅದನ್ನು ಇವರು ಎ.ಬಿ.ಸಿ.ಎಂದು ಮಾಡಿದ್ದಾರೆ. ನರೇಂದ್ರ ಸ್ವಾಮಿ ಮೊದಲಾದವರ ಮೂಲಕ ನೀವೇ ವಿಂಗಡಣೆ ಮಾಡುವುದಾದರೆ, ಸರ್ಕಾರ ಮತ್ತು ಸಿದ್ದರಾಮಯ್ಯನವರಿಗೆ ಸದಾಶಿವ ಆಯೋಗ, ನ್ಯಾ.ನಾಗಮೋಹನ್ ದಾಸ್ ಆಯೋಗಕ್ಕೆ ನೂರಾರು ಕೋಟಿ ರು. ಖರ್ಚು ಮಾಡುವ ಅವಶ್ಯಕತೆ ಏನಿತ್ತು ಎಂದು ಪ್ರಶ್ನಿಸಿದ್ದಾರೆ.
ಹಿಂದೆ ಬಿಜೆಪಿ ಸರ್ಕಾರ ಅಧಿಕಾರದಲ್ಲಿ ಬಸವರಾಜ ಬೊಮ್ಮಾಯಿ ಅವರು ಪರಿಶಿಷ್ಟ ಜಾತಿ, ಪಂಗಡಗಳ ಕುರಿತು ಒಂದು ದಿಟ್ಟ ನಿರ್ಧಾರ ಮಾಡಿದ್ದರು. ಅವತ್ತು ಬೊಮ್ಮಾಯಿಯವರು ಪರಿಶಿಷ್ಟ ಜಾತಿಗೆ ಶೇ.15 ಇದ್ದುದನ್ನು ಶೇ.17ಕ್ಕೆ ಏರಿಸಿದ್ದರು. ಪರಿಶಿಷ್ಟ ಪಂಗಡಕ್ಕೆ ಶೇ.3 ಇದ್ದುದನ್ನು ಶೇ.7ಕ್ಕೆ ಏರಿಕೆ ಮಾಡಿದ್ದರು. ಆಗ ವಿಪಕ್ಷ ನಾಯಕರಾಗಿದ್ದ ಇದೇ ಸಿದ್ದರಾಮಯ್ಯನವರು, ಒಳ ಮೀಸಲಾತಿಯ ಬಿಜೆಪಿ ಸರ್ಕಾರದ ನಿರ್ಧಾರವನ್ನು ಯಾವುದೂ ಅನುಷ್ಠಾನ ಆಗಿಲ್ಲ. ಇವರು ಬೂಟಾಟಿಕೆ- ನಾಟಕ ಮಾಡುತ್ತಿದ್ದಾರೆ ಎಂದು ರಾಜ್ಯಾದ್ಯಂತ ಓಡಾಡಿ ಅಪಪ್ರಚಾರ ಮಾಡಿದ್ದರು ಎಂದು ಟೀಕಿಸಿದರು.ವಿಧಾನಸೌಧದಲ್ಲಿ ಸಿಎಂ ಸಿದ್ದರಾಮಯ್ಯನವರು ಏಕೆ ಓಡಿ ಹೋಗುವ ಕೆಲಸ ಮಾಡಿದ್ದಾರೆ. ವಿಪಕ್ಷ ನಾಯಕರು ಚರ್ಚೆ ಮಾಡಬೇಕೆಂದು ಕೋರಿದರೂ ಪಲಾಯನ ಮಾಡಿದ್ದಾರೆ. ಈ ಮೂಲಕ ಸದನಕ್ಕೆ ಅಗೌರವ ತೋರಿದ್ದಾರೆ. ಸದಾಶಿವ ಆಯೋಗವನ್ನು ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ಘೋಷಣೆ ಮಾಡಿತ್ತೇ ವಿನಃ ಆ ಆಯೋಗಕ್ಕೆ ಹಣಕಾಸಿನ ನೆರವನ್ನು ಕೊಟ್ಟು ವ್ಯವಸ್ಥೆ ಮಾಡಿದ್ದು, ಯಡಿಯೂರಪ್ಪ ಅವರ ನೇತೃತ್ವದ ಹಿಂದಿನ ಬಿಜೆಪಿ ಸರಕಾರ. ಅದನ್ನು ತಾರ್ಕಿಕ ಅಂತ್ಯಕ್ಕೆ ಒಯ್ಯಲು ಬಸವರಾಜ ಬೊಮ್ಮಾಯಿಯವರು ಮುಂದಾಗಿದ್ದರು. ದತ್ತಾಂಶ ಇಟ್ಟುಕೊಂಡು ವರ್ಗೀಕರಣ ಮಾಡಬೇಕಿತ್ತು. ಒಳ ಮೀಸಲಾತಿ ಜಾರಿ ವಿಚಾರದಲ್ಲಿ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ ಹಿಂದುಳಿದಿರುವಿಕೆ ವಿಚಾರವನ್ನು ಇಟ್ಟುಕೊಂಡು ಒಳ ಮೀಸಲಾತಿ ಕೊಡಬೇಕೇ ಹೊರತು ಜನಸಂಖ್ಯೆ ಆಧಾರದಲ್ಲಿ ಅಲ್ಲ ಎಂದು ಪ್ರತಿಪಾದಿಸಿದ್ದಾರೆ.
ಮುಖ್ಯಮಂತ್ರಿಗಳು ರಾಜ್ಯದ ಜನತೆಗೆ ಪ್ರಾಮಾಣಿಕ ಉತ್ತರ ಕೊಡಬೇಕು. ಹಿಂದೆ ಬಿಜೆಪಿ ಸರ್ಕಾರ ಶೇ.17 ಮೀಸಲಾತಿ ಕೊಟ್ಟಾಗ ಅಪಪ್ರಚಾರ ಮಾಡಿದ್ದೀರಿ. ಈಗ ಅದೇ ಶೇ.17 ಅನ್ನು ಮುಂದಿಟ್ಟಿದ್ದೀರಲ್ಲವೇ? ಬಿಜೆಪಿ ಸರ್ಕಾರ ಮಾಡಿದ್ದನ್ನು ಈಗಲಾದರೂ ಒಪ್ಪಿಕೊಳ್ಳಿ ಎಂದು ಆಗ್ರಹಿಸಿದರು. ಸಿದ್ದರಾಮಯ್ಯನವರು ಸತ್ಯಾಂಶವನ್ನು ಜನತೆಗೆ ತಿಳಿಸಲಿ, ಅಲ್ಲದೇ ರಾಜ್ಯದ ಜನರ ಕ್ಷಮೆ ಕೇಳಬೇಕು ಎಂದು ಅವರು ಒತ್ತಾಯಿಸಿದರು. ದತ್ತಾಂಶವಿಲ್ಲದೇ ಹೇಗೆ ಇದನ್ನು ಮಾಡಿದ್ದಾರೆ ಎಂಬುದೆ ಯಕ್ಷೆ ಪ್ರಶ್ನೆಯಾಗಿದೆ ಎಂದು ಹರಿಹಾಯದಿದ್ದಾರೆ.